ಚಿತ್ರದುರ್ಗ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ದೌರ್ಜನ್ಯ ಪ್ರಕರಣಗಳಲ್ಲಿ, ಸರಿಯಾದ ಹಾಗೂ ಸಮರ್ಪಕವಾದ ಸಾಕ್ಷಿ, ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದರೊಂದಿಗೆ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪೊಲೀಸ್ ಹಾಗೂ ಸರ್ಕಾರಿ ಅಭಿಯೋಜನಕರು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ, ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಕುರಿತು ಜರುಗಿದ ಸಭೆಗಳ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶೀಘ್ರವಾಗಿ ನ್ಯಾಯ ದೊರೆತರೆ ಬಾಧಿತರಿಗೆ ಸೂಕ್ತ ರಕ್ಷಣೆ, ಹಣಕಾಸು ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಬಹುದು. ಬಹುವರ್ಷಗಳ ಕಾಲ ನ್ಯಾಯಾಲಯದಲ್ಲಿ ಪ್ರಕರಣ ಉಳಿದರೆ, ಸಾಕ್ಷಿಗಳು ಸರಿಯಾಗಿ ಸ್ಪಂದಿಸುವುದಿಲ್ಲ. ಪ್ರಕರಣಗಳು ವಿಳಂಬವಾದಷ್ಟು ಆರೋಪಿಗಳು ಖುಲಾಸೆಯಾಗುವ ಸಂಭವ ಇರುತ್ತದೆ. ಇದಕ್ಕೆ ಅವಕಾಶ ನೀಡದೆ, ಶೀಘ್ರವಾಗಿ ನ್ಯಾಯ ದೊರಕಿಸಿಕೊಡುವ ಕೆಲಸವಾಗಬೇಕು. ಮುಂದಿನ ತ್ರೈಮಾಸಿಕ ಸಭೆಗೆ ನ್ಯಾಯಾಲಯದಲ್ಲಿ ಒಟ್ಟು ಎಷ್ಟು ಪ್ರಕರಣಗಳು, ಎಷ್ಟು ದಿನಗಳಿಂದ ಬಾಕಿ ಇವೆ, ವಿಚಾರಣೆಯ ಯಾವ ಹಂತದಲ್ಲಿವೆ ಎಂಬುದರ ಸಂಪೂರ್ಣ ವಿವರವನ್ನು ಒದಗಿಸಬೇಕು ಎಂದು ಸೂಚನೆ ನೀಡಿದರು.ದೌರ್ಜನ್ಯ ಪ್ರತಿಬಂಧ ಕಾಯ್ದೆ ಕುರಿತು ಎಲ್ಲಾ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಮೇಲ್ವರ್ಗದ ಕೇರಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜನರು ಹೆಚ್ಚಿಗೆ ಸೇರುವ, ಸರ್ಕಾರದಿಂದ ಆಯೋಜಿಸಲ್ಪಡುವ ಜನಸ್ಪಂದನ, ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಕಾರ್ಯಕ್ರಮಗಳ ಸಂದರ್ಭಗಳನ್ನು ಉಪಯೋಗಿಸಿಕೊಂಡು, ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲಾ ಕೇಂದ್ರದಿಂದ ಹೆಚ್ಚು ದೂರದಲ್ಲಿರುವ ಹಳ್ಳಿಗಳಲ್ಲಿಯೇ ಹೆಚ್ಚು ದೌರ್ಜನ್ಯ ಪ್ರಕರಣಗಳು ಕಂಡುಬರುತ್ತವೆ. ಇಂತಹ ಕಡೆ ಪೊಲೀಸರು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯಿಂದ 31 ಪ್ರಕರಣಗಳಲ್ಲಿ 58 ಜನರಿಗೆ ಪರಿಹಾರ ಧನ ನೀಡಲಾಗಿದೆ. ನ್ಯಾಯಾಲಯದಲ್ಲಿ ಫೆಬ್ರವರಿ ಅಂತ್ಯಕ್ಕೆ 35 ಪ್ರಕರಣಗಳು ಬಾಕಿ ಇವೆ. ಈ ವರ್ಷದ ನವೆಂಬರ್ ತಿಂಗಳಿನಿಂದ ಫೆಬ್ರವರಿವರೆಗೆ ಒಟ್ಟು 10 ಪ್ರಕರಣಗಳಲ್ಲಿ ಆರೋಪಿಗಳು ಬಿಡುಗಡೆಯಾಗಿದ್ದಾರೆ. ಒಂದು ಪ್ರಕರಣ ಡಿಸ್ಚಾರ್ಜ್ ಆಗಿದೆ. ಯಾವುದೇ ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆಯಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಮಾಹಿತಿ ನೀಡಿದರು.ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಒಟ್ಟು 15 ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ. 12 ತನಿಖಾ ಹಂತದಲ್ಲಿ ಇದ್ದು, 3 ಪ್ರಕರಣಗಳಲ್ಲಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಮಾಹಿತಿ ನೀಡಿದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು. ತಹಶೀಲ್ದಾರ, ಬಿಇಓಗಳು ಮಕ್ಕಳ ಮನೆಗಳಿಗೆ ತೆರಳಿ ಪೋಷಕರಿಗೆ ತಿಳಿ ಹೇಳಬೇಕು. ಶಾಲೆಗೆ ಬರುವ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ವಾಲ್ಮೀಕಿ, ಆದಿ ಜಾಂಬವ, ಬೋವಿ, ಅಂಬೇಡ್ಕರ್ ಅಭಿವೃದ್ಧಿ ನಿಗಮಗಳಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವುದರೊಂದಿಗೆ, ಫಲಾನುಭವಿಗಳಿಗೆ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ಶಾಲೆಯಿಂದ ಹೊರಗುಳಿದ ಮೊಳಕಾಲ್ಮುರು ತಾಲೂಕಿನ 34 ಹಾಗೂ ಚಳ್ಳಕೆರೆ ತಾಲೂಕಿನ 64 ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ. 8 ಮಕ್ಕಳ ಕುಟುಂಬ ಆಂಧ್ರ ಪ್ರದೇಶಕ್ಕೆ ಸಂಪೂರ್ಣವಾಗಿ ವಲಸೆ ಹೋಗಿದ್ದಾರೆ. 2 ವಿದ್ಯಾರ್ಥಿಗಳ ಪೋಷಕರು ಜಗಳದ ನಡುವೆ ಮಕ್ಕಳನ್ನು ಶಾಲೆ ಕಳುಹಿಸುತ್ತಿಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಗೈರು ಹಾಜರಾದವರಿಗೆ ನೋಟಿಸ್ ಜಾರಿ: ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಪಂ ಉಪಕಾರ್ಯದರ್ಶಿ ತಿಮ್ಮಪ್ಪ, ಜಿಪಂ ಯೋಜನಾ ನಿರ್ದೇಶಕಿ ನಂದಿನಿ.ಆರ್.ಬಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಉಪನಿರ್ದೇಶಕಿ ಸವಿತಾ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಕೈಗಾರಿಕೆ ಇಲಾಖೆ ಉಪನಿರ್ದೇಶಕ ಮಂಜುನಾಥ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್.ಕೆ.ಎಸ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಂ.ಡಿ.ನವಕೋಟಿ ಮತ್ತು ಬೋರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.