ಹಾವೇರಿ: ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಎಡವಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ತನ್ನ ವಾದವನ್ನು ಸರಿಯಾಗಿ ಮಂಡಿಸಲು ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡಿಗೆ ಅನುಕೂಲ: ತಮಿಳುನಾಡಿನಲ್ಲಿ ಮೂರು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಮಳೆ ಕಡಿಮೆಯಾದ ಸಂದರ್ಭದಲ್ಲೂ ಕೃಷಿಗೆ ಅಪಾರ ಪ್ರಮಾಣದ ನೀರನ್ನು ಬಳಸಲಾಗುತ್ತಿದೆ. ಕೇವಲ ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಗಳಲ್ಲೇ ಸುಮಾರು 40 ಟಿ.ಎಂ.ಸಿ ನೀರನ್ನು ಬಳಸಿರುವುದು ಸ್ಪಷ್ಟವಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ರೈತರಿಗೆ ಒಂದು ಬೆಳೆಯನ್ನು ಬೆಳೆಯಲು ಕೂಡ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಕುಡಿಯುವ ನೀರಿನ ಅಭಾವ: ಮಂಡ್ಯ, ಮೈಸೂರು ಭಾಗದ ರೈತರ ಕೃಷಿ ಜಮೀನುಗಳಿಗೆ ನೀರಿಲ್ಲದೆ ತೊಂದರೆಯಾಗಿದೆ. ಇಷ್ಟೇ ಅಲ್ಲದೆ, ಮುಂದಿನ ಬೇಸಿಗೆಯಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಲಿದೆ. ಸರ್ಕಾರ ಅಧಿಕಾರಿಗಳ ಮೇಲಷ್ಟೇ ಅವಲಂಬಿತವಾಗದೆ, ಕಾವೇರಿ ನೀರಿನ ವಿಚಾರದಲ್ಲಿ ಜ್ಞಾನ ಮತ್ತು ಅನುಭವ ಹೊಂದಿರುವ ಹಿರಿಯ ತಜ್ಞರು ಹಾಗೂ ಕಾನೂನು ಪಂಡಿತರನ್ನು ಒಳಗೊಂಡು ಪರಿಣಾಮಕಾರಿಯಾಗಿ ವಾದ ಮಂಡಿಸಬೇಕಿತ್ತು. ಪ್ರಸ್ತುತ ಪ್ರಾಧಿಕಾರವು ಪರಿಶೀಲನೆಗೆ ಆಗಮಿಸುತ್ತಿದ್ದು, ಈಗಲಾದರೂ ಸರ್ಕಾರ ಸರಿಯಾದ ಮಾಹಿತಿ ನೀಡುವ ಕೆಲಸ ಮಾಡಬೇಕಿದೆ. ರಾಜ್ಯದ ಹಿತಾಸಕ್ತಿಯನ್ನು ಬಲಿಗೊಟ್ಟು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿದ ಅವರು, ಸರ್ಕಾರ ತಕ್ಷಣವೇ ಗಂಭೀರ ಕ್ರಮಗಳನ್ನು ಕೈಗೊಂಡು ರಾಜ್ಯದ ಪಾಲಿನ ನೀರನ್ನು ಸಂರಕ್ಷಿಸಬೇಕು ಎಂದು ಆಗ್ರಹಿಸಿದರು.ಬರ ಘೋಷಣೆಯಲ್ಲಿ ವಿಳಂಬ: ಹಾವೇರಿ ಜಿಲ್ಲಾದ್ಯಂತ ತೀವ್ರ ಬರಗಾಲವಿದ್ದರೂ ಸರ್ಕಾರ ಕೇವಲ ಸ್ಯಾಟಲೈಟ್ ಇಮೇಜ್ಗಳನ್ನು ಮುಂದಿಟ್ಟುಕೊಂಡು ಬರ ಘೋಷಣೆ ಮಾಡಲು ವಿಳಂಬ ಮಾಡುತ್ತಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಮಳೆ ಕೊರತೆಯಿಂದಾಗಿ ಬಿತ್ತನೆಯಾದ ಬೆಳೆಗಳು ಸಂಪೂರ್ಣವಾಗಿ ಒಣಗಿಹೋಗಿವೆ. ಅಲ್ಲದೆ, ಆರಂಭದಲ್ಲಿ ಮಳೆಯಾಗಿ ಸ್ವಲ್ಪ ಬೆಳೆದಿದ್ದ ಬೆಳೆಗಳೂ ಸಹ ಈಗ ನೀರಿನ ಕೊರತೆಯಿಂದ ನಷ್ಟವಾಗಿವೆ. ಜಿಲ್ಲೆಯಲ್ಲಿ ಕೈಗೊಂಡಿದ್ದ ಏತ ನೀರಾವರಿ ಯೋಜನೆಗಳು ಯಾವುದೇ ಕೆಲಸ ಮಾಡುತ್ತಿಲ್ಲ. ವಿದ್ಯುತ್ ಬಿಲ್ ಸರಿಯಾಗಿ ಪಾವತಿಯಾಗದೆ ಮತ್ತು ಕೆರೆಗಳನ್ನು ತುಂಬಿಸಲು ಅವಕಾಶವಿದ್ದರೂ ನದಿಗಳಲ್ಲಿ ನೀರು ಕಡಿಮೆಯಾಗಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ ಎಂದು ಆರೋಪಿಸಿದರು.