ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಹಂತದ ಯೋಜನೆಯನ್ನು ಅ. 16ರಂದು ಲೋಕಾರ್ಪಣೆ ಮಾಡಲಾಗುತ್ತಿದೆ.
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಹಂತದ ಯೋಜನೆಯನ್ನು ಅ. 16ರಂದು ಲೋಕಾರ್ಪಣೆ ಮಾಡಲಾಗುತ್ತಿದೆ. ಈ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ. 16ರಂದು ಬೆಂಗಳೂರಿಗೆ ವಿಶೇಷ ದಿನವಾಗಿದ್ದು, ಕಾವೇರಿ 5ನೇ ಹಂತದ ಯೋಜನೆ ಜಾರಿಯಾಗುತ್ತಿದೆ. ಈವರೆಗೆ ನಾಲ್ಕು ಹಂತಗಳ ಯೋಜನೆಯಲ್ಲಿ ಕುಡಿಯುವ ನೀರನ್ನು ಪೂರೈಸಲಾಗುತ್ತಿತ್ತು. ಇದೀಗ 5ನೇ ಹಂತದ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಕಾವೇರಿ ನೀರು ಸಂಪರ್ಕ ಇಲ್ಲದ ಬಡಾವಣೆಗಳಿಗೆ ಈ ಯೋಜನೆ ಮೂಲಕ ನೀರು ಪೂರೈಸಲಾಗುವುದು. ಈ ಯೋಜನೆಯಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದರು.
ಅ. 16ರಂದು ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು. ಯೋಜನೆಯಿಂದ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 775 ಎಂಎಲ್ಡಿ ನೀರು ಪೂರೈಕೆಯಾಗಲಿದ್ದು, ಪ್ರತಿಯೊಂದು ಬಡಾವಣೆಗೂ ಕಾವೇರಿ ನೀರು ಪುರೈಸಲಾಗುವುದು ಎಂದು ಹೇಳಿದರು.