ನಗರದಲ್ಲಿ ಜನರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಕಾರಣಕ್ಕೆ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.
ಬೆಂಗಳೂರು : ನಗರದಲ್ಲಿ ಜನರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಕಾರಣಕ್ಕೆ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.
ಕೆಂಗೇರಿ ಉಪನಗರದ ಸುರನಾ ಕಾಲೇಜು ಸಭಾಂಗಣದಲ್ಲಿ ಶನಿವಾರ ಸಂಚಾರ ಪೊಲೀಸರು ಆಯೋಜಿಸಿದ್ದ ‘ಸಂಚಾರ ಸಂಪರ್ಕ ದಿವಸ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಪ್ರಶ್ನೆಗಳಿಗೆ ಆಯುಕ್ತರು ಉತ್ತರಿಸಿದರು.
ಕೆಂಗೇರಿ ವ್ಯಾಪ್ತಿ ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ. ನೋ ಪಾರ್ಕಿಂಗ್ ಪ್ರದೇಶದಲ್ಲಿ ಜನರು ವಾಹನ ನಿಲ್ಲಿಸುವುದರಿಂದ ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ಕೆಲವರು ದೂರು ನೀಡಿದರು. ಈ ಅಹವಾಲುಗಳಿಗೆ ಪ್ರತಿಕ್ರಿಯಿಸಿದ ಆಯುಕ್ತ ದಯಾನಂದ್ ಅವರು, ನಗರದಲ್ಲಿ ನಿರ್ಬಂಧಿಸಿರುವ ಟೋಯಿಂಗ್ ಆರಂಭಿಸಲು ಚಿಂತನೆ ನಡೆದಿದೆ ಎಂದರು.
ಜನರು ಬೇಕಾಬಿಟ್ಟಿ ವಾಹನ ನಿಲ್ಲುಸುವುದರಿಂದ ಇತರೆ ವಾಹನಗಳ ಓಡಾಟಕ್ಕೆ ಅಡ್ಡಿಯಾಗುತ್ತಿದೆ. ಇದೂ ಆ ರಸ್ತೆಯಲ್ಲಿ ವಾಹನ ದಟ್ಟಣೆಗೂ ಕಾರಣವಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ಟೋಯಿಂಗ್ ವ್ಯವಸ್ಥೆ ಮರು ಜಾರಿಗೆ ಆಲೋಚನೆ ಇದೆ.
ಈ ಹಿಂದೆ ಜಾರಿಯಲ್ಲಿದ್ದ ಟೋಯಿಂಗ್ ವ್ಯವಸ್ಥೆ ಬಗ್ಗೆ ಕೆಲವು ಸಮಸ್ಯೆಗಳಿದ್ದವು. ಹೀಗಾಗಿ ಆ ವ್ಯವಸ್ಥೆಯನ್ನು ಪರಿಷ್ಕರಿಸಿ ಮತ್ತೆ ಜಾರಿಗೊಳಿಸುವ ಬಗ್ಗೆ ಯೋಚನೆ ಇದೆ ಎಂದು ಆಯುಕ್ತರು ಹೇಳಿದರು.
ಈ ಕಾರ್ಯಕ್ರಮದಲ್ಲಿ ನಗರ ಜಂಟಿ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಹಾಗೂ ಪಶ್ಚಿಮ ವಿಭಾಗ (ಸಂಚಾರ)ದ ಡಿಸಿಪಿ ಅನಿತಾ ಹದ್ದಣ್ಣನವರ್ ಉಪಸ್ಥಿತರಿದ್ದರು.
ಸದ್ಯ ಗಾಂಧಿನಗರದಲ್ಲಿ ಟೋಯಿಂಗ್
ಪ್ರಸುತ್ತ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟೋಯಿಂಗ್ ಜಾರಿಯಲ್ಲಿದೆ. ಫ್ರೀಡಂ ಪಾರ್ಕ್ನಲ್ಲಿ ಬಹುಮಹಡಿ ವಾಹನ ನಿಲುಗಡೆ ಕಟ್ಟಡದ ಬಳಿಕ ಗಾಂಧಿನಗರ ಸರಹದ್ದಿನ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹೀಗಾಗಿ ಉಪ್ಪಾರಪೇಟೆ ಸಂಚಾರ ವ್ಯಾಪ್ತಿ ಟೋಯಿಂಗ್ ಜಾರಿಯಲ್ಲಿದ್ದು, ಮುಂದಿನ ಹಂತದಲ್ಲಿ ನಗರ ವ್ಯಾಪ್ತಿಯಲ್ಲಿ ಟೋಯಿಂಗ್ ವಿಸ್ತರಣೆಯಾಗಬಹುದು ಎನ್ನಲಾಗಿದೆ.