೧೨ನೇ ಶತಮಾನದಲ್ಲಿ ಶರಣರು ರೂಪಿಸಿದ ಸಮಾಜ ನಿಜಕ್ಕೂ ಕ್ರಾಂತಿಕಾರಿ ಸಮಾಜವಾಗಿದ್ದು, ಜಗಜ್ಯೋತಿ ಬಸವಣ್ಣನವರ ಆದರ್ಶಗಳು ಸರ್ವ ಕಾಲಕ್ಕೂ ಬೆಳಕಾಗಿವೆ ಎಂದು ಸಾಹಿತಿ, ಚಿಂತಕ ಚಟ್ನಳ್ಳಿ ಮಹೇಶ್ ಹೇಳಿದರು.
ಅಭಿಮತ । ಬಸವಣ್ಣ ಭಾವಚಿತ್ರ ಮೆರವಣಿಗೆ
ಕನ್ನಡಪ್ರಭ ವಾರ್ತೆ ಭದ್ರಾವತಿ
೧೨ನೇ ಶತಮಾನದಲ್ಲಿ ಶರಣರು ರೂಪಿಸಿದ ಸಮಾಜ ನಿಜಕ್ಕೂ ಕ್ರಾಂತಿಕಾರಿ ಸಮಾಜವಾಗಿದ್ದು, ಜಗಜ್ಯೋತಿ ಬಸವಣ್ಣನವರ ಆದರ್ಶಗಳು ಸರ್ವ ಕಾಲಕ್ಕೂ ಬೆಳಕಾಗಿವೆ ಎಂದು ಸಾಹಿತಿ, ಚಿಂತಕ ಚಟ್ನಳ್ಳಿ ಮಹೇಶ್ ಹೇಳಿದರು.
ನಗರದಲ್ಲಿ ಬುಧವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಮತು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಳೇನಗರದ ಕನಕಮಂಟಪದಲ್ಲಿ ಹಮ್ಮಿಕೊಂಡ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಧುನಿಕತೆಯ ಸ್ಪರ್ಶವಿಲ್ಲದ, ಅಸಮಾನತೆಯಿಂದ ಕೂಡಿರುವ ಕಾಲಘಟ್ಟದಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಕ್ರಾಂತಿಕಾರಿ ಸುಧಾರಣೆ ತಂದವರು ೧೨ನೇ ಶತಮಾನದ ಶರಣರು. ಬಸವಣ್ಣನವರ ಒಂದೊಂದು ವಚನಗಳಲ್ಲೂ ಅದ್ಭುತವಾದ ಪರಿಕಲ್ಪನೆಗಳಿವೆ ಎಂದರು.
ಮುಂದಿನ ದಿನಗಳಲ್ಲಿ ಸರ್ಕಾರ ಬಸವಣ್ಣನವರ ಜನ್ಮದಿನವನ್ನು ವಿಶೇಷವಾಗಿ ಆಚರಿಸಬೇಕು. ಅವರ ಜನ್ಮದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ವಿಚಾರಗೋಷ್ಠಿ, ವಚನ ಗಾಯನ ಸ್ಪರ್ಧೆ, ರಸಪ್ರಶ್ನೆ ಸೇರಿದಂತೆ ವಿಶೇಷ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದರು.
ಬಸವಮಂಟಪದ ಸುಮಾ ಸುನೀಲ್ ಮಾತನಾಡಿ, ಜ್ಞಾನಕ್ಕೆ ಮೊದಲ ಆದ್ಯತೆ ನೀಡಿದವರು, ಕಾಯಕ ಹಾಗೂ ದಾಸೋಹದ ಪರಿಕಲ್ಪನೆ ಮೂಡಿಸಿದವರು ಬಸವಣ್ಣನವರು ಎಂದರು.
ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ವಿ.ಕದಿರೇಶ್, ಬಿ.ಕೆ ಮೋಹನ್, ಲತಾ ಚಂದ್ರಶೇಖರ್, ಚನ್ನಪ್ಪ, ಬಸವರಾಜ ಬಿ. ಆನೇಕೊಪ್ಪ, ಅನುಪಮ ಚನ್ನೇಶ್, ಐ.ವಿ ಸಂತೋಷ್ ಕುಮಾರ್, ಹನುಮಂತಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ತಾಲೂಕು ವೀರಶೈವ ಸಮಾಜ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ (ಗ್ರಾಮಾಂತರ) ಅಧ್ಯಕ್ಷೆ ಸಾಕಮ್ಮ ಮಹೇಶ್, ಸೂಡಾ ಸದಸ್ಯ ಎಚ್. ರವಿಕುಮಾರ್, ಕುವೆಂಪು ವಿವಿ. ಎಂ. ಶಿವಕುಮಾರ್, ಬಿ.ಎನ್ ರಾಜು, ಶಿವುಪಾಟೀಲ್, ಎಸ್. ಮಂಜುನಾಥ್, ಯಲ್ಲಪ್ಪ, ಶಿವಬಸಪ್ಪ ಇತರರು ಇದ್ದರು.
ಅಕ್ಕನ ಬಳಗದ ಸದಸ್ಯರು ಪ್ರಾರ್ಥಿಸಿದರು. ಸಿದ್ದಾರ್ಥ ಅಂಧರ ಕೇಂದ್ರದ ಕಲಾವಿದರು ನಾಡಗೀತೆ ಹಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಿಂದ ಬಸವಣ್ಣನವರ ಭಾವಚಿತ್ರವನ್ನು ಕಲಾತಂಡಗಳೊಂದಿಗೆ ಕನಕಮಂಟಪದವರೆಗೂ ಮೆರವಣಿಗೆ ನಡೆಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.