ಕನ್ನಡಪ್ರಭ ವಾರ್ತೆ ಬೆಳಗಾವಿಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿಲ್ಲ. ಬೆಳಗಾವಿಯಲ್ಲಿ ಬಿಜೆಪಿ ಸಂಘಟಿತ ಹೋರಾಟ ಮಾಡಿತ್ತು. ಚಿಕ್ಕೋಡಿಯಲ್ಲಿ ಅದರ ಕೊರತೆ ಎದ್ದು ಕಂಡಿತ್ತು. ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರದಲ್ಲಿ ಜಗದೀಶ ಶೆಟ್ಟರ್ ಗೆಲುವಿಗಾಗಿ ಅನೇಕ ನಾಯಕರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಿದ್ದಾರೆ. ಭಾಷೆಗಿಂತ ರಾಷ್ಟ್ರ ಮೊದಲು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ನಮ್ಮೊಂದಿಗೆ ಕೈ ಜೋಡಿಸಿದ್ದಾರೆ. ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರವೊಂದರಲ್ಲೇ ಬಿಜೆಪಿಗೆ 73 ಸಾವಿರ ಮತಗಳ ಮುನ್ನಡೆ ಸಿಕ್ಕಿದೆ. ಈ ಗೆಲುವನ್ನು ಎಲ್ಲ ನಾಯಕರು ಮತ್ತು ಕಾರ್ಯಕರ್ತರ ಬಳಗಕ್ಕೆ ಅರ್ಪಿಸುತ್ತೇವೆ ಎಂದು ತಿಳಿಸಿದರು.ಎಂಇಎಸ್ ನಾಯಕರು ಸಹ ಬಹಿರಂಗವಾಗಿ ರಾಷ್ಟ್ರೀಯತೆಯ ಆಧಾರದ ಮೇಲೆ ಬಿಜೆಪಿಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ 50 ಸಾವಿರ ಲೀಡ್ ಪಡೆದು ಬಿಜೆಪಿ ಗೆದ್ದು ಬರಲು ಕಾರಣವಾಯಿತು. ಕಳೆದ ಮೂರು ವರ್ಷದಿಂದ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಆಕಾಂಕ್ಷಿಯಾಗಿದ್ದೆ. ಈ ಹಿನ್ನೆಲೆಯಲ್ಲಿ ನಾನು ಚಿಕ್ಕೋಡಿಗೆ ಹೆಚ್ಚಿಗೆ ಹೋಗಲು ಸಾಧ್ಯವಾಗಲಿಲ್ಲ. ನಾನು ಬೆಳಗಾವಿಗೆ ಹೆಚ್ಚಿನ ಆದ್ಯತೆ ನೀಡಿದ್ದೆ. ಬೇರೆವರಿಗೆ ಜವಾಬ್ದಾರಿ ನೀಡಿದ್ದರು. ಚಿಕ್ಕೋಡಿ ಸೋಲಿಗೆ ನಾನಾ ಕಾರಣ ಇರಬಹುದು. ರಾಜ್ಯಮಟ್ಟದ ನಾಯಕರು ಈ ಕುರಿತು ಚರ್ಚೆ ನಡೆಸುತ್ತಾರೆ ಎಂದರು.ಜಗದೀಶ ಶೆಟ್ಟರ್ ತಮ್ಮ ಬೆಂಬಲಿಗರು ಅಭಿನಂದನೆ ಸಮಾರಂಭ ಹಮ್ಮಿಕೊಂಡಿದ್ದಕ್ಕೆ ಹುಬ್ಬಳ್ಳಿಗೆ ಹೋಗಿರಬಹುದು. ಈಗ ಅವರು ಬೆಳಗಾವಿ ಸಂಸದ. ಬೆಳಗಾವಿ ನಗರದಲ್ಲೇ ವಾಸವಿದ್ದು, ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸಲಿದ್ದಾರೆ. ಬೆಳಗಾವಿ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅಭ್ಯರ್ಥಿ ಎಂದು ಘೋಷಿಸಲು ತಡವಾಯಿತು. ಇದರಿಂದಾಗಿ ಪ್ರಚಾರವೂ ವಿಳಂಬವಾಯಿತು. ಎರಡೂ ವಾರ ಮೊದಲೇ ಅಭ್ಯರ್ಥಿ ಘೋಷಿಸಿದ್ದರೇ ಲೀಡ್ ಪ್ರಮಾಣ ಮತ್ತಷ್ಟು ಹೆಚ್ಚುತ್ತಿತ್ತು ಎಂದರು.
-ಮಹಾಂತೇಶ ಕವಟಗಿಮಠ,
ವಿಧಾನ ಪರಿಷತ್ತಿನ ಮಾಜಿ ಸದಸ್ಯ.ಚಿಕ್ಕೋಡಿ: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ ಸೋಲನ್ನು ಸವಾಲಾಗಿ ಸ್ವೀಕರಿಸುತ್ತ ಧೃತಿಗೆಡದೇ ಧೈರ್ಯದಿಂದ ಮತ್ತೆ ಪಕ್ಷ ಸಂಘಟಿಸೋಣ ಎಂದು ಚಿಕ್ಕೋಡಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ ಅಪ್ಪಾಜಿಗೋಳ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿದ ಪಕ್ಷದ ಎಲ್ಲ ಕಾರ್ಯಕರ್ತ, ಬಂಧು-ಭಗಿಣಿಯರು ಪಕ್ಷದ ಎಲ್ಲ ನಾಯಕರು ಹಾಗೂ ಪಕ್ಷದ ಎಲ್ಲ ಪದಾಧಿಕಾರಿಗಳು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ್ದ ಎಲ್ಲ ಮಹನಿಯರಿಗೂ ಹಾಗೂ ಬಿಜೆಪಿ ಪಕ್ಷಕ್ಕೆ ಮತದಾನ ಮಾಡಿದ ಎಲ್ಲ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.