ಅತಿವೃಷ್ಟಿಯಂತಹ ಸ್ಥಿತಿ ಎದುರಿಸಲು ಸನ್ನದ್ಧರಾಗಿ: ಮನೋಜ್ ಜೈನ್

KannadaprabhaNewsNetwork |  
Published : Jun 12, 2024, 12:31 AM IST
ಯಾದಗಿರಿ ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಮನೋಜ್ ಜೈನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಪ್ರವಾಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಸ್ಪರ ಸಮಸ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಮುಂಬರುವ ದಿನಗಳಲ್ಲಿ ಪ್ರವಾಹ ಮತ್ತು ಅತಿವೃಷ್ಟಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಪ್ರವಾಹ ಮತ್ತು ಅತಿವೃಷ್ಟಿಗಳಂತಹ ಪರಿಸ್ಥಿತಿಗಳನ್ನು ಎದುರಿಸಲು ಅಧಿಕಾರಿಗಳು ಸರ್ವ ರೀತಿಯಿಂದ ಸನ್ನದ್ಧರಾಗಿರಬೇಕು. ನದಿ, ಹಳ್ಳಗಳು ಹಾಗೂ ತಗ್ಗು ಪ್ರದೇಶಗಳ ವ್ಯಾಪ್ತಿಯಲ್ಲಿರುವ ಗ್ರಾಮಗಳು, ರಸ್ತೆ ಹಾಗೂ ರೈಲ್ವೆ ಕ್ರಾಸಿಂಗ್‌ಗಳನ್ನು ಈಗಿನಿಂದಲೇ ಗುರುತಿಸಿ ಇಟ್ಟುಕೊಳ್ಳಬೇಕು. ನೋಡಲ್ ಅಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳುವ ಮೂಲಕ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮುಂದಿನ ದಿನಗಳಲ್ಲಿ ಸನ್ನದ್ಧರಾಗಿರುವಂತೆ ಸೂಚನೆ ನೀಡಿದರು.

ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ:

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ವಿಶೇಷವಾಗಿ ಕೊಳವೆ ಭಾವಿಗಳ ಮೇಲೆ ಅವಲಂಬನೆ ಇರುವ ವಿವಿಧ ಗ್ರಾಮಗಳ ಬಗ್ಗೆ ಯೋಜನೆ ರೂಪಿಸಿ ಅತ್ಯಂತ ಕಡಿಮೆ ಜಲ ಸಂಪನ್ಮೂಲ ಇರುವ ಗ್ರಾಮಗಳಿಗೆ ಆದ್ಯತೆ ನೀಡಿ, ಆ ಗ್ರಾಮಗಳ ವ್ಯಾಪ್ತಿಯಲ್ಲಿ ಅಂತರ್ಜಲ ಹೆಚ್ಚಿಸುವಂತಹ ಸಣ್ಣಪುಟ್ಟ 10 ರಿಂದ 20 ಅಡಿ ಅಗಲವಿರುವ ಮತ್ತು ಕಾಂಕ್ರೀಟ್ ನಿಂದ ಮುಚ್ಚಳ ಇರುವಂತಹ ಗುಂಡಿಗಳನ್ನು ತೋಡುವ ಮೂಲಕ ಅಂತರ್ಜಲ ಹೆಚ್ಚಿಸಲು ವಿಶೇಷ ಗಮನ ನೀಡುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುಮಠಕಲ್ ವ್ಯಾಪ್ತಿಯ 32 ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಯೋಜನೆಯಡಿ ಈಗಾಗಲೇ 12 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದು, ನೀರು ಪೂರೈಕೆಗೆ ಸಂಬಂಧಪಟ್ಟ ಅಧಿಕಾರಿಗಳು, ಪಂಪಿಂಗ್ ಸ್ಟೇಷನ್ ಆಪರೇಟರ್‌ಗಳು, ಜೆಸ್ಕಾಂ ಅಧಿಕಾರಿಗಳು ಮತ್ತು ಗ್ರಾಪಂ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿ, ಸಿಬ್ಬಂದಿ ಒಳಗೊಂಡ ತಾಂತ್ರಿಕ ತಂಡ ರಚಿಸಿ ಸಮಯಾನುಸಾರ ನೀರು ಪೂರೈಕೆ, ನಿರ್ವಹಣೆ ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಕೃಷ್ಣಭಾಗ್ಯ ಜಲ ನಿಗಮ ವ್ಯಾಪ್ತಿಯ ವಿಶೇಷವಾಗಿ ಕಾಲುವೆ ವ್ಯಾಪ್ತಿ ಮತ್ತು ಉಪಕಾಲವೆಗಳ ವ್ಯಾಪ್ತಿಯಲ್ಲಿನ ಜಾಗವನ್ನು ಪರಿಶೀಲಿಸಿಕೊಳ್ಳಬೇಕು. ಅದರಂತೆ ಗ್ರಾಮ ಮತ್ತು ನಗರಗಳ ವ್ಯಾಪ್ತಿಯಲ್ಲಿರುವ ಜಾಗಕ್ಕೆ ಸಂಬಂಧಿಸಿದಂತೆ ಅಧಿಕೃತ ದಾಖಲಾತಿಗಳನ್ನು ಇಟ್ಟುಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ, ಸಣ್ಣ ನೀರಾವರಿ ಮತ್ತು ಸರಕಾರಿ ಕೆರೆಗಳ ಕುರಿತ ಸರ್ವೇ ವರದಿಯನ್ನು ಇಟ್ಟುಕೊಳ್ಳಬೇಕು ಭೂಮಿ ಕನ್ಸಲ್ಟೆಂಟ್, ಸಹಾಯಕ ಆಯುಕ್ತರ ಕಚೇರಿ, ಡಿಡಿಎಲ್‌ಆರ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಅಧಿಕೃತ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕೆಂದು ಹೇಳಿದರು.

ಜಲಜೀವನ ಮಿಷನ್ ಯೋಜನೆಯಡಿ 1 ರಿಂದ 4 ನೇ ಹಂತದವರೆಗಿನ ಭೌತಿಕ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಮೌಖಿಕವಾಗಿ ಹಿಂದೆ ಉಳಿದಿರುವ 18 ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು. ಜಲಧಾರೆ ಯೋಜನೆಯಡಿ ಜಲ ಸಂಗ್ರಹಾಗಾರಗಳ ನಿರ್ಮಾಣದಲ್ಲಿ ಸಾಧಿಸಿದ ಪ್ರಗತಿ ಮತ್ತು ಇತರೆ ಕಾಮಗಾರಿಗಳ ಮತ್ತು ನಿವೇಶನಗಳ ಸಮಸ್ಯೆಯ ವರದಿಯನ್ನು ನೀಡಲು ಸೂಚಿಸಿದರು.

- ಸಾಮಾಜಿಕ ಅರಣ್ಯೀಕರಣಕ್ಕೆ ಸೂಚನೆ :

ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯೀಕರಣಕ್ಕೆ ಹೆಚ್ಚಿನ ಗಮನ ನೀಡಬೇಕು. ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಾಧಿಕಾರಿಗಳಿಗೆ ಎಲೆಕ್ಟ್ರಿಕಲ್ ಸ್ಕೂಟಿ ಒದಗಿಸುವ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ಇದರಿಂದ ರೈತರ ಜಾನುವಾರುಗಳಿಗೆ ಸಕಾಲಕ್ಕೆ ಸ್ಪಂದಿಸಲು ನೆರವಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯ ಕಾಮಗಾರಿಗಳ ನಿರ್ವಹಿಸುವವರ ಕುರಿತು ವಿಶೇಷ ಗಮನ ನೀಡುವಂತೆ ಅವರು ಸೂಚನೆ ನೀಡಿ ರೈತರಿಗೆ ನೀಡಲಾಗುತ್ತಿರುವ ಪರಿಹಾರಕ್ಕೆ ಸಂಬಂಧಿಸಿದಂತೆ ಪಹಣಿಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಮುಂಬರುವ ಒಂದು ವಾರದೊಳಗಾಗಿ ಪೂರ್ಣಗೊಳಿಸಲು ಸಂಬಂಧಿಸಿದ ತಹಸೀಲ್ದಾರರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಪಂ ಸಿಇಒ ಗರಿಮಾ ಪನ್ವಾರ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!