ಖಾಸಗಿ ವಿವಿಗಳಿಂದ ಹೆಚ್ಚುವರಿ ಶುಲ್ಕ: ಉನ್ನತ ಶಿಕ್ಷಣ ಪರಿಷತ್‌ಗೆ ಕೆಇಎ ಪತ್ರ

Published : Jun 17, 2025, 09:49 AM IST
KEA

ಸಾರಾಂಶ

ವೃತ್ತಿಪರ ಕೋರ್ಸುಗಳ ಪ್ರವೇಶಾತಿಯಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ಗೆ ಪತ್ರ ಬರೆದಿದೆ.

  ಬೆಂಗಳೂರು :  ವೃತ್ತಿಪರ ಕೋರ್ಸುಗಳ ಪ್ರವೇಶಾತಿಯಲ್ಲಿ ಸರ್ಕಾರಿ ಕೋಟಾದ ಶೇ.40ರಷ್ಟು ಸೀಟುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಂದ ಖಾಸಗಿ ವಿಶ್ವವಿದ್ಯಾಲಯಗಳು ನಿಯಮ ಬಾಹಿರವಾಗಿ ವಿಶ್ವವಿದ್ಯಾಲಯ ಶುಲ್ಕದ ಹೆಸರಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ಗೆ ಪತ್ರ ಬರೆದಿದೆ.

ಸರ್ಕಾರಿ ಕೋಟಾದ ಎಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ ಸೇರಿ ಇನ್ನಿತರೆ ವೃತ್ತಿಪರ ಕೋರ್ಸುಗಳ ಸೀಟುಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಹಾಗೂ ನೀಟ್‌ ರ್‍ಯಾಂಕಿಂಗ್‌ ಆಧಾರದಲ್ಲಿ ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ಹಂಚಿಕೆ ಮಾಡುತ್ತದೆ. ಈ ರೀತಿ ಹಂಚಿಕೆ ಮಾಡುವ ಸೀಟುಗಳಿಗೆ ಸರ್ಕಾರ ನಿಗದಿಪಡಿಸಿರುವ ಬೋಧನಾ ಶುಲ್ಕ ಮತ್ತು ಎಂಜಿನಿಯರಿಂಗ್‌ಗೆ ವಿಟಿಯು ನಿಗದಿಪಡಿಸಿರುವ ವಿಶ್ವವಿದ್ಯಾಲಯ ಶುಲ್ಕವನ್ನು ಪ್ರಾಧಿಕಾರವೇ ವಿದ್ಯಾರ್ಥಿಗಳಿಂದ ಪಡೆದು ಸಂಬಂಧಿಸಿದ ಖಾಸಗಿ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಿಗೆ ಜಮೆ ಮಾಡುತ್ತದೆ. ಆದರೆ, ಕೆಲ ಖಾಸಗಿ ವಿಶ್ವವಿದ್ಯಾಲಯಗಳು ಈ ಸೀಟುಗಳಿಗೆ ದಾಖಲಾತಿ ಪಡೆಯಲು ಹೋದ ವಿದ್ಯಾರ್ಥಿಗಳಿಂದ ಸರ್ಕಾರ ನಿಗದಿಪಡಿಸಿರುವ ಶುಲ್ಕ ಮತ್ತು ವಿಟಿಯು ನಿಗದಿಪಡಿಸಿರುವ ಶುಲ್ಕ ಹೊರತುಪಡಿಸಿ ಹೆಚ್ಚುವರಿ ಶುಲ್ಕ ಹೇಳುತ್ತಿರುವುದಾಗಿ ದೂರುಗಳು ಬಂದಿವೆ ಎಂದು ತಿಳಿಸಿದೆ.

ಹೆಚ್ಚುವರಿ ಶುಲ್ಕ ಪಡೆಯುವುದು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸೀಟು ಹಂಚಿಕೆ ಮತ್ತು ಶುಲ್ಕ ನಿಯಂತ್ರಣ ಕಾಯ್ದೆ ಹಾಗೂ ಯುಜಿಸಿ ಮಾರ್ಗಸೂಚಿ ನಿಯಮಗಳ ವಿರುದ್ಧವಾಗಿದೆ. ಇದರಿಂದ ಬಡವರ್ಗದ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಧ್ಯ ಪ್ರವೇಶಿಸಿ ಖಾಸಗಿ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಮತ್ತು ವಿಟಿಯು ನಿಗದಿಪಡಿಸಿರುವ ಶುಲ್ಕ ಹೊರತುಪಡಿಸಿ ಇನ್ಯಾವುದೇ ಶುಲ್ಕ ಪಡೆಯದಂತೆ ಸೂಕ್ತ ನಿರ್ದೇಶನ ನೀಡುವಂತೆ ಕೆಇಎ ಮನವಿ ಮಾಡಿದೆ.

ಅಲ್ಲದೆ, ಪ್ರತಿ ವರ್ಷ ರಾಜ್ಯ ಸರ್ಕಾರ ಖಾಸಗಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳೊಂದಿಗೆ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಬಗ್ಗೆ ಮಾಡಿಕೊಳ್ಳುವ ಒಪ್ಪದಂದ ವೇಳೆ ಹೆಚ್ಚುವರಿ ಶುಲ್ಕ ವಸೂಲಿ ಮಾಡಬಾರದೆಂಬ ಅಂಶವನ್ನೂ ಸೇರಿಸಿ ಸ್ಪಷ್ಟ ನಿರ್ದೇಶನ ನೀಡುವಂತೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

ಕೆಇಎ ಮೂಲಗಳ ಪ್ರಕಾರ, ಅಂದಾಜು 1 ಲಕ್ಷದಿಂದ 2 ಲಕ್ಷ ರು. ವರೆಗೆ ಕೆಲ ವಿವಿಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವ ಬಗ್ಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಕೆಇಎಗೆ ದೂರು ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''