ಬ್ಯಾನರ್‌ ಗಲಾಟೆ: ತಪ್ಪಿತಸ್ಥರಿಗೆ ಕಠಿಣ ಕ್ರಮ- ಸಂಸದ ತುಕಾರಾಂ

KannadaprabhaNewsNetwork |  
Published : Jan 03, 2026, 02:45 AM IST
ಕಂಪ್ಲಿಯ ಬಡೇಸಾಹೇಬ್ ದರ್ಗಾಕ್ಕೆ ಸಂಸದ ಇ.ತುಕರಾಮ್ ಬೇಟಿ ನೀಡಿ ಪೂಜೆ ಸಲ್ಲಿಸಿದರು. ಧರ್ಮಗುರು ಸೈಯ್ಯದ್ ಷಾಹ್ ಅಬುಲ್ ಹಸನ್ ಖಾದ್ರಿ ಉರುಫ್ ಆಜಂಪಾ಼ಷಾ ಖಾದ್ರಿ ಸಾಹೇಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಪ್ರಮುಖ ಎಂ.ಸುಧೀರ್ ಇತರರಿದ್ದರು. | Kannada Prabha

ಸಾರಾಂಶ

ಕಲ್ಲು ತೂರಾಟ ಅನಿರೀಕ್ಷಿತವಾಗಿ ನಡೆದ ದುರ್ಘಟನೆಯಾಗಿದೆ.

ಕಂಪ್ಲಿ: ಬಳ್ಳಾರಿಯಲ್ಲಿ ನಡೆದ ಬ್ಯಾನರ್‌ ಗಲಾಟೆ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಅವರ ವಿರುದ್ಧ ಕಾನೂನುಬದ್ಧವಾಗಿ ಸೂಕ್ತ ಹಾಗೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಂಸದ ಇ.ತುಕಾರಾಂ ಸ್ಪಷ್ಟಪಡಿಸಿದರು.

ಪಟ್ಟಣದ ಬಡೇಸಾಹೇಬ್ ದರ್ಗಾಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಲು ತೂರಾಟ ಅನಿರೀಕ್ಷಿತವಾಗಿ ನಡೆದ ದುರ್ಘಟನೆಯಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯ ಕಾರ್ಯದರ್ಶಿ ಈಗಾಗಲೇ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಐಜಿಪಿ ವರ್ತಿಕಾ ಕಾಟೀಯಾರ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯನ್ನು ಭಯಮುಕ್ತವಾಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಬಳ್ಳಾರಿ ಬಂಗಾರದ ತಟ್ಟೆಯಂತಹ ಮಹತ್ವದ ಪ್ರದೇಶವಾಗಿದ್ದು, ಇಲ್ಲಿ ಶಾಂತಿ, ಸೌಹಾರ್ದ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ವರ್ಷಗಳ ಕಾಲ ಸ್ಥಿರವಾಗಿರಲಿದ್ದು, ಜನರಿಗೆ ನೀಡಿರುವ ಭರವಸೆಯಂತೆ ಆಡಳಿತ ನಡೆಸುತ್ತಿದೆ. ಹೈಕಮಾಂಡ್, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಎಲ್ಲರೂ ಒಟ್ಟಾಗಿ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದರು ತಿಳಿಸಿದರು.

ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿದ ಅವರು, ಸಂಸದರ ಅನುದಾನದಿಂದ ₹5 ಕೋಟಿಯನ್ನು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹80 ಲಕ್ಷದಂತೆ ವಿತರಿಸಲಾಗುವುದು. ಈ ಅನುದಾನದಡಿ ರೈತ ಸಂಪರ್ಕ ಕೇಂದ್ರಗಳಿಗೆ ಪ್ರೊಜೆಕ್ಟರ್‌, ಏಳು ಪ್ರೌಢಶಾಲೆಗಳಿಗೆ ಡಿಜಿಟಲ್ ಗ್ರಂಥಾಲಯ, ಕ್ರೀಡಾಪಟುಗಳಿಗೆ ₹1 ಲಕ್ಷ ಮೌಲ್ಯದ ಕ್ರೀಡೋಪಕರಣ, ಶ್ರವಣ ಮತ್ತು ವಾಕ್ ಚೇತನರಿಗೆ ಅಗತ್ಯ ಸಹಾಯಕ ಸಾಧನಗಳನ್ನು ಒದಗಿಸಲಾಗುವುದು ಎಂದು ವಿವರಿಸಿದರು.

ಹೊಸಪೇಟೆಯಿಂದ ಕರ್ನಾಟಕ ಗಡಿವರೆಗೆ ಐದು ಪ್ಲೈಓವರ್‌ಗಳನ್ನು ಬದಲಿಸುವ ಯೋಜನೆ ರೂಪಿಸಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಯೋಜನೆಗೆ ಹಸಿರು ನಿಶಾನೆ ತೋರಿದ್ದಾರೆ. ಜೊತೆಗೆ ಗಂಗಾವತಿ- ದರೋಜಿ ವಯಾ ಕಂಪ್ಲಿ ಬ್ರಾಡ್‌ ಗೇಜ್ ರೈಲು ಸಂಪರ್ಕ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನದ ಕುರಿತು ಚರ್ಚೆ ನಡೆಸಬೇಕಿದೆ ಎಂದು ಹೇಳಿದರು.

ಬಡೇಸಾಹೇಬ್ ದರ್ಗಾ ಹಿಂದೂ- ಮುಸ್ಲಿಮರ ಭಾವೈಕ್ಯತೆಯ ಪ್ರತೀಕವಾಗಿದೆ. ಶಾಂತಿ ಮತ್ತು ಸೌಹಾರ್ದದ ಸಂದೇಶವನ್ನು ಸಾರುವ ಕೇಂದ್ರವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಧರ್ಮಗುರು ಸೈಯದ್ ಷಾಹ್ ಅಬುಲ್ ಹಸನ್ ಖಾದ್ರಿ ಉರುಫ್ ಆಜಂಪಾಷಾ ಖಾದ್ರಿ ಸಾಹೇಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಪ್ರಮುಖರಾದ ಎಂ. ಸುಧೀರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ