ಝೀಕಾ ವೈರಸ್ ಬಗ್ಗೆ ಇರಲಿ ಮುನ್ನೆಚ್ಚರ: ಡಾ.ಸತೀಶ್ ಕುಮಾರ್

KannadaprabhaNewsNetwork |  
Published : Nov 07, 2023, 01:31 AM IST

ಸಾರಾಂಶ

ಡೆಂಘೀ/ ಚಿಕೂನ್‌ಗುನ್ಯಾ, ವೆಸ್ಟ್‌ನೈಲ್ ಹಾಗೂ ಹಳದಿ ಜ್ವರವನ್ನು ಹರಡುವಂತಹ ಸೊಳ್ಳೆಗಳಾದ ಈಡೀಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಕಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ.

ಕನ್ನಡಪ್ರಭ ವಾರ್ತೆ ಮಡಿಕೇರಿಕೊರೋನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಈಡಿಸ್ ಈಜಿಪ್ಟಾ ಸೊಳ್ಳೆಗಳ ಸಮೂಹ ಮಾದರಿಗಳನ್ನು ಪರೀಕ್ಷಿಸಿದಾಗ ಝೀಕಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಡೆಂಘೀ/ ಚಿಕೂನ್‌ಗುನ್ಯಾ, ವೆಸ್ಟ್‌ನೈಲ್ ಹಾಗೂ ಹಳದಿ ಜ್ವರವನ್ನು ಹರಡುವಂತಹ ಸೊಳ್ಳೆಗಳಾದ ಈಡೀಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಕಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಝೀಕಾ ವೈರಸ್ ಕೇವಲ ಸೊಳ್ಳೆಗಳ ಕಡಿತದಿಂದ ಹರಡುವುದಲ್ಲದೇ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ ದೇಹದ ದ್ರವಗಳ ವಿನಿಮಯದ ಮೂಲಕವೂ ಹರಡುತ್ತದೆ. ಮಳೆಗಾಲದಲ್ಲಿ ಈ ವೈರಸ್ ಹರಡಲು ಅನುಕೂಲವಾದ ವಾತಾವರಣ ಸೃಷ್ಟಿಯಾಗುತ್ತದೆ. ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳ ಸಾಂದ್ರತೆ ಜಾಸ್ತಿ ಇರುತ್ತದೆ.

ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಜ್ವರ, ಕೆಂಪಾದ ಕಣ್ಣುಗಳು, ಮೈ-ಕೈ ನೋವು, ಕೀಲುಗಳಲ್ಲಿ ನೋವು, ದೇಹದ ಮೇಲೆ ಕೆಂಪುರಕ್ತ ಮಿಶ್ರಿತ ಗುಳ್ಳೆಗಳು (ಗಂಧೆಗಳು) ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣವಾಗಿದ್ದು, 2-7 ದಿನಗಳ ಅವಧಿಗೆ ಕಾಣಿಸಿಕೊಳ್ಳುತ್ತವೆ. ರಕ್ತ ಹಾಗೂ ಮೂತ್ರವನ್ನು ಪರೀಕ್ಷಿಸಿದಾಗ ಈ ರೋಗದ ಸೋಂಕು ಇರುವುದು ಕಂಡುಬರುತ್ತದೆ.

* ಸಂಭವಿಸಬಹುದಾದಂತಹ ಅಪಾಯ

ಗರ್ಭಿಣಿಯರು ಝೀಕಾ ವೈರಸ್ ಸೋಂಕಿಗೆ ಒಳಗಾಗಿದ್ದರೆ ಗರ್ಭಪಾತವಾಗುವ ಸಾಧ್ಯತೆ ಇದೆ ಹಾಗೂ ಹುಟ್ಟಲಿರುವ ಮಗುವಿಗೂ ಕೂಡ ಸೋಂಕು ರವಾನೆಯಾಗಬಹುದಾಗಿದೆ. ಹುಟ್ಟುವ ಮಕ್ಕಳಲ್ಲಿ ಅಂಗಾಗ ನ್ಯೂನತೆ (ಮೈಕ್ರೋಸೆಫಲಿ -ಅಂದರೆ ಮಗುವಿನ ಮೆದುಳಿನ ಬೆಳವಣಿಗೆ ಕುಂಠಿತವಾಗುವುದು) ಕಾಣಿಸಿಕೊಳ್ಳುವ ಸಾಧ್ಯತೆಯೂ ಹೆಚ್ಚಾಗಿದೆ. ವಯಸ್ಕರಲ್ಲಿ ತೀವ್ರತರವಾದ ನರಗಳ ದೌರ್ಬಲ್ಯ ವಿರಳವಾಗಿ ಕಾಣಿಸಿಕೊಳ್ಳಬಹುದು.

* ರೋಗ ಲಕ್ಷಣಗಳು ಕಂಡು ಬಂದರೆ ಏನು ಮಾಡಬೇಕು?

ಇದುವರೆಗೆ ಈ ಕಾಯಿಲೆಗೆ ಯಾವುದೇ ಲಸಿಕೆ ಕಂಡುಹಿಡಿದಿಲ್ಲ. ಸಾಕಷ್ಟು ದ್ರವ ಆಹಾರಗಳನ್ನು ಸೇವಿಸುವುದರ ಮೂಲಕ ನಿರ್ಜಲೀಕರಣವನ್ನು ತಡೆಯಬೇಕು. ಸಾಕಷ್ಟು ವಿಶ್ರಾಂತಿಯನ್ನು ಪಡೆಯಬೇಕು. ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದು.* ಸೊಳ್ಳೆಗಳ ಉತ್ಪತ್ತಿ ತಾಣಗಳು

ಈ ಸೊಳ್ಳೆಗಳು ಹಗಲು ಹೊತ್ತು ಕಚ್ಚುತ್ತವೆ. ಡ್ರಮ್, ಬ್ಯಾರೆಲ್, ನೀರಿನ ತೊಟ್ಟಿ, ಏರ್ ಕೂಲರ್, ಪ್ರಿಜ್, ಅನುಪಯುಕ್ತ ಟೈರ್, ಒಡೆದ ಮಡಕೆ, ತೆಂಗಿನ ಚಿಪ್ಪು, ತಾರಸಿ ಮನೆಗಳ ಮೇಲ್ಛಾವಣಿ, ಮನೆಗಳಲ್ಲಿ ಉಪಯೋಗಿಸಿ ಬಿಸಾಡಿದಂತಹ ಘನತ್ಯಾಜ್ಯ ವಸ್ತುಗಳು, ಅಡಕೆ ತೋಟಗಳಲ್ಲಿ ಬಿದ್ದಿರುವ ಹಾಳೆಗಳು(ಎಲೆಗಳು), ರಬ್ಬರ್ ತೋಟಗಳಲ್ಲಿ ರಬ್ಬರ್ ಸಂಗ್ರಹಿಸುವ ಕಪ್, ಹೂವಿನ ಕುಂಡ, ಶಾಲಾ-ಕಚೇರಿಗಳ ಮೇಲ್ಚಾವಣಿ ಇತ್ಯಾದಿಗಳಲ್ಲಿ ನೀರು ನಿಂತು ಈಡಿಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ.

* ಮುಂಜಾಗ್ರತೆ

ಮನೆ ಪರಿಸರ, ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲಿಯೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಮತ್ತು ಆರೋಗ್ಯ ಸಿಬ್ಬಂದಿ/ಆಶಾ ಕಾರ್ಯಕರ್ತೆಯರು ನೀಡುವ ಸಲಹೆ-ಸೂಚನೆಗಳನ್ನು ಪಾಲಿಸಬೇಕು. ಸೊಳ್ಳೆಗಳು ಪ್ರವೇಶಿಸದಂತೆ ಮನೆಯ ಕಿಟಕಿ ಬಾಗಿಲುಗಳಿಗೆ ಜಾಲರಿ ಅಳವಡಿಸುವುದು. ಹೊರಾಂಗಣದಲ್ಲಿ ಮಲಗುವುದನ್ನು ಸಾಧ್ಯವಾದಷ್ಟು ತಪ್ಪಿಸುವುದು ಹಾಗೂ ವಿಶ್ರಾಂತಿ ಪಡೆಯುವಾಗ ಮತ್ತು ಮಲಗುವಾಗ ವಿಶೇಷವಾಗಿ ಗರ್ಭಿಣಿಯರು/ ವಯಸ್ಕರು ಮತ್ತು ಮಕ್ಕಳು ಕೀಟನಾಶಕ ಲೇಪಿತ ಸೊಳ್ಳೆ ಪರದೆಗಳನ್ನು ಉಪಯೋಗಿಸುವುದು. ನೀರಿನ ತೊಟ್ಟಿ/ ಟ್ಯಾಂಕ್‌ನ್ನು ಕನಿಷ್ಟ ಪಕ್ಷ ವಾರಕ್ಕೆ ಎರಡು ಸಲ ಪೂರ್ತಿ ಖಾಲಿ ಮಾಡಿ ಸ್ವಚ್ಛಗೊಳಿಸುವುದು.

ಬಯಲಿನಲ್ಲಿ ತ್ಯಾಜ್ಯ ವಸ್ತುಗಳಾದ ಟೈರ್, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರವಹಿಸಿವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸಾಧ್ಯವಾದಷ್ಟು ಮೈಮುಚ್ಚುವಂತೆ ಬಟ್ಟೆಯನ್ನು ಧರಿಸುವುದು.

ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು. ಸೊಳ್ಳೆ ಕಚ್ಚದಂತೆ ಎಲ್ಲಾ ರೀತಿಯ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಲು ಸೂಕ್ತ ಕ್ರಮಗಳನ್ನು ವಹಿಸಬೇಕು.

ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದರೊಂದಿಗೆ ಈ ಎಲ್ಲಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಬಿ.ಎಲ್. ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ
80 ಶಾಸಕರ ಬೆಂಬಲ ಇದೆ ಎಂಬುದು ಪ್ರಶ್ನೆಯಲ್ಲ: ಸತೀಶ್‌