ಜನತಾ ದರ್ಶನದ ಲಾಭ ಪಡೆಯಿರಿ: ಪ್ರಿಯಾಂಕ್ ಖರ್ಗೆ

KannadaprabhaNewsNetwork |  
Published : Jan 07, 2024, 01:30 AM ISTUpdated : Jan 07, 2024, 01:31 AM IST
ಫೋಟೋ- 6ಜಿಬಿ10 | Kannada Prabha

ಸಾರಾಂಶ

ಕಲಬುರಗಿ ದಕ್ಷಿಣ- ಕಲಬುರಗಿ ಉತ್ತರ ಅಸೆಂಬ್ಲಿ ಕ್ಷೇತ್ರಗಳಲ್ಲಿ 9ರಂದು ಜನಸ್ಪಂದನ ಕಾರ್ಯಕ್ರಮ ಆಯೋಜನೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಸಾರ್ವಜನಿಕರ ಸಮಸ್ಯೆಯನ್ನು ಸ್ಥಳದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ಜ.9ರಂದು ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ “ಜನತಾ ದರ್ಶನ” ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ವಿಶೇಷವಾಗಿ ಕಲಬುರಗಿ ದಕ್ಷಿಣ ಮತ್ತು ಕಲಬುರಗಿ ಉತ್ತರ ಮತಕ್ಷೇತ್ರದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲಬುರಗಿ ನಗರದಲ್ಲಿನ ವಿವಿಧ ಸಮಸ್ಯೆಗಳನ್ನು ನೇರವಾಗಿ ಸಾರ್ವಜನಿಕರಿಂದ ಕೇಳಿ ಪರಿಹಾರ ಹುಡುಕುವ ನಿಟ್ಟಿನಲ್ಲಿ ಜನಸ್ಪಂದನಾ ಸಭೆ ಆಯೋಜಿಸಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಬರಬೇಕು. ಅಂದು ಬೆ.10.30 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಸಾರ್ವಜನಿಕ ಅಹವಾಲು ಆಲಿಸಲಾಗುತ್ತದೆ ಎಂದರು.

ಕಳೆದ ಬಾರಿ ಚಿಂಚೊಳಿಯಲ್ಲಿ ನಡೆಸಿದ ಚೊಚ್ಚಲ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ 612 ಅರ್ಜಿಗಳಲ್ಲಿ 606 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, ಕೇವಲ 6 ಅರ್ಜಿಗಳು ಮಾತ್ರ ವಿಲೇವಾರಿಗೆ ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದರು.

2023ರ ಮುಂಗಾರು ಹಿಂಗಾರಿನಲ್ಲಿ ಮಳೆರಾಯ ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಸುಮಾರು 33,000 ಕೋಟಿ ರೂ. ಬೆಳೆ ಹಾನಿಯಾಗಿದ್ದು, ಇದರಲ್ಲಿ 19,000 ಕೋಟಿ ರೂ. ಪರಿಹಾರ ನೀಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಿದ್ದು, ಇದೂವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಇದಲ್ಲದೆ ರೈತರಿಗೆ ಹೆಚ್ಚಿನ ಪರಿಹಾರ ನೀಡುವ ನಿಟ್ಟಿನಲ್ಲಿ ಎನ್.ಡಿ.ಆರ್.ಎಫ್. ಮಾರ್ಗಸೂಚಿ ತಿದ್ದುಪಡಿ ಮಾಡುವಂತೆ ಸಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳು ಖುದ್ದಾಗಿ ಪ್ರಧಾನಮಂತ್ರಿಗೆ ಭೇಟಿಯಾಗಿ ಮನವರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಮಲತಾಯಿ ದೋರಣೆ ಅನುಸರಿಸುತ್ತಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ. ಕಲಬುರಗಿ ನಗರ, ವಿವಿಧ ಪಟ್ಟಣ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ ಕಂಟಿಜೆನ್ಸ್ಟಿ ಪ್ಲ್ಯಾನ್ ಪ್ರಕಾರ ಅನುದಾನ ಬಿಡುಗಡೆ ಮಾಡಿದೆ. ಡಿ.ಸಿ. ಅವರ ಪಿ.ಡಿ. ಖಾತೆಯಲ್ಲಿ ಹಣ ಲಭ್ಯ ಇದೆ. ಪ್ರತಿ 15 ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳು ಇದರ ಬಗ್ಗೆ ಪುನರಾವಲೋಕನ ಮಾಡುತ್ತಿದ್ದಾರೆಂದರು.

ರಸ್ತೆ ಸಂಪರ್ಕ ಸುಧಾರಣೆ: ಜಿಲ್ಲೆಯಲ್ಲಿ ಗ್ರಾಮೀಣ, ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಸುಧಾರಣೆ ಮಾಡಲಾಗುತ್ತಿದೆ. ಮುಂದಿನ 4 ವರ್ಷದಲ್ಲಿ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 9,000 ಕೋಟಿ ರು.ಗೆ ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಜಿಲ್ಲೆಯಲ್ಲಿನ ರಸ್ತೆಗಳನ್ನು ತೆಗೆದುಕೊಳ್ಳುವಂತೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಲ್ಲಿ ಮನವಿ ಮಾಡಿಕೊಂಡಿದ್ದೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮುರಳಿಧರ ರತ್ನಗಿರಿ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯಯ ಸಹಾಯಕ ನಿರ್ದೇಶಕಿ ಭಾರತಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಬಳಿ ಸರ್ಕಾರಿ ಶ್ರೀಗಂಧ ಮರ ಕತ್ತರಿಸಿದ ರೈತ!
ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ