ಬಸವೇಶ್ವರರು ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ: ಡಾ.ಮಂತರ್ ಗೌಡ

KannadaprabhaNewsNetwork | Published : May 1, 2025 12:46 AM

ಸಾರಾಂಶ

ನಾಡಿನ ಸಾಂಸ್ಕೃತಿಕ ನಾಯಕ ವಿಶ್ವದ ಮಹಾನ್‌ ಮಾನವತಾವಾದಿ ಬಸವೇಶ್ವರರು 12ನೇ ಶತಮಾನದಲ್ಲಿಯೇ ನಾಡಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಗಣ್ಯರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವದ ಮಹಾನ್ ಮಾನವತಾವಾದಿ ಬಸವೇಶ್ವರರು 12 ನೇ ಶತಮಾನದಲ್ಲಿಯೇ ನಾಡಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಆದರೆ ರಾಷ್ಟ್ರಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದರೂ ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಂಡಿದ್ದಾರೆಯೇ ಎಂಬ ಬಗ್ಗೆ ಆತ್ಮ ವಿಮರ್ಶೆ ಆಗಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಚಿಂತಿಸಬೇಕು: ಸಮಾಜದಲ್ಲಿ ಇಂದಿಗೂ ಸಹ ಬಡವರು ಮತ್ತಷ್ಟು ಕಡು ಬಡವರಾಗಿ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿ ಬದುಕು ನಡೆಸುತ್ತಿದ್ದಾರೆ. ಆದರೆ ಬಸವಣ್ಣ ಅವರ ಆಶಯ ಈಡೇರಿದೆಯೇ ಎಂಬುದನ್ನು ಪ್ರತಿಯೊಬ್ಬರೂ ಚಿಂತಿಸಬೇಕು ಎಂದು ಡಾ.ಮಂತರ್ ಗೌಡ ಅವರು ಪ್ರತಿಪಾದಿಸಿದರು.

12 ನೇ ಶತಮಾನದಲ್ಲಿ ಬಸವೇಶ್ವರರು ಸಮ ಸಮಾಜ ನಿರ್ಮಾಣಕ್ಕೆ ಎಲ್ಲರನ್ನೂ ಒಟ್ಟುಗೂಡಿಸಿ ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಿದರು. ಆದರೆ ಸಮಾನತೆ ಇನ್ನೂ ತಲುಪಲಿಲ್ಲ, ಸಮಾನರಾಗಿ ಬದುಕುತ್ತಿದ್ದೇವೆ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.

ಶಿಕ್ಷಣ ಪಡೆದರೆ ಎಲ್ಲರೂ ಸಮಾನವಾಗಿ ಬದುಕುತ್ತಾರೆ ಎಂಬುದಾಗಿತ್ತು, ಆದರೆ ಉನ್ನತ ಶಿಕ್ಷಣದ ಜತೆಗೆ ಸಾಕಷ್ಟು ವೃತ್ತಿಪರ ಕೌಶಲ್ಯ ಹೊಂದಬೇಕು. ಅಷ್ಟರ ಮಟ್ಟಿಗೆ ಸ್ಪರ್ಧೆ ಎದುರಿಸಬೇಕಿದೆ. ಜಾತಿ, ಮತ, ಧರ್ಮ, ಲಿಂಗ ತಾರತಮ್ಯ ಇಲ್ಲದೆ ಬಸವಣ್ಣ ಅವರ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದರು.

ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಬಸವೇಶ್ವರರ ಪ್ರತಿಮೆ ಇದೆ. ಆ ನಿಟ್ಟಿನಲ್ಲಿ ಮುಂದಿನ‌ ದಿನಗಳಲ್ಲಿ ಸುತ್ತೂರು ಶ್ರೀಗಳು ಹಾಗೂ ತುಮಕೂರು ಶ್ರೀಗಳನ್ನು ಆಹ್ವಾನಿಸಿ ಬಸವ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇಂದಿಗೂ ಪ್ರಸ್ತುತ: ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅವರು ಮಾತನಾಡಿ ಬಸವೇಶ್ವರರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಬಸವೇಶ್ವರ ವಚನ ಸಂದೇಶಗಳನ್ನು ತಿಳಿದುಕೊಂಡು, ಅದನ್ನು ಪಾಲಿಸುವಂತಾಗಬೇಕು ಎಂದರು.

ಬಸವ ತತ್ವಗಳು ವಿಶಾಲತೆಯಿಂದ ಕೂಡಿದ್ದು, ಬಸವೇಶ್ವರರ ವಚನಗಳು ಎಲ್ಲರ ದಾರಿದೀಪವಾಗಿದೆ ಎಂದು ಸದಾಶಿವ ಸ್ವಾಮೀಜಿ ಅವರು ವಿವರಿಸಿದರು.

ಪ್ರತಿಯೊಬ್ಬರಲ್ಲಿಯೂ ಅಂತರಂಗ ಮತ್ತು ಬಹಿರಂಗದಲ್ಲಿ ಬದಲಾವಣೆ ಕಾಣುತ್ತೇವೆ, ಅಂತರಂಗ ಶುದ್ಧಿಯಾಗಿರಬೇಕು. ಆಚರಣೆ, ನುಡಿಯಲ್ಲಿ ಒಂದೇ ಇರಬೇಕು. ಎಲ್ಲರಲ್ಲಿಯೂ ಕಾಯಕ ಪ್ರಜ್ಞೆ ಇರಬೇಕು ಎಂದು ಕಿರಿಕೊಡ್ಲಿ ಮಠದ ಸ್ವಾಮೀಜಿ ಅವರು ಹೇಳಿದರು.

ಕುಶಾಲನಗರದಲ್ಲಿ ಬಸವ ಬಳಗದ ಜಾಗ ಇದ್ದು, "ಬಸವ ಭವನ " ನಿರ್ಮಾಣಕ್ಕೆ ಅಗತ್ಯ ಸಹಕಾರಕ್ಕೆ ಶಾಸಕರಲ್ಲಿ ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ಬಸವೇಶ್ವರರು 12 ನೇ ಶತಮಾನದಲ್ಲಿ ಅನುಭವ ಮಂಟಪ ಮೂಲಕ ಪ್ರತಿಯೊಬ್ಬರೂ ಸಮಾನರು ಎಂಬ ಸಂದೇಶ ಸಾರಿದರು. ಸ್ತ್ರೀಯರಿಗೆ ಸಮಾನ ಅವಕಾಶ ಕಲ್ಪಿಸಿದರು ಎಂದು ತಿಳಿಸಿದರು.

ಬಸವಣ್ಣ ಅವರು ಶ್ರೇಣೀಕೃತ ವ್ಯವಸ್ಥೆ, ಮೂಡನಂಬಿಕೆ, ಕಂದಾಚಾರ ಹೋಗಲಾಡಿಸಲು ಶ್ರಮಿಸಿದ್ದಾರೆ. ಜಾತಿ, ಧರ್ಮ, ಲಿಂಗಭೇದವಿಲ್ಲದೆ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ಎಂದರು.

ಸೋಮವಾರಪೇಟೆ ವಿರಕ್ತ ಮಠದ ನಿಶ್ಚಲಾನಂದ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.

ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ.ಎಸ್.ಮೂರ್ತಿ ಅವರು ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ “ಬಸವ ಭವನ” ನಿರ್ಮಾಣಕ್ಕೆ ಜಿಲ್ಲಾಡಳಿತ ವತಿಯಿಂದ ಜಾಗ ಒದಗಿಸುವಂತಾಗಬೇಕು ಎಂದು ಕೋರಿದರು.

ಅಖಿಲ‌ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷರಾದ ಶಿವಪ್ಪ ಅವರು ಮಾತನಾಡಿ ಬಸವೇಶ್ವರರ ವಚನಗಳು ಹಾಗೂ ಸಂದೇಶಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಜೊತೆಗೆ ಅದರಂತೆ ನಡೆದುಕೊಳ್ಳಬೇಕು ಎಂದರು.

ಕುಮಾರಿ ಷಷ್ಠಿ ವಚನ ಗಾಯನ ಹಾಡಿದರು, ವಿಜಯಲಕ್ಷ್ಮಿ ಅವರು ಶರಣರ ವಚನ ವಾಚಿಸಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ವೀರಶೈವ ಲಿಂಗಾಯತ ಸಮಾಜದ ಪ್ರಧಾನ ಕಾರ್ಯದರ್ಶಿ ಶಂಭಾ ಶಿವಮೂರ್ತಿ, ತಾಲೂಕು ಘಟಕದ ಅಧ್ಯಕ್ಷರಾದ ರುದ್ರಪ್ರಸನ್ನ, ಆದಿ, ಟಿ.ಜಿ.ಪ್ರೇಮಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ.ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ಇತರರು ಇದ್ದರು.

Share this article