ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗಗಳಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ಇದೇ ತಿಂಗಳ 24ರಂದು ರಾಜ್ಯಾದ್ಯಂತ ರಸ್ತೆತಡೆ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ನಗರದ ಯಲಹಂಕ ಬಳಿಯ ರೆಸಾರ್ಟ್ವೊಂದರಲ್ಲಿ ನಡೆದ ಪಕ್ಷದ ಹಾಲಿ ಶಾಸಕರು-ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳನ್ನು ಒಳಗೊಂಡ ರಾಜಕೀಯ ಚಿಂತನಾ ಶಿಬಿರದಲ್ಲಿ ಈ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಸ್ತೆ ಗುಂಡಿಗಳ ಬಗ್ಗೆ ಪದೇ ಪದೆ ರಾಜ್ಯ ಸರ್ಕಾರ ಚರ್ಚೆ ಮಾಡುತ್ತಿದೆ ಅಷ್ಟೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಎಷ್ಟಿವೆ ಎಂಬುದನ್ನು ಕಳೆದ ಎರಡೂವರೆ ವರ್ಷಗಳಿಂದ ಎಣಿಸುತ್ತಲೇ ಇದೆ. ಗುಂಡಿಗಳಿಗೆ ಮುಕ್ತಿ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇದು ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಹರಿಹಾಯ್ದರು.
ಹೀಗಾಗಿ, 24ರಂದು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಒಂದು ಗಂಟೆ ಕಾಲ ರಸ್ತೆತಡೆ ಮಾಡಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಭ್ರಷ್ಟಾಚಾರದಲ್ಲಿ ನಿರತ, ಅಭಿವೃದ್ಧಿ ಮರೆತ, ರಸ್ತೆ ಗುಂಡಿ ಮುಚ್ಚದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಸ್ತೆತಡೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.