ಕನ್ನಡಪ್ರಭ ವಾರ್ತೆ ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ದೇಶದಲ್ಲಿ ವಿರೋಧ ಪಕ್ಷವನ್ನು ಸಂಪೂರ್ಣವಾಗಿ ನಾಶ ಮಾಡುವ ಹುನ್ನಾರ ನಡೆದಿದೆ. ಜನ ಮನಸ್ಸು ಮಾಡಿದರೆ ಯಾವ ಬದಲಾವಣೆ ಬೇಕಾದರೂ ಆಗುತ್ತದೆ. ಮೃಣಾಲ್, ಪ್ರಿಯಾಂಕಾ ಎಂಪಿ ಆಗುವುದರಲ್ಲಿ ಸಂಶಯವೇ ಇಲ್ಲ. ಚಿಕ್ಕ ವಯಸ್ಸಿನ ಸಂಸದರನ್ನು ಸಂಸತ್ತಿಗೆ ಕಳಿಸಿ ಕೊಟ್ಟ ಶ್ರೇಯ ಬೆಳಗಾವಿ ಮತ್ತು ಚಿಕ್ಕೋಡಿಗೆ ಸಲ್ಲಲಿದೆ ಎಂದು ಹೇಳಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಲೋಕಲ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿಕೊಂಡರು.
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳು ಇಡೀ ದೇಶದ ಗಮನ ಸೆಳೆದಿವೆ. ಕಾರಣ ಇಲ್ಲಿ ಕಾಂಗ್ರೆಸ್ ಯುವಕರಿಗೆ ಅವಕಾಶ ಮಾಡಿಕೊಟ್ಟಿದೆ. ಸತೀಶ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಸೇರಿದಂತೆ ಜಿಲ್ಲೆಯ ಎಲ್ಲ ನಾಯಕರ ಆಶೀರ್ವಾದದಿಂದ ನನ್ನ ಪುತ್ರನಿಗೆ ಟಿಕೆಟ್ ಸಿಕ್ಕಿದ್ದು, ಇವರಿಗೆಲ್ಲಾ ನಾನು ಚಿರಋಣಿ. ಇನ್ನು ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳನ್ನು ಖಂಡಿತವಾಗಲೂ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಭೆಯಲ್ಲಿ ಬೆಳಗಾವಿ ಉತ್ತರ ಶಾಸಕ ಆಸೀಫ್(ರಾಜು) ಸೇಠ್, ಮಾಜಿ ಸಚಿವ ಎ.ಬಿ.ಪಾಟೀಲ, ಶಶಿಕಾಂತ ನಾಯಿಕ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಎಸ್.ಕಿವಡಸಣ್ಣವರ, ಆರ್.ಪಿ.ಪಾಟೀಲ, ಯುವರಾಜ ಕದಂ, ಕಿರಣ ಸಾಧುನವರ್ ಸೇರಿ ಹಲವರು ಇದ್ದರು.ಬಾಕ್ಸ್ಆಶೀರ್ವಾದ ಮಾಡಿ ಎಂದ ಮೃಣಾಲ್ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್, ಯುವಕರೇ ಈ ದೇಶದ ಆಸ್ತಿ, ಭವಿಷ್ಯ ಎಂದು ಬೆಳಗಾವಿಯಲ್ಲಿ ನನಗೆ ಮತ್ತು ಚಿಕ್ಕೋಡಿಯಲ್ಲಿ ಸಹೋದರಿ ಪ್ರಿಯಾಂಕಾಗೆ ಪಕ್ಷದ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ. ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ಸರ್ಕಾರ ತಲುಪಿಸಿದೆ. ಇದರಿಂದ ಜನ ಖುಷಿಯಲ್ಲಿದ್ದಾರೆ. ನನಗೊಂದು ಸುವರ್ಣಾವಕಾಶ ಸಿಕ್ಕಿದ್ದು, ದಯವಿಟ್ಟು ನನಗೆ ನೀವು ಆಶೀರ್ವಾದ ಮಾಡುವಂತೆ ಮನವಿ ಮಾಡಿಕೊಂಡರು.
ಮೃಣಾಲ್ ಮತ್ತು ಪ್ರಿಯಾಂಕಾ ಇಬ್ಬರೂ ತಮ್ಮ ಭವಿಷ್ಯವನ್ನು ತ್ಯಾಗ ಮಾಡಿ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಎಂಪಿ ಆಗುವ ಅವಶ್ಯಕತೆ ಇರಲಿಲ್ಲ. ವಿದೇಶದಲ್ಲಿ ಉನ್ನತ ಹುದ್ದೆಯಲ್ಲಿ ಆರಾಮವಾಗಿ ಇರಬಹುದಿತ್ತು. ಆದರೆ, ನಮ್ಮ ಒತ್ತಾಯಕ್ಕೆ ಜನರ ಸೇವೆ ಮಾಡಲು ಚುನಾವಣೆ ಕಣಕ್ಕೆ ಧುಮುಕಿದ್ದಾರೆ. ಒಂದಿಷ್ಟು ಜನರು ಇವ್ರು ಸಣ್ಣವರು ಎನ್ನುತ್ತಿದ್ದಾರೆ. ಈಗ ಸಣ್ಣವರೇ ಮುಂದೆ ದೊಡ್ಡವರಾಗುತ್ತಾರೆ. ರಾಜಕೀಯ ಹೊಸದಾಗಿ ಇರಬಹುದು. ಆದರೆ, ನಾಲ್ಕೈದು ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದಾರೆ.
ಸತೀಶ ಜಾರಕಿಹೊಳಿ, ಸಚಿವ.