ಕುಡಿವ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಡಿಸಿ ಗೋವಿಂದರೆಡ್ಡಿ

KannadaprabhaNewsNetwork | Published : May 17, 2024 12:32 AM

ಸಾರಾಂಶ

ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ 102 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆಯಲಾಗಿದೆ. 47 ಕೊಳವೆ ಬಾವಿ ಮೋಟಾರ್‌ ದುರಸ್ತಿ, 24 ಕಡೆ ಹೊಸ ಪೈಪ್‌ಲೈನ್‌ ಮಾಡಲಾಗಿದೆ. ಈಗಾಗಲೇ ಬಾಡಿಗೆ ಪಡೆದ ಖಾಸಗಿ ಕೊಳವೆಬಾವಿ ಮತ್ತು ಟ್ಯಾಂಕರ್‌ಗಳ ಬಿಲ್‌ಗಳನ್ನು ಪಡೆದು ಕೂಡಲೆ ಹಣ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೀದರ್

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲಾ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿದ್ದಾರೆ, ಇನ್ನೂ 15 ದಿನಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ತಾಲೂಕು ಮಟ್ಟದ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್‌ ತಿಂಗಳಿನಲ್ಲಿ ಉತ್ತಮವಾಗಿ ಮಳೆ ಬರುವ ನಿರೀಕ್ಷೆ ಇದೆ ಎಂದರು.

ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ 102 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆಯಲಾಗಿದೆ. 47 ಕೊಳವೆ ಬಾವಿ ಮೋಟಾರ್‌ ದುರಸ್ತಿ, 24 ಕಡೆ ಹೊಸ ಪೈಪ್‌ಲೈನ್‌ ಮಾಡಲಾಗಿದೆ. ಈಗಾಗಲೇ ಬಾಡಿಗೆ ಪಡೆದ ಖಾಸಗಿ ಕೊಳವೆಬಾವಿ ಮತ್ತು ಟ್ಯಾಂಕರ್‌ಗಳ ಬಿಲ್‌ಗಳನ್ನು ಪಡೆದು ಕೂಡಲೆ ಹಣ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ತಾಲೂಕುಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಮೋಟಾರ್‌ ದುರಸ್ತಿ, ಪೈಪಲೈನ್‌ ಅಳವಡಿಸಿ ಬಿಲ್ಲುಗಳನ್ನು ಸಹ ಆಡಳಿತಾತ್ಮಕ ಅನುಮೋದನೆ ಪಡೆದು ಹಣ ಪಾವತಿಗೆ ಕ್ರಮ ವಹಿಸಬೇಕು. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಕೊಳವೆಬಾವಿ, ಬಾವಿಗಳಿಗೆ ಯಾವುದೇ ರೀತಿಯ ಕಲುಷಿತ ನೀರು ಸೇರದಂತೆ ಎಚ್ಚರ ವಹಿಸಿ ಸ್ವಚ್ಛತೆಯನ್ನು ಕಾಪಾಡಲು ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ ಬದೋಲೆ ಮಾತನಾಡಿ, ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಚ್‌ ವತಿಯಿಂದ 114 ಕಡೆ ಕೊಳವೆಬಾವಿ ಕೊರೆಯಲಾಗಿದೆ. ಕೆಲವೆಡೆ ಮತ್ತಷ್ಟು ಆಳ ತೋಡಲಾಗಿದೆ. ಕೂಡಲೇ ಆಡಳಿತಾತ್ಮಕ ಅನುಮೋದನೆ ಪಡೆದು ಬಿಲ್‌ಗಳನ್ನು ಪಾವತಿಸಲು ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಓವರ್‌ ಹೆಡ್‌ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸಿ ಸೂಚಿಯಾಗಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಸಹಾಯಕ ಆಯುಕ್ತರಾದ ಲವೀಶ ಓರ್ಡಿಯಾ, ಎಲ್ಲಾ ತಾಲೂಕಿನ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Share this article