ಮಾನವ ಹಕ್ಕುಗಳ ಅರಿವು ಇರಲಿ: ನ್ಯಾ. ಮಹಾಂತೇಶ ದರಗದ

KannadaprabhaNewsNetwork |  
Published : Dec 12, 2024, 12:30 AM IST
10ಕೆಪಿಎಲ್27 ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ | Kannada Prabha

ಸಾರಾಂಶ

ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ನೀಡಿದ್ದು, ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು.

ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ

ಕನ್ನಡಪ್ರಭ ವಾರ್ತೆ ಕೊಪ್ಪಳ

ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ನೀಡಿದ್ದು, ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಪಂ ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬರೂ ಶುದ್ಧ ಕುಡಿಯುವ ನೀರು, ಗಾಳಿ ಹಾಗೂ ಪರಿಸರವನ್ನು ಪಡೆದುಕೊಂಡು ಗೌರವಯುತವಾಗಿ ಬಾಳುವ ಹಕ್ಕನ್ನು ಹೊಂದಿದ್ದಾರೆ. ಮನುಷ್ಯನು ಜೀವಿಸುವುದಕ್ಕಾಗಿ ಸಂವಿಧಾನದಲ್ಲಿ ಮಾತನಾಡುವ ಹಕ್ಕು, ಧರ್ಮ ಆಚರಣೆ ಮಾಡುವ ಹಕ್ಕು ಹೀಗೆ ಹಲವಾರು ಹಕ್ಕು ನೀಡಲಾಗಿದೆ. ಮನುಷ್ಯ ಗೌರವಯುತವಾಗಿ ಬದುಕುವುದಕ್ಕಾಗಿಯೇ ಮಾನವ ಹಕ್ಕುಗಳು ಜಾರಿಯಲ್ಲಿವೆ. ದಿನ ನಿತ್ಯದ ಕೆಲಸಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕಾಣುಬಹುದು. ಆದರೆ, ಸಾಮಾನ್ಯವಾಗಿ ಇದರ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ. ಮೊದಲು ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರ್ಥ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳಾದ ದೇವಸ್ಥಾನಗಳಲ್ಲಿ ಕೆಲವರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸುವುದು ಹಾಗೂ ಜಾತಿ ವ್ಯವಸ್ಥೆಯಲ್ಲಿ ಮೇಲು-ಕೀಳು ಎಂದು ಭಾವಿಸುವ ವ್ಯವಸ್ಥೆಯೂ ಸಹ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾದರೆ, ಅವುಗಳಿಗೆ ಶಿಕ್ಷೆ ನೀಡುವ ಅವಕಾಶ ಕಾನೂನಿನಲ್ಲಿದೆ. ಮಾನವ ಹಕ್ಕುಗಳು ಪ್ರತಿಯೊಬ್ಬರಿಗೂ ಸಮಾನವಾಗಿದ್ದು, ಅವುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಈ ದೇಶದ ಪ್ರಜೆಗಳ ಜವಾಬ್ದಾರಿಯಾಗಿದೆ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಮಾತನಾಡಿ, ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಸಾಗಿಸಲು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ನೀಡಿದೆ. ಮಾನವ ಹಕ್ಕುಗಳ ರಕ್ಷಣೆಗೂ ಸಹ ಕಾಯ್ದೆ ರೂಪಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಇದರ ಅರಿವನ್ನು ಹೊಂದುವುದರ ಜೊತೆಗೆ, ಇತರರಿಗೂ ಜಾಗೃತಿ ಮೂಡಿಸಬೇಕು. ಮಕ್ಕಳಿಗೆ ಶಾಲೆ ಬಿಡಿಸುವುದು ಸಹ ಅವರ ಹಕ್ಕುಗಳ ಉಲ್ಲಂಘನೆಯಾಗಿದ್ದು, ಮಕ್ಕಳಿಗೆ ಶಿಕ್ಷಣ ನೀಡುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದೆ ಎಂದು ಹೇಳಿದರು.

ಮಂಗಳೂರು ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಂಪಾಲ ಡಾ. ಪ್ರಭುರಾಜ ನಾಯಕ ವಿಶೇಷ ಉಪನ್ಯಾಸ ನೀಡಿ, ಮಾನವ ಹಕ್ಕುಗಳ ದಿನಾಚರಣೆಯ ಈ ವರ್ಷದ ಘೋಷ ವಾಕ್ಯ ನಮ್ಮ ಹಕ್ಕು ನಮ್ಮ ಭವಿಷ್ಯ ಎಂಬುದಾಗಿದೆ. ಸಮಾಜದಲ್ಲಿ ಮನುಷ್ಯ ಘನತೆಯಿಂದ ಬದುಕು ಸಾಗಿಸಲು ಬೇಕಿರುವ ಮೂಲಭೂತ ಅವಶ್ಯಕತೆಗಳನ್ನು ಪಡೆಯುವುದು ಆತನ ಹಕ್ಕಾಗಿದೆ. ಯಾವುದೇ ಕಾರಣದಿಂದ ಇದಕ್ಕೆ ತೊಡಕಾದಲ್ಲಿ, ಅದು ಮಾನವ ಹಕ್ಕುಗಳ ಉಲ್ಲಂಘನೆಯಾದಂತೆ ಆಗುತ್ತದೆ. ಭಾರತದ ಸಂವಿಧಾನದಲ್ಲಿ ಸಂವಿಧಾನ ರಚನಾಕಾರರು ಮಾನವ ಹಕ್ಕುಗಳು ಎಲ್ಲೂ ಉಲ್ಲಂಘನೆಯಾಗದಂತೆ ನಮ್ಮ ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಈ ಹಕ್ಕುಗಳ ರಕ್ಷಣೆಗೆ ಸೂಕ್ತ ಕಾನೂನು ರೂಪಿಸಲಾಗಿದೆ. ಮನುಷ್ಯ ತನ್ನ ಘನತೆ ಹೆಚ್ಚಿಸಿಕೊಳ್ಳಬೇಕಾದರೆ ಇನ್ನೊಬ್ಬರ ಹಕ್ಕನ್ನು ಕಾಪಾಡಬೇಕು ಅಂದಾಗ ಮಾತ್ರ ಮಾನವ ಹಕ್ಕುಗಳ ದಿನಾಚರಣೆಗೆ ಮಹತ್ವ ದೊರೆಯುತ್ತದೆ ಎಂದರು.ಮೌನಾಚರಣೆ:ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನ ಹಿನ್ನೆಲೆ ಕಾರ್ಯಕ್ರಮಕ್ಕೂ ಪೂರ್ವ ಎರಡು ನಿಮಷಗಳ ಮೌನ ಆಚರಿಸಿ, ಅಗಲಿದ ಗಣ್ಯರಿಗೆ ಗೌರವ ನಮನ ಸಮರ್ಪಿಸಲಾಯಿತು.

ಪ್ರತಿಜ್ಞಾ ವಿಧಿ ಸ್ವೀಕಾರ:

ಮಾನವ ಹಕ್ಕುಗಳ ದಿನದ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಇದೇ ಸಂದರ್ಭದಲ್ಲಿ ಪ್ರತಿಜ್ಞೆ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ. ಕಣವಿ, ಕೊಪ್ಪಳ ತಹಸೀಲ್ದಾರ ವಿಠಲ್ ಚೌಗಲೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಕೊಪ್ಪಳ ಯುನಿಸೆಫ್ ವಿಭಾಗದ ಹರೀಶ್ ಜೋಗಿ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಕೊಪ್ಪಳ ನಗರದ ವಿವಿಧ ಶಾಲಾ ಕಾಲೇಜುಗಳ ಮಕ್ಕಳು ಉಪಸ್ಥಿತರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ