ಬೆಂಗಳೂರು : ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆ ಸುರಿಯಲಿದೆ.
ಅದರಲ್ಲೂ ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
ಮುಂಗಾರು: ಪ್ರವಾಸಿ ತಾಣದಲ್ಲಿ ಭಾರೀ ರಷ್ - ಜಲಪಾತಗಳ ಬಳಿ ಜನಸಾಗರ
ಬೆಂಗಳೂರು : ರಾಜ್ಯದ ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಮೃಗಶಿರಾ ಮಳೆ ಅಬ್ಬರಿಸುತ್ತಿದ್ದು, ಈ ಭಾಗದ ಪ್ರಮುಖ ಜಲಪಾತಗಳು, ಜಲಧಾರೆಗಳು ಮೈದಳೆದು ನಳನಳಿಸುತ್ತಿವೆ. ಹೀಗಾಗಿ ಜಲಧಾರೆಗಳ ವೈಭೋಗ ಕಣ್ತುಂಬಿಕೊಳ್ಳಲು ಜನರ ದಂಡೆ ಪ್ರವಾಸಿತಾಣಗಳಿಗೆ ಹರಿದು ಬರುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ, ಮಂಡ್ಯ-ಚಾಮರಾಜನಗರ ಜಿಲ್ಲೆಗಳ ಗಡಿಭಾಗದ ಗಗನಚುಕ್ಕಿ, ಭರಚುಕ್ಕಿ ಜಲಪಾತ, ಬೆಳಗಾವಿ ಜಿಲ್ಲೆಯ ಗೋಕಾಕ್, ಅಂಬುಲಿ ಫಾಲ್ಸ್ಗಳ ವೀಕ್ಷಣೆಗೂ ಜನರು ದಂಡಾಗಿ ಬರುತ್ತಿದ್ದಾರೆ. ವಿಖ್ಯಾತ ಜೋಗ ಫಾಲ್ಸ್, ಉಂಚಳ್ಳಿ, ಸಾತೋಡಿ, ಮಾಗೋಡು ಜಲಪಾತಗಳ ಒಡಲಲ್ಲೂ ಪ್ರವಾಸಿಗರ ದಂಡು ಕಂಡು ಬರುತ್ತಿದೆ.