ಶಿವಮೊಗ್ಗ: ಹೆಣ್ಣು ಮಾತೃತ್ವದ ಅದಮ್ಯ ಶಕ್ತಿಯಾಗಿದ್ದು , ಶಿಕ್ಷಣವೆಂಬ ಅಸ್ತ್ರವನ್ನು ಹೊಂದಿ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪದವಿ ಮತ್ತು ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಕಾಲೇಜು ವಿದ್ಯಾರ್ಥಿನಿಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಿಕ್ಷಣ ಬಹಳ ದೊಡ್ಡ ಶಕ್ತಿ ಮತ್ತು ಶಸ್ತ್ರ. ಇದರಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗಿದ್ದು, ನೀವೆಲ್ಲಾ ಸುಶಿಕ್ಷಿತರಾಗಿ ಬದಲಾವಣೆ ತರಬೇಕು ಎಂದರು.ಡಾ.ಅಂಬೇಡ್ಕರ್ ರವರ ಧ್ಯೇಯವಾಕ್ಯಗಳಾದ ಶಿಕ್ಷಣ, ಸಂಘಟನೆ, ಹೋರಾಟ ನಮಗೆಲ್ಲ ಬಹು ಮುಖ್ಯವಾಗಿದ್ದು ಶಿಕ್ಷಣ ಪಡೆದು, ಸಂಘಟಿತರಾಗಿ ನಮ್ಮ ಹಕ್ಕುಗಳಿಗಾಗಿ ನಾವು ಹೋರಾಡಬೇಕು. ಯಾವ ಹಕ್ಕುಗಳಿಗಾಗಿ ನಾವು ಹೋರಾಡುತ್ತೀವೋ ಅದು ಲಭಿಸುತ್ತದೆ. ನನ್ನ ತಂದೆ ನನಗೆ ಶಿಕ್ಷಣ ನೀಡದಿದ್ದರೆ ನಾನಿಂದು ಈ ಸ್ಥಾನದಲ್ಲಿ ಇರಲು ಸಾಧ್ಯವಾಗುತ್ತಿರಲಿಲ್ಲ ಎಂದರು.
ಸೈಬರ್ ಕ್ರೈಮ್ಗೆ ಸಂಬಂಧಿಸಿದಂತೆ ಬ್ಲಾಕ್ಮೇಲ್ ಇತರೆ ಸಮಸ್ಯೆಗಳಿದ್ದರೆ ದೂರು ನೀಡಬೇಕು. ಧೈರ್ಯವಾಗಿ ಎದುರಿಸಬೇಕು. ಜೀವ ಕಳೆದುಕೊಳ್ಳಬಾರದು. ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ 1930 ಗೆ ಅಥವಾ 112 ಗೆ ಕರೆ ಮಾಡಬೇಕು. ಈಗಲೇ ಎಲ್ಲರೂ ಸುರಕ್ಷಾ ಆಪ್ಡೌನ್ ಲೋಡ್ ಮಾಡಿಕೊಳ್ಳಬೇಕು. ವಿದ್ಯಾರ್ಥಿನಿಯರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಕಿವಿ ಮಾತು ಹೇಳಿದರು.
ಈ ವೇಳೆ ವಿದ್ಯಾರ್ಥಿನಿಯರೊಂದಿಗೆ ಪ್ರೇರಣಾತ್ಮಕವಾಗಿ ಸಂವಾದ ನಡೆಸಿದರು. ಸಂವಾದದ ವೇಳೆ ವಿದ್ಯಾರ್ಥಿನಿಯರು ಸೈಬರ್ ದೂರಿನ ಬಗ್ಗೆ, ವಸತಿ ನಿಲಯದಲ್ಲಿ ಸೀಟ್ ಸಿಗದಿರುವ ಬಗ್ಗೆ ಹಾಗೂ ವಿದ್ಯಾರ್ಥಿ ವೇತನ ಬಾರದಿರುವ ಬಗ್ಗೆ ದೂರಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ, ಪ್ರಾದೇಶಿಕ ಕಾಲೇಜು ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕಿ ಯಶೋಧ, ಉಪನ್ಯಾಸಕ ಚಂದ್ರಮೋಹನ್, ಇತರೆ ಅಧಿಕಾರಿಗಳು, ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.