ಮೂಡುಬಿದಿರೆ: ಕಳೆದ 30 ವರ್ಷಗಳಿಂದಲೂ ನಿರಂತರವಾಗಿ ‘ಶಿವರಾಮ ಕಾರಂತ ಪ್ರಶಸ್ತಿ’ ನೀಡುತ್ತಾ ಬಂದಿರುವ ಮೂಡುಬಿದಿರೆ ‘ಶಿವರಾಮ ಕಾರಂತ ಪ್ರತಿಷ್ಠಾನ’ ಈ ವರ್ಷದ ಪ್ರಶಸ್ತಿಯನ್ನು ಪ್ರೊ. ಎನ್.ಟಿ.ಭಟ್, ಪ್ರೊ. ಬರಗೂರು ರಾಮಚಂದ್ರಪ್ಪ ಮತ್ತು ನಾಗತಿಹಳ್ಳಿ ಚಂದ್ರಶೇಖರ ಅವರಿಗೆ ಪ್ರಕಟಿಸಿದೆ.
ಈ ಕುರಿತು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ಜಯಪ್ರಕಾಶ ಮಾವಿನಕುಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರೊ. ಭಟ್ ಅವರು ಇಂಗ್ಲಿಷ್ ಮತ್ತು ಜರ್ಮನ್ ಭಾಷೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಅನೇಕ ಕನ್ನಡ ಗ್ರಂಥಗಳನ್ನು ಈ ಎರಡು ಭಾಷೆಗಳಿಗೆ ಅನುವಾದ ಮಾಡಿದ್ದಾರೆ.
ಪ್ರೊ. ಬರಗೂರು ರಾಮಚಂದ್ರಪ್ಪ ಅವರು ತಮ್ಮ ಸಾಮಾಜಿಕ, ವೈಚಾರಿಕ ನಿಲುವುಗಳಿಂದಾಗಿ ಪ್ರಸಿದ್ಧರಾಗಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ ಅವರು ಕಾಲೇಜಿನ ಪ್ರಾಧ್ಯಾಪಕರಾಗಿ, ಕಾದಂಬರಿಕಾರರಾಗಿ, ಚಲನಚಿತ್ರ ನಿರ್ದೇಶಕರಾಗಿ ಅನೇಕ ಸಾಮಾಜಿಕ ಮೌಲ್ಯಗಳ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ತಮ್ಮ ಹಳ್ಳಿಯ ಶಾಲೆಯನ್ನು ಅಭಿವೃದ್ಧಿಗೊಳಿಸಿ ರೈತರ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಅವರು ಮೌಲಿಕ ಕೊಡುಗೆ ನೀಡಿದ್ದಾರೆ.