ಬೆಳಗಾವಿ ಕ್ಷೇತ್ರಕ್ಕೆ ಶೆಟ್ಟರ್‌ ಹೆಸರಿದೆ

KannadaprabhaNewsNetwork |  
Published : Mar 15, 2024, 01:19 AM ISTUpdated : Mar 15, 2024, 12:51 PM IST
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗುರುವಾರ ಶ್ರೀ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. | Kannada Prabha

ಸಾರಾಂಶ

ಬೆಳಗಾವಿ ಲೋಕಸಭಾ ಚುನಾವಣೆ ಕಣಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೆಸರು ಇದೆ. ಬೇರೆಯವರ ಹೆಸರೂ ಇವೆ. ಯಾರಿಗೆ ಟಿಕೆಟ್‌ ನೀಡಬೇಕು ಎಂಬುದನ್ನು ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನಿಸಿ ಅಂತಿಮಗೊಳಿಸಲಿದ್ದಾರೆ.

ಹುಬ್ಬಳ್ಳಿ-ಧಾರವಾಡ:

ಬೆಳಗಾವಿ ಲೋಕಸಭಾ ಚುನಾವಣೆ ಕಣಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೆಸರು ಇದೆ. ಬೇರೆಯವರ ಹೆಸರೂ ಇವೆ. ಯಾರಿಗೆ ಟಿಕೆಟ್‌ ನೀಡಬೇಕು ಎಂಬುದನ್ನು ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನಿಸಿ ಅಂತಿಮಗೊಳಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. 

ಶೆಟ್ಟರ್‌ ಅವರಿಗೆ ಬೆಳಗಾವಿ ಅಥವಾ ಎಲ್ಲಿಯೇ ಟಿಕೆಟ್ ಸಿಕ್ಕರೂ ಸಂತೋಷ ಪಡುತ್ತೇನೆ. ಅವರು ನಮ್ಮ ಪಕ್ಷದ ಹಿರಿಯ ನಾಯಕರು. ನರೇಂದ್ರ ಮೋದಿ ನೇತೃತ್ವದಲ್ಲಿ ಯಾರೂ ಬಿಜೆಪಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ಮುಂದೂಡಲಾಗಿದೆ. ಎಲ್ಲ ಅಭ್ಯರ್ಥಿಗಳ ಹೆಸರು ಪ್ರಕಟವಾದ ಬಳಿಕ ಪ್ರವಾಸದ ವೇಳೆ ನಿಗದಿಯಾಗಲಿದೆ. 

ಎಲ್ಲ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಣೆ ಕುರಿತು ನಾಯಕರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸಹಕಾರದಿಂದ ನನಗೆ ಮತ್ತೊಮ್ಮೆ ಟಿಕೆಟ್ ಸಿಕ್ಕಿದೆ. 

ಐದನೆಯ ಬಾರಿ ನಾನು ಜನರ ಆಶೀರ್ವಾದ ಕೇಳಲು ಬಂದಿದ್ದೇನೆ. ಸಾಕಷ್ಟು ಕೆಲಸ ಮಾಡಿದ್ದನ್ನು ಜನರು ನೋಡಿದ್ದಾರೆ ಎಂದರು.

ಪ್ರಧಾನಿ ಮೋದಿ ಅವರ ಜತೆ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ಕಾಮಗಾರಿಗಳಿಗೆ ಶ್ರಮಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಿದ್ದೇನೆ. ಹಾಗೆಯೇ ಧಾರವಾಡ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ ಎಂದರು.

ಬಿ.ಎಸ್‌. ಯಡಿಯೂರಪ್ಪ ಅವರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಎಂಬ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಆರೋಪಕ್ಕೆ ಉತ್ತರಿಸಿದ ಜೋಶಿ, ಅವರ ಪುತ್ರನಿಗೆ ಲೋಕಸಭಾ ಚುನಾವಣೆಯ ಟಿಕೆಟ್‌ ದೊರೆತಿಲ್ಲ. 

ಹಾಗಾಗಿ ಅವರಿಗೆ ಬೇಜಾರಾಗಿದೆ. ರಾಷ್ಟ್ರೀಯ ಅಧ್ಯಕ್ಷರು ಇಂತಹ ಸಣ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂದು ಹೇಳಿದರು.

ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡಿದ್ದಾರೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಅರ್ಥದಲ್ಲಿ ಟಿಕೆಟ್ ಹಂಚಿಕೆಯಾಗಿದೆ. 

ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಅಭೂತಪೂರ್ವ ಬದಲಾವಣೆಯಾಗಿದೆ. ಆರ್ಥಿಕ, ಭದ್ರತೆ, ಮೂಲಭೂತ ಸೌಲಭ್ಯ ಸೇರಿ ಎಲ್ಲ ಕ್ಷೇತ್ರದಲ್ಲಿ ಸುಧಾರಣೆಯಾಗಿದೆ. 

ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ದೊಡ್ಡ ಜವಾಬ್ದಾರಿ ನನಗೆ ಕೊಟ್ಟಿದ್ದರು. ಅಭಿವೃದ್ಧಿ ಕೆಲಸದ ಜತೆ ಜನರೊಂದಿಗೆ ಸಂಪರ್ಕದಲ್ಲಿದ್ದೇನೆ. 

ಈ ಬಾರಿ ಚುನಾವಣೆಯಲ್ಲಿ ಮೂರೂವರೆ ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಯಾರು ರೆಬಲ್‌ ಆಗಲ್ಲ: ಕೆಲವು ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾರೂ ರೆಬೆಲ್ ಆಗುವುದಿಲ್ಲ. ಎಲ್ಲರೊಂದಿಗೆ ಮಾತನಾಡುವೆ. 3-4 ಸಲ ಟಿಕೆಟ್ ಪಡೆದವರಿದ್ದಾರೆ. 

ಅದರಲ್ಲಿ ಕೆಲವರನ್ನು ಮುಂದುವರಿಸಿದ್ದಾರೆ. ಸದ್ಯದ ರಾಜಕೀಯ ಸ್ಥಿತಿ-ಗತಿ ನೋಡಿ ನಿರ್ಣಯ ಮಾಡಿದ್ದಾರೆ. ಎಲ್ಲರೂ ಪಕ್ಷಕ್ಕೆ ಅನಿವಾರ್ಯ. ಎಲ್ಲರೊಂದಿಗೆ ಮಾತನಾಡಿ ಸರಿಪಡಿಸಲಾಗುವುದು ಎಂದರು. 

ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಆ ರೀತಿ ಏನೂ ಗಮನಕ್ಕೆ ಬಂದಿಲ್ಲ. ಅವರೊಂದಿಗೆ ನಾನು ಮಾತನಾಡುತ್ತೇನೆ. 

ನಾಲ್ಕು ಅವಧಿ ಮುಗಿಸಿ 5ನೇ ಬಾರಿಗೆ ಪದಾರ್ಪಣೆ ಮಾಡುತ್ತಿದ್ದೇನೆ. ವಿಕಸಿತ ಭಾರತದಲ್ಲಿ ವಿಕಸಿತ ಧಾರವಾಡ ಆಗುತ್ತಿದೆ. ಜನ ಮತ್ತೆ ಆಶೀರ್ವಾದ ಮಾಡುತ್ತಾರೆ. ಇದು ದಾಖಲೆಯೂ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ