ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : Feb 16, 2024, 01:46 AM IST
ಚಿತ್ರ 15ಬಿಡಿಆರ್‌6ಬೀದರ್‌ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲು ಜಿಲ್ಲೆಯ ಎಲ್ಲಾ ತಾಲೂಕಿನ ತಹಸೀಲ್ದಾರರು, ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು. ಜಿಪಂ ಸಿಇಒ ಡಾ. ಗಿರೀಶ್ ದಿಲೀಪ್‌ ಬದೋಲೆ ಚಿತ್ರದಲ್ಲಿದ್ದಾರೆ. | Kannada Prabha

ಸಾರಾಂಶ

ನೀರಿನ ಪೂರೈಕೆಗೆ ಹಣದ ಕೊರತೆಯಿಲ್ಲ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಸಿ ಕಣ್ಗಾವಲಿಗೆ ಸೂಚನೆ. ಅಧಿಕಾರಿಗಳು ನೆಪ ಹೇಳುವ ಹಾಗಿಲ್ಲವೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಬರ ಹಾಗೂ ಬೇಸಿಗೆ ಆರಂಭವಾಗಿದ್ದು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲು ಜಿಲ್ಲೆಯ ಎಲ್ಲಾ ತಾಲೂಕಿನ ತಹಸೀಲ್ದಾರರು, ತಾಪಂ ಇಒಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದಲ್ಲಿ ತಹಸೀಲ್ದಾರ್‌, ತಾಪಂ ಇಒಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕೆಲಸ ಮಾಡಿದರೆ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆಗಳಾಗುವುದಿಲ್ಲ. ತಹಸೀಲ್ದಾರರು ಈ ಕುರಿತು ತಮ್ಮ ತಾಲೂಕಿನ ಶಾಸಕರ ಅಧ್ಯಕ್ಷತೆಯಲ್ಲಿ ಒಂದು ಸಭೆ ನಡೆಸಿ ಯಾವ ಯಾವ ಗ್ರಾಮಗಳಲ್ಲಿ ಮುಂದೆ ನೀರಿನ ಸಮಸ್ಯೆ ಆಗಬಹುದು ಎಂಬುದರ ಕುರಿತು ಮಾಹಿತಿ ಸಂಗ್ರಹಿಸಬೇಕೆಂದರು.

ತಾಪಂ ಇಒಗಳು ವಾಟರಮ್ಯಾನ್‌ಗಳ ಸಭೆ ಕರೆದು ಅವರಿಗೆ ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಸಮಯಕ್ಕೆ ಗ್ರಾಮಗಳಲ್ಲಿ ನೀರು ಬಿಡುವುದರ ಕುರಿತು ತಿಳಿಸಬೇಕು. ಗ್ರಾಮ ಸೇವಕರು ಮತ್ತು ಪಿಡಿಒಗಳು ನೀರಿನ ಸಮಸ್ಯೆಗಳಿರುವ ಗ್ರಾಮಗಳ ಮಾಹಿತಿಯನ್ನು ತಮ್ಮ ಮೇಲಾಧಿಕಾರಿಗಳಿಗೆ ತಿಳಿಸಬೇಕೆಂದರು.

ನೀರಿನ ಪೂರೈಕೆಗೆ ಹಣದ ಕೊರತೆಯಿಲ್ಲ, ನೆಪ ಹೇಳುವ ಹಾಗಿಲ್ಲ:

ಅಧಿಕಾರಿಗಳು ಖುದ್ದಾಗಿ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆಗಳಿಗೆ ಎಂಬುದರ ನಿಖರ ಮಾಹಿತಿ ಕೊಡಬೇಕು. ಸಮಸ್ಯೆಗಳಿರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ ಅಥವಾ ನೀರಿನ ಟ್ಯಾಂಕರ್‌, ತೆರೆದ ಬಾವಿಗಳ ಮೂಲಕ ಜನರಿಗೆ ನೀರು ಒದಗಿಸಬಹುದೇ ಎಂಬ ಮಾಹಿತಿಯನ್ನು ಅಧಿಕಾರಿಗಳು ಮುಂಚಿತವಾಗಿ ಸಂಗ್ರಹಿಸಬೇಕು ಮತ್ತು ಯಾವುದೇ ಕಾರಣಕ್ಕೆ ನೆಪ ಹೇಳುವ ಹಾಗಿಲ್ಲ ಕುಡಿಯುವ ನೀರಿಗೆ ಹಣದ ಕೊರತೆಯಿಲ್ಲ ಎಂದರು.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನೀರಿನ ಸಮಸ್ಯೆ ವಿಶೇಷವಾಗಿ ಔರಾದ್‌ ಮತ್ತು ಭಾಲ್ಕಿ ತಾಲೂಕುಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಹಾಗಾಗಿ ಇತರೆ ತಾಲೂಕಿನ ಅಧಿಕಾರಿಗಳು ಸುಮ್ಮನಿರುವ ಹಾಗಿಲ್ಲ. ತಮ್ಮ ತಾಲೂಕಿನಲ್ಲಿ ನೀರಿನ ಸಮಸ್ಯೆಗಳಿರುವ ಗ್ರಾಮಗಳ ನಿಖರವಾದ ಮಾಹಿತಿ ನೀಡುವುದರ ಜೊತೆಗೆ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.

ನೀರಿನ ಮೂಲ ಇಲ್ಲದ ಕಡೆ ಖಾಸಗಿ ಕೊಳವೆಬಾವಿ ಮತ್ತು ತೆರೆದ ಬಾವಿಗಳ ಮಾಹಿತಿಯನ್ನು ಮುಂಚಿತವಾಗಿ ಸಂಗ್ರಹಿಸಿ ಮತ್ತು ಟ್ಯಾಂಕರ್‌ಗಳ ಮೂಲಕ ನೀರು ಒದಗಿಸಿ ತಾಲೂಕು ಮಟ್ಟದಲ್ಲಿ ತಹಸೀಲ್ದಾರರಿಗೆ 5 ಲಕ್ಷ ರು. ವರೆಗೆ ಹಣ ಖರ್ಚು ಮಾಡಬಹುದಾಗಿದೆ. ಕುಡಿಯುವ ನೀರಿಗೆ ತುರ್ತು 2 ಲಕ್ಷ ರು.ಗಳವರೆಗೆ ಖರ್ಚು ಮಾಡಬಹುದು ಎಂದರು.

ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಸಿ ತಾಂತ್ರಿಕ ಕಣ್ಗಾವಲಿಗೆ ಸೂಚನೆ:

ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವಾಗ ಅವುಗಳಿಗೆ ಜಿಪಿಎಸ್ ಅಳವಡಿಸಿ ಅದರಿಂದ ಯಾವ ಯಾವ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗಿದೆ ಎಂಬ ಮಾಹಿತಿ ಸಿಗುತ್ತದೆ. ಗುತ್ತಿಗೆ ಪಡೆದ ಖಾಸಗಿ ಕೊಳವೆಬಾವಿ, ತೆರೆದ ಬಾವಿಗಳು ಮತ್ತು ಟ್ಯಾಂಕರ್‌ಗಳ ಮಾಲೀಕರಿಗೆ 15 ದಿನಗಳಿಗೊಮ್ಮೆ ಹಣ ಪಾವತಿಸಬೇಕು ಹಾಗೂ ಎಷ್ಟು ಬೋರ್‌ವೆಲ್‌, ಬಾವಿ, ಟ್ಯಾಂಕರ್‌ಗಳ ಮೂಲಕ ವಿವಿಧ ಗ್ರಾಮಗಳಲ್ಲಿ ನೀರು ಒದಗಿಸಲಾಗುತ್ತಿದೆ ಎಂಬ ಮಾಹಿತಿ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಬೇಸಿಗೆ ಆರಂಭವಾಗಿರುವುದರಿಂದ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಅಂದಾಗ ಮಾತ್ರ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ. ಗಿರೀಶ್ ದಿಲೀಪ್‌ ಬದೋಲೆ, ಜಿಲ್ಲೆಯ ವಿವಿಧ ತಾಲೂಕಿನ ತಹಸೀಲ್ದಾರ್‌ರು, ತಾಪಂ ಇಒಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’