ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ತಪ್ಪಿಸಿ ಅನುದಾನ ಮತ್ತು ಸಂಪನ್ಮೂಲಗಳ ದುರುಪಯೋಗ ನಿಯಂತ್ರಿಸಲು ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ’ಯನ್ನು ಜಾರಿಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ತಿಳಿದು ಬಂದಿದೆ.
ಮಕ್ಕಳ ದಾಖಲಾತಿ ಆಧಾರದ ಮೇಲೆ ಪ್ರಿ ಮೆಟ್ರಿಕ್ ಹಾಸ್ಟೆಲ್ಗಳಿಗೆ ಸರ್ಕಾರದಿಂದ ಒದಗಿಸುವ ಅನುದಾನ ಮತ್ತು ಸೌಕರ್ಯಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವುದು ಮತ್ತು ಅದನ್ನು ನಿಯಂತ್ರಿಸಲು ಕೈಗೊಳ್ಳಬಹುದಾದ ಕ್ರಮಗಳನ್ನು ಸರ್ಕಾರಕ್ಕೆ ಗಮನಕ್ಕೆ ತರಲಾಗಿದೆ. ಇಲಾಖೆಯಿಂದ ಸ್ಕಾಲರ್ಶಿಪ್ ವಿತರಿಸಲು ಈಗಾಗಲೇ ವಿದ್ಯಾರ್ಥಿಗಳ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ ಹಾಸ್ಟೆಲ್ಗೆ ದಾಖಲಾತಿ ಮಾಡಿಕೊಳ್ಳುವಾಗ ಮತ್ತು ಹಾಜರಾತಿ ತೆಗೆದುಕೊಳ್ಳಲು ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬಹುದು ಎನ್ನುವ ಪ್ರಸ್ತಾವ ಸರ್ಕಾರದ ಮುಂದೆ ಇದೆ.
ಸರ್ಕಾರಕ್ಕೆ ಕೋಟ್ಯಂತರ ರು. ಉಳಿತಾಯ:
ನೆರೆಯ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಒಡಿಶಾ ರಾಜ್ಯಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ದಾಖಲಾತಿ ಮತ್ತು ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಅದೇ ರೀತಿಯಲ್ಲಿ ನಮ್ಮ ರಾಜ್ಯದಲ್ಲೂ ಅನುಷ್ಠಾನಗೊಳಿಸಿದರೆ ಸರ್ಕಾರಕ್ಕೆ ಪ್ರತಿ ವರ್ಷ ಕೋಟ್ಯಂತರ ರು. ಉಳಿತಾಯವಾಗಲಿದೆ.
ಪ್ರಿ ಮೆಟ್ರಿಕ್ ಹಾಸ್ಟೇಲ್ನ ಪ್ರತಿ ವಿದ್ಯಾರ್ಥಿಗೆ ಸರ್ಕಾರ ಶೈಕ್ಷಣಿಕ ವರ್ಷವೊಂದಕ್ಕೆ ಸುಮಾರು 20 ಸಾವಿರ ರು. ಖರ್ಚು ಮಾಡುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರಿ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಮಾಹಿತಿ ನಮೂದಿಸಲಾಗಿದೆ. ಮುಂದಿನ ದಿನಗಳಲ್ಲಿ ಬೋಗಸ್ ದಾಖಲಾತಿ ತಡೆದರೆ ನೈಜ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ದೊರಕುತ್ತದೆ. ಯೋಜನೆಯ ಮೂಲ ಉದ್ದೇಶವು ಸಾಕಾರವಾಗುತ್ತದೆ ಎನ್ನುತ್ತಾರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು.