ಕೊಪ್ಪಳ:
ರಾಜ್ಯ ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಜಿಲ್ಲೆಯ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದುಕೊಂಡು ಹೋಗಲು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಮೇ 20ರಂದು ಹೊಸಪೇಟೆಯಲ್ಲಿ ನಡೆಯುವ ಸಾಧನಾ ಸಮಾವೇಶದಲ್ಲಿ ಕಂದಾಯ ಗ್ರಾಮ, ಜಂಪ್ ಸರ್ವೇ, ಪೋಡಿ ಮುಕ್ತ ಗ್ರಾಮ ಸೇರಿದಂತೆ ಇತರೆ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಿಸಲಾಗುವುದು. ಈ ಕಾರ್ಯಕ್ರಮಕ್ಕಾಗಿ ಜಿಲ್ಲೆಯ ಫಲಾನುಭವಿಗಳನ್ನು ಕರೆದೊಯ್ಯಲು ಬಸ್ ವ್ಯವಸ್ಥೆ, ಬೆಳಗಿನ ಉಪಹಾರ, ಕುಡಿಯುವ ನೀರು, ಮಧ್ಯಾಹ್ನದ ಊಟದ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ತೊಂದರೆಯಾಗಬಾರದು. ಕಾರ್ಯಕ್ರಮದ ನಂತರ ಫಲಾನುಭವಿಗಳನ್ನು ಅವರ ಮೂಲ ಸ್ಥಾನಗಳಿಗೆ ಸುರಕ್ಷಿತವಾಗಿ ತಲುಪಿಸಲು ಕ್ರಮವಹಿಸಬೇಕು. ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕೆಂದು ಸೂಚಿಸಿದರು.ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಸಾಧನಾ ಸಮಾವೇಶಕ್ಕಾಗಿ ಜಿಲ್ಲೆಯಿಂದ 18,270 ಫಲಾನುಭವಿಗಳನ್ನು ಕರೆದೊಯ್ಯುವ ಗುರಿ ಹೊಂದಿದ್ದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ 250 ಮತ್ತು ಶಾಲಾ ವಾಹನ ಒಳಗೊಂಡಂತೆ 125 ಖಾಸಗಿ ಬಸ್ ಸೇರಿ ಒಟ್ಟು 375 ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಸೇರಿದಂತೆ ತಹಸೀಲ್ದಾರ್ರು, ತಾಪಂ ಇಒ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.1 ಲಕ್ಷಕ್ಕೂ ಅಧಿಕ ಹಕ್ಕುಪತ್ರ ವಿತರಣೆಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶಿವರಾಜ ತಂಗಡಗಿ, ಸರ್ಕಾರದ ಸಾಧನಾ ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಸಮರ್ಪಣಾ ಸಮಾವೇಶವನ್ನು ಹೊಸಪೇಟೆಯಲ್ಲಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವು ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಲಿದೆ ಎಂದರು.
ಈ ಹಿಂದೆ ಕೇವಲ ಕಂದಾಯ ಗ್ರಾಮಗಳೆಂದು ಘೋಷಣೆಯಾಗಿ ಉಳಿದಿದ್ದ ಗ್ರಾಮಗಳನ್ನು ನಮ್ಮ ಸರ್ಕಾರ ಪೋಡಿಮುಕ್ತ ಗ್ರಾಮಗಳನ್ನಾಗಿ ಮಾಡಿ, ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಮಹತ್ತರವಾದ ಸಾಧನೆ ಮಾಡಿದೆ. ಇದರ ಜತೆಗೆ ಇ-ಸ್ವತ್ತಿನ ಮೂಲಕ ನೋಂದಣಿ ಮಾಡಿಸಿದೆ. ಸ್ವ ಆಸ್ತಿ ಹಕ್ಕು ಹೊಂದದೆ ಬದುಕುತ್ತಿರುವ ಕುಟುಂಬಗಳಿಗೆ ಹಕ್ಕು ನೀಡುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ವಿಶೇಷವಾಗಿ ಕೊಪ್ಪಳ ಜಿಲ್ಲೆಯಲ್ಲಿ ಕೈಗೊಂಡಿರುವ ಜಂಪ್ ಸರ್ವೇಯಡಿ 3200 ಫಲಾನುಭವಿಗಳಿಗೆ ಇದೇ ಸಮಾರಂಭದಲ್ಲಿ ಹಕ್ಕುಪತ್ರ ವಿತರಿಸಲಾಗುವುದು ಎಂದರು.