ಅಧಿಕಾರಿಗಳ ಜತೆ ತಾಲೂಕು ಉಸ್ತುವಾರಿ ಅಧಿಕಾರಿ ಕಾವ್ಯಾರಾಣಿ ವಿಡಿಯೋ ಕಾನ್ಫರೆನ್ಸ್ ಸಭೆ
ಕಂಪ್ಲಿ ತಾಲೂಕು ಉಸ್ತುವಾರಿ ಅಧಿಕಾರಿ, ಶಿರಸಿಯ ಉಪ ವಿಭಾಗಾಧಿಕಾರಿ ಕೆ.ವಿ. ಕಾವ್ಯಾರಾಣಿ ಇತ್ತೀಚೆಗೆ ಅಧಿಕಾರಿಗಳ ಜತೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ತಾಲೂಕಿನಲ್ಲಿ ಕುಡಿಯವ ನೀರು, ಜಾನುವಾರುಗಳಿಗೆ ಮೇವು ಲಭ್ಯತೆ ಕುರಿತು ಚರ್ಚಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೆ ತಾಲೂಕಿನಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರು ಹಾಗೂ ಮೇವಿನ ಕೊರತೆ ಬಾರದಂತೆ ಕ್ರಮ ವಹಿಸಬೇಕು ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಂಭವ ಕಂಡುಬಂದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಿ, ಜನರಿಗೆ ಸಮರ್ಪಕವಾಗಿ ನೀರು ಪೂರೈಸಬೇಕು ಎಂದು ಸೂಚಿಸಿದರು.ತಹಸೀಲ್ದಾರ್ ಶಿವರಾಜ್ ಶಿವಪುರ ಮಾತನಾಡಿ, ಕಳೆದ ವರ್ಷ ತಾಲೂಕಿನ ನೆಲ್ಲೂಡಿ, ಮೆಟ್ರಿ, ದೇವಲಾಪುರ ಗ್ರಾಮಗಳಲ್ಲಿ ಬೇಸಿಗೆಯಲ್ಲಿ ನೀರಿನ ಕೊರತೆಯಾದಾಗ ಖಾಸಗಿ ಬೋರ್ವೆಲ್ಗಳಿಂದ ನೀರು ಒದಗಿಸಲಾಗಿತ್ತು. ಈ ಬೇಸಿಗೆಯಲ್ಲಿ ದೇವಲಾಪುರ ಗ್ರಾಮದಲ್ಲಿ ನೀರಿನ ಕೊರತೆಯಾಗುವ ಸಾಧ್ಯತೆಯಿದ್ದು, ಖಾಸಗಿ ಬೋರ್ವೆಲ್ ಮೂಲಕ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಜಾನುವಾರುಗಳಿಗೆ ತಕ್ಕ ಪ್ರಮಾಣದ ಮೇವು ಲಭ್ಯತೆಯಿದ್ದು, ಮೇವಿನ ಕೊರತೆಯಿಲ್ಲ ಎಂದು ತಿಳಿಸಿದರು.
ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.