ಬಸವಣ್ಣ ಕರ್ನಾಟಕ ಸಾಂಸ್ಕೃತಿಕ ನಾಯಕ ಘೋಷಣೆ: ಬಸವ ಸಂಭ್ರಮ

KannadaprabhaNewsNetwork |  
Published : Jan 26, 2024, 01:46 AM IST
25ಕೆಎಂಎನ್ ಡಿ23ವಿಶ್ವಗುರು ಬಸವಣ್ಣ ಅವರನ್ನು ರಾಜ್ಯಸರ್ಕಾರ ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ನಗರದಲ್ಲಿ ಬಸವ ಸಂಭ್ರಮ ಆಚರಿಸಿದರು. | Kannada Prabha

ಸಾರಾಂಶ

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಮತ್ತು ಲಿಂಗಾಯಿತ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಒಗ್ಗೂಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ವಿಶ್ವಗುರು ಬಸವಣ್ಣ ಅವರನ್ನು ರಾಜ್ಯಸರ್ಕಾರ ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ನಗರದಲ್ಲಿ ಬಸವ ಸಂಭ್ರಮ ಆಚರಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಮತ್ತು ಲಿಂಗಾಯಿತ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಒಗ್ಗೂಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್. ಸಂದೇಶ್ ಮಾತನಾಡಿ, ಜಾತಿ ಮತ್ತು ಧರ್ಮಗಳು ರಾಜಕೀಕರಣಗೊಂಡು ಅಸಮಾನತೆ ಮತ್ತು ಸಂಘರ್ಷ ಉಲ್ಬಣಗೊಳ್ಳುತ್ತಿರುವ ಹೊತ್ತಿನಲ್ಲಿ ರಾಜ್ಯಸರ್ಕಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಉತ್ತಮವಾಗಿದೆ. ಅವರ ತತ್ವ ಸಿದ್ಧಾಂತಗಳನ್ನು ಸಮಸಮಾಜ ನಿರ್ಮಾಣಕ್ಕೆ ಪ್ರಚಾರ ಪಡಿಸುವುದು ಇಂದು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ಸಾಂಸ್ಕೃತಿಕ ನಾಯಕತ್ವ ಘೋಷಣೆಗೆ ಸೀಮಿತವಾಗದೆ ಜನಮನದಲ್ಲಿ ಬಸವಣ್ಣನವರ ವಿಚಾರ ಕ್ರಾಂತಿಗಳನ್ನು ಮೂಡಿಸುವ ಮತ್ತು ಶ್ರಮಿಕ ಸಂಸ್ಕೃತಿಯನ್ನು ಪೋಷಿಸುವ ಕಾರ್ಯ ಆಗಬೇಕಿದೆ. 12 ನೇ ಶತಮಾನದಲ್ಲೇ ಜಾತಿ, ಧರ್ಮ, ಮತ್ತು ಲಿಂಗಭೇದವನ್ನು ಮೀರಿ ಸೃಷ್ಟಿಸಿದ ಅನುಭವಮಂಟಪ ಇಂದಿನ ರಾಜಕೀಯ ವ್ಯವಸ್ಥೆಗೆ ಮಾದರಿಯಾಗಬೇಕು ಎಂದರು.

ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್. ಮಂಜುನಾಥ್ ಮಾತನಾಡಿ, ರಾಜ್ಯಸರ್ಕಾರ ಈ ಹಿಂದೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸುವಂತೆ ಸೂಚಿಸಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಅವರ ಕಾಯಕ ನಿಷ್ಠೆಯನ್ನು ಆಡಳಿತ ವರ್ಗ ಅನುಸರಿಸಬೇಕು ಎಂದು ಹೇಳಿದರು.

ನಂತರ ಸಂಘಟನೆಯ ಮುಖಂಡರು ಜಿಲ್ಲಾಧಿಕಾರಿ ಕಚೇರಿಯಿಂದ ಜಿಪಂ ಕಾವೇರಿ ಸಭಾಂಗಣಕ್ಕೆ ತೆರಳಿ ಡೀಸಿ ಡಾ. ಕುಮಾರ್ ಮತ್ತು ಎಡಿಸಿ ಎಚ್.ಎನ್. ನಾಗರಾಜು ಅವರಿಗೆ ಸರ್ಕಾರದ ಪರವಾಗಿ ಅಭಿನಂದನಾ ಪತ್ರ ಸಲ್ಲಿಸಿದರು.

ಈ ವೇಳೆ ಜಿಪಂ ಮಾಜಿ ಸದಸ್ಯ ಕುಮಾರರಾಜು, ಕಾಯಕಯೋಗಿ ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ್, ವಿವಿಧ ಹಿಂದುಳಿದ ಸಮಾಜದ ಮುಖಂಡರಾದ ಎಂ. ಕೃಷ್ಣ, ಸಿದ್ದಶೆಟ್ಟಿ, ಪ್ರತಾಪ್, ಬಸವರಾಜು, ಪ್ರದೀಪ್, ಆನಂದ್, ದಾಸಪ್ಪ, ಡಿ. ರಮೇಶ್, ಮಂಚಶೆಟ್ಟಿ, ಪುಟ್ಟಸ್ವಾಮಿ, ಹನುಮಂತಯ್ಯ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ