ಕುಡಿದು ವಾಹನ ಓಡಿಸಿದ್ರೆ ಡಿಎಲ್‌ ರದ್ದು : ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Nirupama ks | Published : Sep 24, 2024 12:17 PM

ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೀಗಾಗಿ ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಹಾಗೂ ಅತಿ ವೇಗವಾಗಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದುಪಡಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. 

ವಿಧಾನಸೌಧ ಆವರಣದಲ್ಲಿ 65 ಅತ್ಯಾಧುನಿಕ ಜೀವ ರಕ್ಷಕ ಸೌಲಭ್ಯವುಳ್ಳ ಆ್ಯಂಬುಲೆನ್ಸ್‌ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅಪಘಾತಗಳಿಂದ ಉಂಟಾಗುವ ಸಾವು ತಡೆಯಲು ವಿವಿಧ ಕಾರ್ಯಕ್ರಮ ಹಾಕಿಕೊಂಡಿದೆ. 

ಇಂತಹ ಕಾರ್ಯಕ್ರಮಗಳಿಗೆ ಸಾರ್ವಜನಿಕರೂ ಸಹ ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಮೂಲಕ ಸಹಕರಿಸಬೇಕು. ವೇಗವಾಗಿ ವಾಹನ ಚಾಲನೆ.ಮದ್ಯಪಾನ ಸೇವಿಸಿ ವಾಹನ ಚಲಾಯಿಸುವವರ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸೂಚಿಸಿದರು.