ಬೆಂಗಳೂರು : ಎರಡು ದಿನಗಳ ಕಾಲ ನಡೆದ ಬಿಜೆಪಿಯ ಹಾಲಿ, ಮಾಜಿ ಶಾಸಕರು-ಸಂಸದರನ್ನು ಒಳಗೊಂಡ ರಾಜಕೀಯ ಚಿಂತನ ಶಿಬಿರದಲ್ಲಿ ಕೈಗೊಂಡ ನಿರ್ಣಯಗಳನ್ನು ಬಹುವಾಗಿ ಮೆಚ್ಚಿಕೊಂಡ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಎಲ್ಲರನ್ನೂ ಎದ್ದು ನಿಲ್ಲಿಸಿ ಚಪ್ಪಾಳೆ ಹಾಕಿಸಿದ ಪ್ರಸಂಗ ನಡೆಯಿತು.
ಯಲಹಂಕದ ರೆಸಾರ್ಟ್ವೊಂದರಲ್ಲಿ ನಡೆದ ಚಿಂತನ ಶಿಬಿರ ಎರಡನೆಯ ದಿನವಾದ ಶುಕ್ರವಾರ ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸಲು ಹೊರಟಿರುವ ಸಾಮಾಜಿಕ ಸಮೀಕ್ಷೆ (ಜಾತಿಗಣತಿಯ) ಮೂಲಕ ಜಾತಿಗಳನ್ನು ಒಡೆಯುವ ಹುನ್ನಾರವನ್ನು ಬಯಲಿಗೆಳೆಯಬೇಕು ಹಾಗೂ ಎಲ್ಲಾ ಜಾತಿಗಳೂ ಧರ್ಮದ ಕಾಲಂನಲ್ಲಿ ‘ಹಿಂದು’ ಎಂದು ನಮೂದಿಸಲು ಮೂಡಿಸಬೇಕು ಎಂಬ ಒಂದು ನಿರ್ಣಯ ಹಾಗೂ ಜಿಎಸ್ಟಿ ಇಳಿಕೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿ ಮತ್ತೊಂದು ನಿರ್ಣಯ ಕೈಗೊಳ್ಳಲಾಯಿತು.
ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಂತೋಷ್ ಅವರು ತಮ್ಮ ಭಾಷಣದಲ್ಲಿ ಈ ನಿರ್ಣಯಗಳನ್ನು ಪ್ರಸ್ತಾಪಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದಕ್ಕಾಗಿ ಪಕ್ಷ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಬೇಕು. ಎಲ್ಲರೂ ಎದ್ದು ನಿಂತು ಚಪ್ಪಾಳೆ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿ ಎಂದು ಹೇಳಿದರು. ಸಭೆಯಲ್ಲಿದ್ದ ಎಲ್ಲ ಮುಖಂಡರೂ ಎದ್ದು ನಿಂತು ಭಾರಿ ಕರತಾಡನ ಮೂಲಕ ವಿಜಯೇಂದ್ರ ಅವರಿಗೆ ಪ್ರಶಂಸೆ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.
ಕಿವಿ ಹಿಂಡಿದ ಸಂತೋಷ್:
ಬಳಿಕ ಮಾತು ಮುಂದುವರೆಸಿದ ಸಂತೋಷ್, ನೀವೆಲ್ಲ ಮುಖಂಡರು ಸುಮ್ಮನಿದ್ದರೆ ನಮ್ಮ ಸರ್ಕಾರ ಬರುತ್ತದೆಯೇ? ಸುಮ್ಮನಿದ್ದರೂ ಸರ್ಕಾರ ಬರಬಹುದು. ಆದರೆ ಈಗಿರುವ ರೀತಿ ನೀವೆಲ್ಲ ಇದ್ದರೆ ಸರ್ಕಾರ ಬರುವುದಿಲ್ಲ ಎಂದು ಪರೋಕ್ಷವಾಗಿ ಚಾಟಿ ಬೀಸಿದರು.