ರಾಮನಗರ: ಬನ್ನೇರುಘಟ್ಟ ಭಾಗವನ್ನು ಬೆಂಗಳೂರಿನ ಭಾಗವೆಂದು ಪರಿಗಣಿಸಿ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಕೆರೆಗಳನ್ನು ತುಂಬಿಸುವ ಜೊತೆಗೆ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.
ಈ ಭಾಗದಲ್ಲಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನಗೊಂಡಿದೆ. ಕಾವೇರಿ ನೀರು, ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳಿಗಾಗಿ ನಿಮ್ಮ ಮತ ನೀಡಿ ಎಂದು ಕೇಳುತ್ತಿದ್ದೇನೆ. ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿಲ್ಲ. ಇನ್ನು ಕೇಂದ್ರ ಸರ್ಕಾರ ನಮ್ಮ ತೆರಿಗೆ ಹಣದಲ್ಲಿ ಸರಿಯಾದ ಪಾಲನ್ನು ನೀಡುತ್ತಿಲ್ಲ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈ ಭಾಗ ಅಭಿವೃದ್ಧಿಯಾಗಿ ಕೈಗಾರಿಕಾ ಪ್ರದೇಶಗಳು ಬೆಳೆಯಬೇಕು ಎಂಬ ಕಾರಣಕ್ಕೆ ಜಿಗಣಿಗೆ ಮೆಟ್ರೋ ರೈಲು ತರಲು ಸರ್ಕಾರ ಆದೇಶಿಸಿದೆ. ಬಿಜೆಪಿಯವರು ನಿಮಗ್ಯಾಕೆ ಮೆಟ್ರೋ ಎಂದು ಕೇಳುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ ಮಾಡಿದೆ. ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಬಡ ಮನೆಯೊಡತಿಯರಿಗೆ 2 ಸಾವಿರ ಪ್ರೋತ್ಸಾಹ ಧನ ಸಿಗುತ್ತಿದೆ. ಅನಭಾಗ್ಯ ಯೋಜನೆ ಮೂಲಕ 5 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಾವು 10 ಕೆ.ಜಿ ಅಕ್ಕಿ ನೀಡಲು ಕೇಂದ್ರದಿಂದ ಅಕ್ಕಿ ಖರೀದಿಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಮಾರಾಟ ಮಾಡಲು ನಿರಾಕರಿಸಿತು. ಹೀಗಾಗಿ ಅದೇ ದುಡ್ಡನ್ನು ಜನರಿಗೆ ನೀಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದು ತಿಳಿಸಿದರು.ಚುನಾವಣೆ ನಂತರ ಈ ಯೋಜನೆ ಸ್ಥಗಿತವಾಗಲಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕೊಟ್ಟಿದ್ದನ್ನು ಎಂದಿಗೂ ಕಸಿದುಕೊಂಡಿಲ್ಲ. ನಾವು ಬಿಜೆಪಿಯವರಂತೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ, ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದೆಲ್ಲಾ ಸುಳ್ಳು ಹೇಳಿಲ್ಲ. ನಾವು ಕೊಟ್ಟ ಮಾತಿನಂತೆ ನಡೆದು ಬಡವರಿಗೆ ನೆರವಾಗಿದ್ದೇವೆ ಎಂದು ಸುರೇಶ್ ಹೇಳಿದರು.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಂಟಪ ಗ್ರಾಮದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.