ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಭವನದಲ್ಲಿ ಬಸವೇಶ್ವರ ಅಧ್ಯಯನ ಪೀಠದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಗುರು ಮತ್ತು ಸಂಸ್ಕೃತಿ ನಾಯಕ ಬಸವೇಶ್ವರರ 893ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆತ್ಮವಿಶ್ವಾಸ, ಶಿಸ್ತಿನ ಜೀವನ, ಪರಿಶ್ರಮ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಯಾವುದೇ ಗುರಿಯನ್ನು ಸಾಧಿಸಲು ಸಾಧ್ಯ. ಈ ಗುರಿ ಸಾಧನೆಗೆ ಮಹಿಳಾ ವಿವಿಯಲ್ಲಿ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿರುವುದು ಸಂತಸದ ಸಂಗತಿ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ವಿ.ಸಿ.ನಾಗಠಾಣ ಮಾತನಾಡಿ, ವಿದ್ಯಾರ್ಥಿನಿಯರು ಬಸವಣ್ಣರ ಆಚಾರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಸೇವೆ ಮಾಡುವ ಜೊತೆಗೆ ಅಕ್ಕಮಹಾದೇವಿಯ ವಿಚಾರಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು.ಜಿಲ್ಲಾ ವೀರಶೈವ ಮಹಾಸಭಾದ ಗೌರವಾಧ್ಯಕ್ಷ ಡಾ.ಬನುದೇವಿ ಸಂಕಣ್ಣವರ ಮಾತನಾಡಿ, ವಿದ್ಯಾರ್ಥಿನಿಯರು ಬಸವಣ್ಣರವರ ವಚನಗಳಲ್ಲಿ ಬಿಂಬಿತವಾಗಿರುವ ಮಹಿಳಾ ಆದರ್ಶಗಳನ್ನು ತಿಳಿದುಕೊಳ್ಳುವ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಆದರ್ಶ ಸಮಾಜದ ಸಂಸ್ಕೃತಿಯನ್ನು ಕಾಪಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಬೋಧಿಸಿದ ತತ್ವಗಳು ಕಾಲಾತೀತವಾಗಿದ್ದು, ಇಂದಿನ ಸಮಾಜಕ್ಕೂ ದಿಕ್ಕು ತೋರಿಸುತ್ತಿವೆ. ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸಲು ಅವರ ಚಿಂತನೆಗಳು ಮಾರ್ಗದರ್ಶಕವಾಗಿವೆ. ಮಹಿಳಾ ಸಬಲೀಕರಣದ ದೃಷ್ಟಿಯಿಂದ ಬಸವಣ್ಣ ಮತ್ತು ಅಕ್ಕಮಹಾದೇವಿಯವರ ಚಿಂತನೆಗಳು ಅತ್ಯಂತ ಮಹತ್ವದ್ದಾಗಿವೆ. ಅಕ್ಕಮಹಾದೇವಿಯವರು ಧಾರ್ಮಿಕ ಹಾಗೂ ಸಾಮಾಜಿಕ ಕಟ್ಟಳೆಗಳನ್ನು ಪ್ರಶ್ನಿಸಿ ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಆತ್ಮಗೌರವದ ಹಕ್ಕುಗಳನ್ನು ಒತ್ತಿ ಹೇಳಿದ್ದಾರೆ. ಇಂತಹ ಮಹಾನ್ ಚಿಂತನೆಗಳನ್ನು ಇಂದಿನ ವಿದ್ಯಾರ್ಥಿನಿಯರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಬಸವ ಅಧ್ಯಯನ ಪೀಠದ ಸಂಯೋಜಕ ಪ್ರೊ.ರಾಜಕುಮಾರ ಮಾಲಿಪಾಟೀಲ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತೇಜಸ್ವಿನಿ ನಾಯಕ ಪ್ರಾರ್ಥಿಸಿದರು. ಪ್ರೊ.ಗವಿಸಿದ್ದಪ್ಪ ಆನಂದಳ್ಳಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ನಂದಿನಿ ಪಾಟೀಲ ನಿರೂಪಿಸಿದರು. ಸೀಬಾ ವಂದಿಸಿದರು.ಬಸವೇಶ್ವರರು ಪ್ರಪಂಚದ ಸಂಸ್ಕೃತಿ ನಾಯಕರಾಗಿದ್ದು, ಅವರು ಬೋಧಿಸಿದ ತತ್ವಗಳು ಭಾರತೀಯ ಸಂವಿಧಾನದ ಉನ್ನತ ಮೌಲ್ಯಗಳಾಗಿ ರೂಪುಗೊಂಡಿವೆ. ಬಸವಣ್ಣನವರ ವಚನಗಳು ಕೇವಲ ಧಾರ್ಮಿಕ ಉಪದೇಶಗಳಲ್ಲ, ಅವು ಜೀವನಪಾಠಗಳಾಗಿವೆ. ಕಾಯಕವೇ ಕೈಲಾಸ ಎಂಬ ಅವರ ಸಂದೇಶವು ಕೆಲಸದ ಗೌರವವನ್ನು ಎತ್ತಿಹಿಡಿಯುತ್ತದೆ. ಪ್ರತಿಯೊಬ್ಬರೂ ತಮ್ಮ ಪರಿಶ್ರಮದಿಂದ ಜೀವನ ನಡೆಸಬೇಕು ಮತ್ತು ಯಾವುದೇ ಕೆಲಸವನ್ನು ಹೀನ-ಶ್ರೇಷ್ಠತೆಗಳ ಅಳತೆಯಲ್ಲಿ ನೋಡುವುದನ್ನು ತೊರೆದು ಗೌರವದಿಂದ ಕಾಣಬೇಕು. ಶಿಕ್ಷಣವೆಂಬುದು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗಿರದೆ ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಬೇಕು.