ಬೆಂಗಳೂರು : ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುವ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ ಅವರ ವಾಹನ ಚಾಲನಾ ಪರವಾನಗಿಯನ್ನು ಕಾಯಂ ಆಗಿ ರದ್ದುಗೊಳಿಸಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಸೂಚಿಸಿದರು.
ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರಾಂತ್ಯದಲ್ಲಿ ಬಳ್ಳಾರಿ ರಸ್ತೆಯ ಮೇಲ್ಸೇತುವೆ, ಕುಣಿಗಲ್ ರಸ್ತೆ ಸೇರಿದಂತೆ ವಿವಿಧೆಡೆ ಯುವಕರು ವ್ಹೀಲಿಂಗ್ ಮಾಡುತ್ತಾರೆ. ಇದರಿಂದ ಸಾರ್ವಜನಿಕರ ವಾಹನಗಳಿಗೆ ತೊಂದರೆ ಆಗುತ್ತಿದೆ. ಈ ಕುರಿತು ದೂರುಗಳು ಬಂದಾಗ ವಾಹನ ಚಾಲಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಡಿಎಲ್ ಮತ್ತು ನೋಂದಣಿ ಪ್ರಮಾಣಪತ್ರ, ರದ್ದುಪಡಿಸಬೇಕು ಎಂದು ಹೇಳಿದರು.
ಅಪಘಾತ ಸಂಭವನೀಯ ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿ ಎಚ್ಚರಿಕೆ ಫಲಕ ಅಳವಡಿಸಬೇಕು. ಶಾಲಾ ಮಕ್ಕಳಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು. ಶಾಲಾ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಶಾಲೆಗಳಿಗೆ ಸೂಚಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ವ್ಯವಸ್ಥಾಪಕ ಶ್ರೀನಿವಾಸ್ ಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಗದೀಶ ಕೆ. ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.