;Resize=(412,232))
ನವದೆಹಲಿ : ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜೊತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದು, ನೌಕರರ ಬೇಡಿಕೆಗಳ ಬಹುತೇಕ ಈಡೇರಿಕೆಗೆ ಕೇಂದ್ರ ಸಚಿವರು ಸಮ್ಮತಿ ಸೂಚಿಸಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ಅಂಗನವಾಡಿ, ಅಕ್ಷರ ದಾಸೋಹಿ, ಆಶಾ ನೌಕರರ ಪ್ರಮುಖರನ್ನು ಬುಧವಾರ ದೆಹಲಿಗೆ ಕರೆಸಿಕೊಂಡ ಸಚಿವ ಕುಮಾರಸ್ವಾಮಿ, ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಸಂಘಟನೆಯ ಪ್ರಮುಖರ ಜತೆ ಮಾತುಕತೆ ನಡೆಸಿದರು. ಬಳಿಕ, ಶಾಸ್ತ್ರೀ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಕಚೇರಿಯಲ್ಲಿ ಸಚಿವರಾದ ಅನ್ನಪೂರ್ಣದೇವಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ನೌಕರರ ಪರವಾಗಿ ಸಚಿವರಿಗೆ ಅವರ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ನೀಡಿದರು. ಇಬ್ಬರು ಸಚಿವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಉನ್ನತ ಅಧಿಕಾರಿಗಳು, ಕರ್ನಾಟಕದಿಂದ ಬಂದಿದ್ದ ಹನ್ನೆರಡು ಮಂದಿ ನೌಕರರ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು.
ಎಫ್ಆರ್ಎಸ್ ನೀತಿಯಲ್ಲಿ ಸುಧಾರಣೆ, ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣಾ ಕೆಲಸಗಳಿಂದ ಮುಕ್ತಿಗೊಳಿಸುವುದು, ವಿಮಾ ಸೌಲಭ್ಯ, ಎಲ್ಲಾ ನೌಕರರ ವೇತನ ಹೆಚ್ಚಳ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಜತೆ ಚರ್ಚಿಸಿದರು. ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣಾ ಕೆಲಸಗಳಿಗೆ ನಿಯೋಜಿಸದಿರುವ ಬಗ್ಗೆ ಚುನಾವಣೆ ಆಯೋಗದ ಜತೆ ಚರ್ಚೆ ನಡೆಸಲಾಗುವುದು ಎಂದು ಸಚಿವೆ ಅನ್ನಪೂರ್ಣದೇವಿ ಭರವಸೆ ನೀಡಿದರು.
ಇದೇ ವೇಳೆ, ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೌಕರರ ಬೇಡಿಕೆಗಳ ಬಗ್ಗೆ ದೂರವಾಣಿಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸಿದರು. ಬಳಿಕ, ಪ್ರಧಾನ್ ಜೊತೆ ನೌಕರರ ಪ್ರಮುಖರ ಸಭೆಯನ್ನು ನಿಗದಿಗೊಳಿಸಿ, ಅವರ ನಿವಾಸಕ್ಕೆ ಅಧಿಕಾರಿಗಳ ಸಮೇತ ಕಳಿಸಿದರು. ಸಚಿವ ಪ್ರಧಾನ್ ಜತೆ ಮಾತುಕತೆ ನಡೆಸಿದ ಪ್ರಮುಖರು, ತಮ್ಮ ಬೇಡಿಕೆ, ಸಂಕಷ್ಟಗಳ ಬಗ್ಗೆ ಚರ್ಚಿಸಿದರು.
ಎಸ್.ವರಲಕ್ಷ್ಮೀ, ಎಚ್.ಎಸ್.ಸುನಂದಾ, ಮಾಲಿನಿ ಮೇಸ್ತಾ, ಶಾಂತಾ, ಲಕ್ಷ್ಮೀದೇವಮ್ಮ, ಮಹದೇವಮ್ಮ, ಶಶಿಕಲಾ, ದೊಡ್ಡವ್ವ ಪೂಜಾರಿ, ನಂಜಮ್ಮ, ಗುಲ್ಜಾರ್, ಉಷಾರಾಣಿ, ಸಿಂಧು, ಸವಿತಾ ನೌಕರರ ನಿಯೋಗದಲ್ಲಿದ್ದರು.
ನನ್ನ ಮನವಿಗೆ ಓಗೊಟ್ಟು ಪ್ರತಿಭಟನೆ ನಿಲ್ಲಿಸಿ ದೆಹಲಿಗೆ ಬಂದ ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಪ್ರಮುಖರ ಜತೆಗಿನ ಮಾತುಕತೆ ಉತ್ತಮವಾಗಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ನಡೆದ ಸಭೆಯಲ್ಲಿ ಎಲ್ಲಾ ಅಂಶಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ.