ಚನ್ನಪಟ್ಟಣ: ಕಳೆದ ಶನಿವಾರ ತಾಲೂಕಿನ ಸಿಂಗರಾಜಪುರ-ಕೋಡಂಬಹಳ್ಳಿ ಮಾರ್ಗದ ದಂಡಿನ ಮಾರಮ್ಮ ದೇವಸ್ಥಾನದ ಬಳಿ ಸೆರೆ ಹಿಡಿಯಲಾದ ಕರಡಿ ಮೃತಪಟ್ಟಿದ್ದು, ಆ ಕರಡಿಗೆ ರೇಬಿಸ್ ಇರುವುದು ಮರಣೋತ್ತರ ಪರೀಕ್ಷೆ ವೇಳೆ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸಿಬ್ಬಂದಿ ಹಾಗೂ ಸ್ಥಳೀಯರಿಗೆ ಆತಂಕ ಎದುರಾಗಿದೆ.
ಕರಡಿ ಸೆರೆಹಿಡಿದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಿದ ಬಳಿಕ, ಅದು ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆಯಲ್ಲಿ ಕರಡಿಗೆ ರೇಬೀಸ್ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಇದರೊಂದಿಗೆ, ಕರಡಿ ಸೆರೆಸಿಕ್ಕ ೧ ಕಿ.ಮೀ. ವ್ಯಾಪ್ತಿಯಲ್ಲಿನ ಜಾನುವಾರುಗಳಿಗೂ ವ್ಯಾಕ್ಸಿನೇಷನ್ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಾರ್ಯಾಚರಣೆ ವೇಳೆಯಲ್ಲಿಯೇ ಗಾಯಗೊಂಡಿದ್ದವರಿಗೆ ಈ ಮೊದಲೇ ವ್ಯಾಕ್ಸಿನ್ ನೀಡಲಾಗಿದ್ದು ಮೊದಲ ಹಂತವಾಗಿ ಕಾರ್ಯಾಚರಣೆಯಲ್ಲಿ ಭಾಗಿಯಾದ ಇತರರು ಹಾಗೂ ೧ ಕಿಮೀ ವ್ಯಾಪ್ತಿಯ ಜಾನುವಾರುಗಳಿಗೆ ವ್ಯಾಕ್ಸಿನೇಷನ್ ನೀಡಲು ಕ್ರಮ ವಹಿಸಲಾಗಿದೆ. ಯಾವುದಾದರೂ ಲಕ್ಷಣಗಳು ಕಂಡುಬಂದರೆ ೫ ಕಿ.ಮೀ. ವ್ಯಾಪ್ತಿಯಲ್ಲಿನ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ವ್ಯಾಕ್ಸಿನೇಷನ್ ಪಡೆಯಬೇಕಾಗುತ್ತದೆ ಎಂಬ ಎಚ್ಚರಿಕೆಯ ಸಂದೇಶವನ್ನು ಸಾತನೂರು ವಲಯ ಮತ್ತು ಚನ್ನಪಟ್ಟಣ ವಲಯ ಅರಣ್ಯಾಧಿಕಾರಿಗಳು ನೀಡಿದ್ದಾರೆ.
ಪೊಟೋ೩೧ಸಿಪಿಟಿ೧:ಚನ್ನಪಟ್ಟಣ ತಾಲೂಕಿನ ಸಿಂಗರಾಜಪುರ-ಕೋಡಂಬಹಳ್ಳಿ ಮಾರ್ಗದ ದಂಡಿನ ಮಾರಮ್ಮ ದೇವಸ್ಥಾನದ ಬಳಿ ಸೆರೆ ಹಿಡಿದಿದ್ದ ಕರಡಿ.