ಕಂಪ್ಲಿ: ಅತಿವೃಷ್ಟಿ, ಪ್ರವಾಹ ಹಾವಳಿ ಸೇರಿದಂತೆ ಪ್ರಕೃತಿ ವಿಕೋಪಗಳಿಂದ ಯಾವುದೇ ಅನಾಹುತವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸನ್ನದ್ಧರಾಗಿರಬೇಕು ಎಂದು ತಹಸೀಲ್ದಾರ್ ಮಂಜು ನಾಯಕ ಸೂಚನೆ ನೀಡಿದರು.
ಜಾನುವಾರುಗಳಿಗೆ ತಗಲಬಹುದಾದ ರೋಗಗಳ ನಿಯಂತ್ರಣಕ್ಕಾಗಿ ಲಸಿಕೆ ನೀಡುವ ಕಾರ್ಯವನ್ನು ಪೂರ್ಣ ಗೊಳಿಸಬೇಕು. ಜಾನುವಾರುಗಳಿಗೆ ಆಶ್ರಯ, ಮೇವು, ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಮುಂಗಾರು ಹಂಗಾಮಿನ ಬೇಡಿಕೆಗೆ ಅನುಗುಣವಾಗಿ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸಬೇಕು. ಬಿರುಗಾಳಿ, ಅತಿವೃಷ್ಟಿಯಿಂದ ಹಾನಿಗೊಳಗಾಗುವ ಬೆಳೆಗಳ ಕುರಿತು ಶೀಘ್ರವಾಗಿ ವರದಿ ಸಲ್ಲಿಸಬೇಕಾಗುತ್ತದೆ. ಇನ್ನು ಮಳೆಯ ಸಮಯದಲ್ಲಿ ಆಗಾಗ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಪುರಸಭೆ ಹಾಗೂ ಗ್ರಾಪಂ ಅಧಿಕಾರಿಗಳು ಮಾಡಿಸಬೇಕು ಎಂದರು.
ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆಗೊಂಡಲ್ಲಿ ನದಿ ಪಾತ್ರದ ಜನರ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದು ಹಾಗೂ ಕಾಳಜಿ ಕೇಂದ್ರಗಳ ತೆರವಿಗೆ ಅವಶ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.ಉಪ ತಹಸೀಲ್ದಾರ್ ರವೀಂದ್ರ ಕುಮಾರ್, ತಾಪಂ ಎಡಿ ಕೆ.ಎಸ್. ಮಲ್ಲನಗೌಡ, ತಾಲೂಕು ಆರೋಗ್ಯ ಅಧಿಕಾರಿ ಡಾ. ಅರುಣ್ ಕುಮಾರ್, ಆರ್.ಐ. ಜಗದೀಶ್, ಶಿರಸ್ತೇದಾರ್ ಪಂಪಾಪತಿ, ರಮೇಶ್, ರಾಧಿಕಾ, ಸಿಆರ್ಪಿ ಟಿ.ಎಂ. ಬಸವರಾಜ್ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.