ಕಸ ಎಸೆಯುವರ ಪತ್ತೆಗೆ ಸಿಸಿ ಕ್ಯಾಮೆರಾ : ಆಯುಕ್ತರ ಸೂಚನೆ

Published : Jun 22, 2025, 07:06 AM ISTUpdated : Jun 22, 2025, 07:07 AM IST
BBMP latest news today photo

ಸಾರಾಂಶ

ಕೆ.ಆರ್.ಮಾರುಕಟ್ಟೆ ಬಳಿ ಕಸ ಎಸೆಯುವುದನ್ನು ತಡೆಗಟ್ಟಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಪಶ್ಚಿಮ ವಲಯದ ಆಯುಕ್ತ ಸುರಳ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು : ಕೆ.ಆರ್.ಮಾರುಕಟ್ಟೆ ಬಳಿ ಕಸ ಎಸೆಯುವುದನ್ನು ತಡೆಗಟ್ಟಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಪಶ್ಚಿಮ ವಲಯದ ಆಯುಕ್ತ ಸುರಳ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶನಿವಾರ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಅವರು, ವ್ಯಾಪಾರಸ್ಥರು ಸರಿಯಾಗಿ ಸ್ವಚ್ಛತೆ ಕಾಪಾಡಿಕೊಳ್ಳದೆ ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಡುವುದರಿಂದ ಸ್ವಚ್ಛತೆ ಕಾಪಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತ್ಯಾಜ್ಯ ಬಿಸಾಡುವಂತಹ ಸ್ಥಳಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಸುಮಾರು 70 ಟನ್ ತ್ಯಾಜ್ಯ ಉತ್ಪತ್ತಿಯಾಗಲಿದ್ದು, ಅದನ್ನು ಮೂರು ಪಾಳಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ ಬಳಿಕ ನಿರಂತರವಾಗಿ ಮೇಲ್ವಿಚಾರಣೆ ಮಾಡಿ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲು ತಿಳಿಸಿದರು.

ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಮಾರ್ಕಿಂಗ್ ಮಾಡಿ ಅದೇ ಸ್ಥಳದಲ್ಲಿ ವ್ಯಾಪಾರ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಮಾರ್ಕಿಂಗ್ ಸ್ಥಳ ಬಿಟ್ಟು ಬೇರೆಡೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು. ಮಾರುಕಟ್ಟೆ ಹೊರ ಭಾಗದಲ್ಲಿ ಅನಧಿಕೃತವಾಗಿ ವ್ಯಾಪಾರ ಮಾಡುವುದನ್ನು ನಿಯಂತ್ರಿಸಬೇಕು. ವ್ಯಾಪಾರಿಗಳು ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಡುವುದನ್ನು ತಪ್ಪಿಸಲು ಪ್ರಮುಖ ನಾಲ್ಕು ಸ್ಥಳಗಳಲ್ಲಿ ತ್ಯಾಜ್ಯ ಬಿನ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು. ಎಲ್ಲ ವ್ಯಾಪಾರಿಗಳಿಗೆ ಪ್ರತ್ಯೇಕವಾಗಿ ಬಿನ್ ಗಳನ್ನು ಇಟ್ಟುಕೊಂಡು ಅದರಲ್ಲಿಯೇ ತ್ಯಾಜ್ಯ ಹಾಕಿ, ಪಾಲಿಕೆ ನಿಗದಿಪಡಿಸಿರುವ ಸ್ಥಳದಲ್ಲಿ ತಂದು ಸುರಿಯಲು ಸೂಚನೆ ನೀಡುವಂತೆ ತಿಳಿಸಿದರು.

ಕೆ.ಆರ್. ಮಾರುಕಟ್ಟೆಯ ನೆಲ ಮಹಡಿ ಹಾಗೂ ಇತರೆ ಜಾಗಗಳಲ್ಲಿ ಹೊಸದಾಗಿ ಪಾರ್ಕಿಂಗ್ ಟೆಂಡರ್ ಕರೆದು, ಒಳಗೆ ಹಾಗೂ ಹೊರಗೆ ಹೋಗುವ ಮಾರ್ಗಗಳನ್ನು ಸರಿಯಾಗಿ ನಿಗದಿಪಡಿಸಿಕೊಳ್ಳಬೇಕು. ಈ ಸಂಬಂಧ ಕೂಡಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಹೊಸ ಪಾರ್ಕಿಂಗ್ ದರ ನಿಗದಿಪಡಿಸಲು ಸೂಚಿಸಿದರು.

ಈ ವೇಳೆ ಜಂಟಿ ಆಯುಕ್ತ ಸಂಗಪ್ಪ ಮೊದಲಾದ ಅಧಿಕಾರಿಗಳಿದ್ದರು.

ಬಿಬಿಎಂಪಿ ಕಸದ ಸಮಸ್ಯೆಗೆ ವೈಜ್ಞಾನಿಕ ಪರಿಹಾರ ಚಿಂತನೆ: ಡಿಸಿಎಂ

ತಾಲೂಕಿನ ಚಿಗರೇನಹಳ್ಳಿಯ ಎಂಎಸ್‌ಜಿಪಿ ಸೇರಿದಂತೆ ಈ ಭಾಗದ ಪ್ರಮುಖ ಸಮಸ್ಯೆಯಾದ ಕಸ ವಿಲೇವಾರಿಗೆ ಪರಿಹಾರ ಕಂಡುಕೊಳ್ಳಲಾಗುವುದು. ಕಸ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡಿ, ಒಂದು ದಿನದ ಕಸವನ್ನು ಮೂರು ದಿನದಲ್ಲಿ ಸುಡಲಾಗುವುದು. ಅದರಿಂದ ಗ್ಯಾಸ್, ಕರೆಂಟ್ ಉತ್ಪಾದನೆ ಮಾಡಲಾಗುವುದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ವಿದೇಶಗಳಲ್ಲಿ ಈ ತಂತ್ರಜ್ಞಾನವನ್ನು ಯಶಸ್ವಿಯಾಗಿ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಪರಿಶೀಲಿಸಲಾಗಿದೆ. ಈಗಾಗಲೇ ಕಸ ಸುಡುವ ಮೂಲಕ ಪರಿಸರ ಮಾಲಿನ್ಯ ಆಗದಂತೆ ಕಸ ವಿಲೇವಾರಿ ತಂತ್ರಜ್ಞಾನಗಳನ್ನು ಕೆಲ ನಗರಗಳಲ್ಲಿ ಪಾಲನೆ ಮಾಡಲಾಗುತ್ತಿದ್ದು, ಅದೇ ಮಾದರಿಯನ್ನು ಅನುಷ್ಠಾನಕ್ಕೆ ತರುವ ಚಿಂತನೆ ಇದೆ ಎಂದರು.

ಕಸ ವಿಲೇವಾರಿ ಸಮಸ್ಯೆಗೆ ಸಂಬಂಧಿಸಿದಂತೆ ಶೀಘ್ರ ಈ ಭಾಗಕ್ಕೆ ಮತ್ತೊಮ್ಮೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಗುವುದು. ವಸ್ತುಸ್ಥಿತಿ ಅರಿತು, ಸ್ಥಳೀಯರ ಆದ್ಯತೆಗಳನ್ನೂ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ಜಲಾಶಯ ನಿರ್ಮಾಣದಿಂದ ಗ್ರಾಮಗಳು ಮುಳುಗಡೆ ಆಗದಂತೆ ಸಹಕರಿಸಿ, ಬಾಧಿತರಾಗುವ ರೈತರ ನೆರವಿಗೆ‌ ಸರ್ಕಾರ ನಿಲ್ಲಬೇಕು. ದೊಡ್ಡಬಳ್ಳಾಪುರ ತಾಲೂಕಿಗೆ ಬಿಬಿಎಂಪಿ ಕಸದ ಸಮಸ್ಯೆಯಿಂದ ಮುಕ್ತಿ ದೊರಕಿಸಿ ಕೊಡಬೇಕು ಎಂದು ಮನವಿ ಮಾಡಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬೆಂಗ್ಳೂರು 5 ಪಾಲಿಕೆಗೆ ಎಲೆಕ್ಷನ್‌ ನಡೆಸುವುದಕ್ಕೆ ಜೂ.30 ಡೆಡ್ಲೈನ್‌
ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌