;Resize=(412,232))
ಸುವರ್ಣ ವಿಧಾನಸೌಧ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾದರಿಯಲ್ಲಿಯೇ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಒಸಿ ಇಲ್ಲದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಪಡೆಯಲಾಗದೆ ಸಮಸ್ಯೆ ಅನುಭವಿಸುತ್ತಿರುವ ಲಕ್ಷಾಂತರ ಮನೆ ಮಾಲೀಕರಿಗೆ ಅನುಕೂಲವಾಗಲಿದೆ. 1,200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ದೊರೆಯಲಿದೆ.
ಸುಪ್ರೀಂಕೋರ್ಟ್ ಆದೇಶದಿಂದ ಸಿಸಿ, ಒಸಿಯಿಲ್ಲದ ಮನೆ ನಿರ್ಮಿಸಿರುವವರಿಗೆ ಮೂಲಸೌಕರ್ಯ ನೀಡಲು ಸರ್ಕಾರಕ್ಕೆ ಸಮಸ್ಯೆ ಎದುರಾಗಿತ್ತು. ಅದನ್ನು ನಿವಾರಿಸುವ ಸಲುವಾಗಿ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ (ಕಟ್ಟಡಗಳ ನಿರ್ಮಾಣದ ಮೇಲೆ ಜಿಲ್ಲಾ ಪಂಚಾಯಿತಿಗಳ, ತಾಲೂಕು ಪಂಚಾಯತಿಗಳ ಮತ್ತು ಗ್ರಾಮ ಪಂಚಾಯಿತಿಗಳ ನಿಯಂತ್ರಣ (ಎರಡನೇ ತಿದ್ದುಪಡಿ) ಮಾದರಿ ಉಪ ವಿಧಿಗಳ ಅಡಿಯಲ್ಲಿ ಒಸಿ, ಸಿಸಿ ಇಲ್ಲದ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ.