ಕನ್ನಡಪ್ರಭ ವಾರ್ತೆ ಬೆಳಗಾವಿ
ಬುಧವಾರ ನಡೆದ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗಡಿ ವಿಚಾರ ಮತ್ತೆ ಪ್ರಮುಖ ಚರ್ಚೆಯ ವಿಷಯವಾಗಿ ಹೊರಹೊಮ್ಮಿತು. ಸಭೆ ಆರಂಭವಾಗುತ್ತಿದ್ದಂತೆಯೇ ನಾಮನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ವಿಷಯ ಪ್ರಸ್ತಾಪಿಸಿ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಬೇಕು ಎಂದು ಮನವಿ ಮಾಡಿದರು. ಕನ್ನಡಪರ ಸಂಘಟನೆಗಳ ಆಶಯದಂತೆ ಪಾಲಿಕೆ ಸ್ಪಷ್ಟ ನಿಲುವು ಪ್ರಕಟಿಸಬೇಕೆಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಕನ್ನಡಪರ ಸದಸ್ಯರು, ಬೆಳಗಾವಿ ಕುರಿತು ಪದೇ ಪದೆ ಗೊಂದಲ ಸೃಷ್ಟಿಸಲು ಕೆಲ ಸಂಘಟನೆಗಳು ಪ್ರಯತ್ನಿಸುತ್ತಿದ್ದು, ಮಹಾನಗರ ಪಾಲಿಕೆ ಅಧಿಕೃತವಾಗಿ ತನ್ನ ನಿಲುವು ಪ್ರಕಟಿಸುವುದು ಅಗತ್ಯ. ರಾಜ್ಯ ಸರ್ಕಾರ, ಸುವರ್ಣ ವಿಧಾನಸೌಧ, ಹೈಕೋರ್ಟ್ ಪೀಠ ಸೇರಿದಂತೆ ಅನೇಕ ಆಡಳಿತಾತ್ಮಕ ವ್ಯವಸ್ಥೆಗಳು ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿರುವಾಗ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ವಿಷಯದಲ್ಲಿ ಯಾವುದೇ ಅನುಮಾನವೇ ಇಲ್ಲ. ಹೀಗಾಗಿ ನಿರ್ಣಯ ಅಂಗೀಕರಿಸಿ ವಿವಾದ ಅಂತ್ಯಗೊಳಿಸಬೇಕೆಂದು ಆಗ್ರಹಿಸಿದರು.ಈ ಪ್ರಸ್ತಾವಕ್ಕೆ ಎಂಇಎಸ್ ಬೆಂಬಲಿತ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿದ್ದು, ಈ ವಿಚಾರದಲ್ಲಿ ಪಾಲಿಕೆ ಯಾವುದೇ ನಿರ್ಣಯ ಕೈಗೊಳ್ಳಬಾರದು ಎಂದು ಅವರು ಪಟ್ಟು ಹಿಡಿದರು. ಇದರಿಂದ ಸಭೆಯಲ್ಲಿ ಕೆಲಕಾಲ ತೀವ್ರ ವಾಗ್ವಾದ ನಡೆಯಿತು. ಕನ್ನಡಪರ ಮತ್ತು ಎಂಇಎಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸಭೆಯಲ್ಲಿ ಗದ್ದಲ ಉಂಟಾಯಿತು.
ಈ ವೇಳೆ ಮೇಯರ್ ಪ್ರೀತಿ ಕಾಮಕರ ಈ ವಿಚಾರದಲ್ಲಿ ಸ್ಪಷ್ಟ ನಿಲುವು ಪ್ರಕಟಿಸದೆ, ಈ ವಿಷಯ ಸಭೆಯಲ್ಲಿ ಚರ್ಚೆಗೆ ಅವಕಾಶ ಇದೆಯೇ ಎಂಬುದರ ಕುರಿತು ನಗರಾಭಿವೃದ್ಧಿ ಇಲಾಖೆಯಿಂದ ಅಭಿಪ್ರಾಯ ಪಡೆಯಲಾಗುವುದು ಎಂದು ರೂಲಿಂಗ್ ನೀಡಿದರು. ಬಳಿಕ, ಕರ್ನಾಟಕ ಪರ ನಿರ್ಣಯ ಕೈಗೊಳ್ಳಲು ಸರ್ಕಾರ ಹಾಗೂ ನಗರಾಭಿವೃದ್ಧಿ ಇಲಾಖೆಯ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದರು.
ಬಿಗಿ ಪೊಲೀಸ್ ಬಂದೋಬಸ್ತ್
ಗಡಿ ವಿಚಾರ ಮತ್ತೆ ಪಾಲಿಕೆ ಸಭೆಯಲ್ಲಿ ಚರ್ಚೆಗೆ ಗ್ರಾಸವಾಗಿರುವುದು ಬೆಳಗಾವಿಯ ರಾಜಕೀಯ ಮತ್ತು ಭಾಷಾ ವಾತಾವರಣಕ್ಕೆ ಹೊಸ ಚರ್ಚೆಗೆ ಕಾರಣವಾಗಿದೆ. ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸಲು ವಿಫಲರಾದ ಮೇಯರ್ ಹಾಗೂ ಉಪ ಮೇಯರ್ ವಿರುದ್ಧ ರಾಜ್ಯವ್ಯಾಪಿ ಚಳವಳಿ ವಿಸ್ತರಿಸಲಾಗುವುದು. ಅಲ್ಲದೆ,ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಬೆಂಗಳೂರಿನ ಕನ್ನಡಪರ ಸಂಘಟನೆಗಳ ನಾಯಕರು ಭೇಟಿ ಮಾಡಿ, ಬೆಳಗಾವಿ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮುಖಂಡರ ಕರ್ನಾಟಕ ಹಾಗೂ ಕನ್ನಡ ವಿರೋಧಿ ನಿಲುವಿನ ಬಗ್ಗೆ ಗಮನಕ್ಕೆ ತರಲಾಗುವುದು ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.
ಸಭೆಯಲ್ಲಿ ಆಡಳಿತ, ಪ್ರತಿಪಕ್ಷ ಮೌನ
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಅಂಗೀಕಾರದ ಕುರಿತ ಚರ್ಚೆ ತೀವ್ರ ಸ್ವರೂಪ ಪಡೆದಿತ್ತು. ಆದರೆ, ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರಿಂದ ಸ್ಪಷ್ಟ ಬೆಂಬಲ ವ್ಯಕ್ತವಾಗಲಿಲ್ಲ. ಇದರಿಂದ ಸಭೆಯಲ್ಲಿ ಉಪಸ್ಥಿತರಿದ್ದ ಕನ್ನಡಪರ ಸದಸ್ಯರಲ್ಲಿ ಅಸಮಾಧಾನ ಮೂಡಿಸಿತು.
ಹೊರಗೆ ಪ್ರತಿಭಟನೆ
ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ ನಿರ್ಣಯ ಅಂಗೀಕಾರ ಕುರಿತು ಪಾಲಿಕೆ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿ ವಾಗ್ವಾದಕ್ಕೆ ಕಾರಣವಾದರೆ, ಅತ್ತ ಪಾಲಿಕೆ ಹೊರಗೆ ಕನ್ನಡಪರ ಸಂಘಟನೆಗಳು ಸ್ಪಷ್ಟ ನಿರ್ಣಯ ಅಂಗೀಕರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.------
ಕೋಟ್....ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸುವಂತೆ ಆಗ್ರಹಿಸಿ ಕಳೆದ ಮಾರ್ಚ್ 26ರಿಂದ ಕನ್ನಡ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಈ ನಡುವೆ ಮೇಯರ್ ಹಾಗೂ ಉಪ ಮೇಯರ್ ನೀಡಿದ್ದ ಭರವಸೆಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವುದು ಕನ್ನಡಿಗರಿಗೆ ಹಾಗೂ ಕರ್ನಾಟಕಕ್ಕೆ ಬಗೆದ ದ್ರೋಹ. ಇದರ ಫಲವನ್ನು ಅವರು ಅನುಭವಿಸಬೇಕಾಗುತ್ತದೆ. ಶೀಘ್ರವೇ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಗಳ ಸಭೆಗಳನ್ನು ನಡೆಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು.
ಅಶೋಕ ಚಂದರಗಿ, ಅಧ್ಯಕ್ಷರು, ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ