ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಯಗಟಹಳ್ಳಿ ಪರಿಮಿತಿಯಲ್ಲಿ 25 ಲಕ್ಷ ರು.ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ಹಳ್ಳಿಗಳ ಮೂಲ ಸಮಸ್ಯೆಗಳಿಗಷ್ಟೇ ನಮ್ಮಲ್ಲಿ ಮನವಿ ಮಾಡುತ್ತಾರೆ. ನಾವು ಪಟ್ಟಣ ಅಥವಾ ರಾಜ್ಯದಲ್ಲಿ ಎಷ್ಟೇ ದೊಡ್ಡ ಯೋಜನೆ ರೂಪಿಸಿದರೂ ಅದು ಲೆಕ್ಕಕ್ಕೆ ಬರುವುದಿಲ್ಲ. ನಮ್ಮ ಗ್ರಾಮದಲ್ಲಿ ಕೆಲಸ ಆಗಿಲ್ಲ ಎನ್ನುವುದಷ್ಟೇ ಅವರ ಮುಖ್ಯ ಬೇಡಿಕೆಯಾಗಿರುತ್ತದೆ ಎಂದರು.
ತಾಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ಈಗಾಗಲೇ ಉತ್ತಮ ಗುಣಮಟ್ಟದ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಇನ್ನುಳಿದ ಉಳಿದ ಎಲ್ಲಾ ಗ್ರಾಮಗಳ ರಸ್ತೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.ತಾಲೂಕಿನ ಕಾರಗೆರೆ ಗ್ರಾಮದಲ್ಲಿ 16 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೂ ವಿಶೇಷ ಆದ್ಯತೆ ನೀಡುತ್ತಿದೆ. ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳ ಅಭಿವೃದ್ದಿಗೆ ಎಲ್ಲಾ ರೀತಿಯಲ್ಲಿಯೂ ಸಹಕರಿಸುತ್ತಿದೆ. ಇಲಾಖೆಯ ಬೇಡಿಕೆಯಿದ್ದಷ್ಟು ಅನುದಾನ ನೀಡಲಾಗುತ್ತಿದೆ ಎಂದರು.
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷೆಗಳನ್ನು ನಡೆಸುವ ಜೊತೆಗೆ ಫಲಿತಾಂಂಶದಲ್ಲಿ ಜಿಲ್ಲೆಗೆ ನಾಗಮಂಗಲ ತಾಲೂಕು ಪ್ರಥಮ ಸ್ಥಾನದಲ್ಲಿರುವಂತೆ ಕ್ರಮವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಈ ವೇಳೆ ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಸಿಡಿಪಿಒ ಕೃಷ್ಣಮೂರ್ತಿ, ಮುಖಂಡರಾದ ಲೋಕೇಶ್, ರಾಮಿ, ರಾಜೇಗೌಡ, ಗಿರೀಶ್ ಸೇರಿದಂತೆ ಹಲವರು ಇದ್ದರು.