ಬೆಳಗಾವಿ ಡಿಸಿಸಿ ಬ್ಯಾಂಕಿಗೆ ಕೈ-ಕಮಲ ಅಧಿಕಾರ!

KannadaprabhaNewsNetwork |  
Published : Nov 11, 2025, 02:00 AM IST

ಸಾರಾಂಶ

ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ಕಾಗವಾಡ ಶಾಸಕ ಭರಮಗೌಡ (ರಾಜು) ಕಾಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ಕಾಗವಾಡ ಶಾಸಕ ಭರಮಗೌಡ (ರಾಜು) ಕಾಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 30 ತಿಂಗಳ ಅವಧಿಗೆ ಅಧಿಕಾರ ಹಂಚಿಕೆ ಮಾಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಅರಭಾವಿ ಶಾಸಕ ಮತ್ತು ಬೆಮುಲ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಬೆಂಬಲಿಗರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದರು. ಬಳಿಕ, ಅಧ್ಯಕ್ಷರನ್ನಾಗಿ ಅಣ್ಣಾಸಾಹೇಬ ಜೊಲ್ಲೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ತೀರ್ಮಾನಿಸಲಾಯಿತು. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದರು.

ಚುನಾವಣಾ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸೋಮವಾರ ದಿನವಿಡೀ ಜಾರಕಿಹೊಳಿ ಬಣ ಹಾಗೂ ರಮೇಶ ಕತ್ತಿ-ಲಕ್ಷ್ಮಣ ಸವದಿ ಬಣದಿಂದ ತೀವ್ರ ರಾಜಕೀಯ ಚಟುವಟಿಕೆಗಳು ನಡೆದವು. ಎರಡೂ ಬಣಗಳಿಂದ ತಂತ್ರ, ಪ್ರತಿತಂತ್ರ ರೂಪಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸಭೆಗಳು ನಡೆದವು.

ಇತ್ತೀಚೆಗೆ ನಡೆದ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಜಾರಕಿಹೊಳಿ ಬಣ 13 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿತ್ತು. ಹೀಗಾಗಿ, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಜಾರಕಿಹೊಳಿ ಬಣ ಮೇಲುಗೈ ಸಾಧಿಸಿದೆ. ಜಾರಕಿಹೊಳಿ ಸಹೋದರರು ಲಿಂಗಾಯತರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ ನೀಡಿದ್ದ ಭರವಸೆಯಂತೆಯೇ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳಿಗೆ ಲಿಂಗಾಯತರಿಗೆ ಆದ್ಯತೆ ನೀಡಿದ್ದಾರೆ.

(ಬಾಕ್ಸ್‌):

30-30 ತಿಂಗಳು ಅಧಿಕಾರ ಹಂಚಿಕೆ:

ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, 30 ತಿಂಗಳ ಅವಧಿಗೆ ಅಧಿಕಾರ ಹಂಚಿಕೆ ಮಾಡಲಾಗಿದೆ. ಬಿಜೆಪಿಗೆ ಅಧ್ಯಕ್ಷ ಸ್ಥಾನ, ಕಾಂಗ್ರೆಸ್‌ಗೆ ಉಪಾಧ್ಯಕ್ಷ ಸ್ಥಾನ ಹಂಚಿಕೊಂಡಿದ್ದೇವೆ. ಈ ಹಿಂದೆ ನಾವು 3 ಜನ ಇದ್ದರೂ ಬಿಜೆಪಿಯವರು ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದೇವೆ. ಜೊಲ್ಲೆಯವರು ನಮ್ಮನ್ನು ನಂಬಿ ಬಂದಿದ್ದರು. ಹೀಗಾಗಿ ಜೊಲ್ಲೆಯವರನ್ನು ಗೆಲ್ಲಿಸಿ, ಅಧ್ಯಕ್ಷರನ್ನಾಗಿ ಮಾಡಿದ್ದೇವೆ ಎಂದು ತಿಳಿಸಿದರು.++++

(ಬಾಕ್ಸ್‌):

ನುಡಿದಂತೆ ನಡೆದಿದ್ದೇವೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಎಲ್ಲಾ ಸದಸ್ಯರ ಜೊತೆಗೆ ಚರ್ಚೆ ಮಾಡಿ, ಡಿಸಿಸಿ ಬ್ಯಾಂಕಿಗೆ ಅಧ್ಯಕ್ಷರನ್ನಾಗಿ ಅಣ್ಣಾಸಾಹೇಬ್ ಜೊಲ್ಲೆ, ಉಪಾಧ್ಯಕ್ಷರನ್ನಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಎರಡೂ ಸ್ಥಾನವನ್ನು ಲಿಂಗಾಯತ ಸಮಾಜಕ್ಕೆ ನೀಡಿದ್ದೇವೆ. ಮೂರು ಜನ ಅಣ್ತಮ್ಮಂದಿರು ಸೇರಿಕೊಂಡು ಜೊಲ್ಲೆಯನ್ನು ಗೆಲ್ಲಿಸಿ, ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಐದು ವರ್ಷದಲ್ಲಿ ಬ್ಯಾಂಕ್ ನ್ನು ಒಂದನೇ ಸ್ಥಾನಕ್ಕೆ ತರುತ್ತೇವೆ ಎಂದರು.

ಕೋಟ್‌:

ನಂ.1 ಸ್ಥಾನಕ್ಕೆ ತರಲು ಪ್ರಯತ್ನ: ಜೊಲ್ಲೆ

ಜಾರಕಿಹೊಳಿ ಸಹೋದರರು ನನ್ನ ಮೇಲೆ ವಿಶ್ವಾಸ ಇಟ್ಟಕೊಂಡು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ನಾನು, ಉಪಾಧ್ಯಕ್ಷ ರಾಜು ಕಾಗೆ ಸೇರಿಕೊಂಡು ಬರುವ ಐದು‌ ವರ್ಷದಲ್ಲಿ ಡಿಸಿಸಿ ಬ್ಯಾಂಕ್ ನ್ನು ನಂಬರ್ ಒನ್ ಸ್ಥಾನಕ್ಕೆ ತರುವ ಪ್ರಯತ್ನ ಮಾಡುತ್ತೇವೆ.

- ಅಣ್ಣಾಸಾಹೇಬ್ ಜೊಲ್ಲೆ, ಡಿಸಿಸಿ ಬ್ಯಾಂಕಿನ ನೂತನ ಅಧ್ಯಕ್ಷ.

ಮಾದರಿ ಬ್ಯಾಂಕ್ ಮಾಡ್ತೇವೆ: ಕಾಗೆ

ವಯಸ್ಸಿನಲ್ಲಿ ಡಿಸಿಸಿ ಬ್ಯಾಂಕ್‌ನಲ್ಲಿ ನಾನೇ‌ ಹಿರಿಯ. ಎಲ್ಲ ನಿರ್ದೇಶಕರಲ್ಲಿ ಸಣ್ಣ-ಪುಟ್ಟ ‌ಮನಸ್ತಾಪ ಇದ್ದರೂ ಅದನ್ನು ಬಗೆಹರಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸಲಾಗುವುದು. ನಾವು ಸಹಕಾರ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಎಲ್ಲ ಸದಸ್ಯರು ಸೇರಿಕೊಂಡು ಡಿಸಿಸಿ ಬ್ಯಾಂಕ್ ನ್ನು ಮಾದರಿಯನ್ನಾಗಿ ಮಾಡುತ್ತೇವೆ.

- ರಾಜು ಕಾಗೆ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ