ಅನರ್ಹ ರೇಷನ್‌ ಕಾರ್ಡ್‌ ರದ್ದಾಗದ್ದಕ್ಕೆ ಸಿಎಂ ಗರಂ

Published : May 31, 2025, 11:34 AM IST
Karnataka Chief Minister Siddaramaiah (File Photo/ANI)

ಸಾರಾಂಶ

ರಾಜ್ಯದಲ್ಲಿ ಸುಮಾರು ಶೇ.74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ -  ಆದರೆ  ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ

 ಬೆಂಗಳೂರು : ರಾಜ್ಯದಲ್ಲಿ ಸುಮಾರು ಶೇ.74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚಿಸಲಾಗಿತ್ತಾದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡರು.

ವಿಧಾನಸೌಧದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ, ಜಿಪಂ ಸಿಇಓ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿ ವಿವಿಧ ಇಲಾಖೆಗಳ ಕುರಿತು ಬೆಳಗ್ಗೆ 10.45 ಗಂಟೆಯಿಂದ ರಾತ್ರಿ 7.45 ಗಂಟೆವರೆಗೆ ಸತತ 9 ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿ ಬಿಸಿ ಮುಟ್ಟಿಸಿದರು.

ಅನರ್ಹ ಪಡಿತರ ಚೀಟಿಗಳ ರದ್ದತಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಇದರಲ್ಲಿ ನಿರೀಕ್ಷಿತ ಪ್ರಗತಿ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಲ್ಯವಿವಾಹ ಡಿಸಿಗಳ

ಗಮನಕ್ಕೆ ಏಕೆ ಬರಲ್ಲ?

ರಾಜ್ಯದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇವು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ವರದಿ ಮಾಡುತ್ತಿಲ್ಲ ಎಂದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ ಎಂದು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು. ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ. ಹಲವರು ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಯಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ 700 ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಇದು ತಪ್ಪಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

ಡಿಸಿಗಳು ಸಾರ್ವಜನಿಕರ ಭೇಟಿಗೆ

ಸಿಗಬೇಕು: ಸಿಎಂ ಖಡಕ್‌ ಸೂಚನೆ

ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು ತಮ್ಮ ಪ್ರವಾಸ ಕಾರ್ಯಕ್ರಮ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ಜತೆಗೆ ಕೆಲ ಜಿಲ್ಲಾಧಿಕಾರಿ, ಜಿ.ಪಂ ಸಿಇಓಗಳು ಸಾರ್ವಜನಿಕರಿಗೆ ಕಚೇರಿಗಳಲ್ಲಿ ಸಿಗುತ್ತಿಲ್ಲ ಎಂಬ ದೂರಿದೆ. ಸಾರ್ವಜನಿಕರ ಭೇಟಿ ಸಮಯ ಮೊದಲೇ ಪ್ರಕಟಿಸಿ ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಸಿಗಬೇಕು. ನೀವೇ ಅವರ ಸಂಕಷ್ಟ ಆಲಿಸದಿದ್ದರೆ ಯಾರು ಆಲಿಸಬೇಕು? ಎಂದು ಸಿದ್ದರಾಮಯ್ಯ ಸೂಚಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಆಹಿಂಸೆ, ಶಾಂತಿಧೂತ ಗಾಂಧೀಜಿ ಸ್ಮರಣೆ ನಿರಂತರವಾಗಿರಲಿ
ವಿಕಲಚೇತನರ ಸವಲತ್ತುಗಳ ಸಮರ್ಪಕ ನಿರ್ವಹಣೆಗೆ ಒತ್ತು