ಮೆಟ್ರೋ ರೈಲಿನ ಬಾಗಿಲಲ್ಲಿ ಕಾಲಿಟ್ಟು ಅರ್ಧಗಂಟೆ ರೈಲು ತಡೆದ ಗುಂಪು

Published : Nov 18, 2025, 08:18 AM IST
Namma Metro

ಸಾರಾಂಶ

ನಗರದ ಆರ್‌.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ನಿಗದಿತ ಅವಧಿಗಿಂತ ಮೊದಲೇ ರೈಲು ಆರಂಭಿಸಲು ಒತ್ತಾಯಿಸಿ ಸುಮಾರು 15 ಜನರ ಗುಂಪು ರೈಲನ್ನು ತಡೆದು ಗಲಾಟೆ ಮಾಡಿದ್ದರಿಂದ ಹಳದಿ ಮೆಟ್ರೋ ಮಾರ್ಗದ ಸಂಚಾರ ಅರ್ಧ ಗಂಟೆ ವಿಳಂಬವಾದ ಘಟನೆ ಸೋಮವಾರ ನಡೆದಿದೆ.

 ಬೆಂಗಳೂರು :  ನಗರದ ಆರ್‌.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ನಿಗದಿತ ಅವಧಿಗಿಂತ ಮೊದಲೇ ರೈಲು ಆರಂಭಿಸಲು ಒತ್ತಾಯಿಸಿ ಸುಮಾರು 15 ಜನರ ಗುಂಪು ರೈಲನ್ನು ತಡೆದು ಗಲಾಟೆ ಮಾಡಿದ್ದರಿಂದ ಹಳದಿ ಮೆಟ್ರೋ ಮಾರ್ಗದ ಸಂಚಾರ ಅರ್ಧ ಗಂಟೆ ವಿಳಂಬವಾದ ಘಟನೆ ಸೋಮವಾರ ನಡೆದಿದೆ.

ರಾಷ್ಟ್ರೀಯ ವಿದ್ಯಾಲಯ ಹಳದಿ ಮೆಟ್ರೋ ನಿಲ್ದಾಣದಿಂದ ಬೆಳಗ್ಗೆ 6 ಗಂಟೆಗೆ ಹೊರಡಬೇಕಿದ್ದ ರೈಲು 6.35ಕ್ಕೆ ಹೊರಟಿತು. ಇದರಿಂದ ಹಳದಿ ಮಾರ್ಗದ ಉಳಿದ ಪ್ರಯಾಣಿಕರು ತೊಂದರೆಗೀಡಾದರು. ರೈಲು ತಡೆದ ಗುಂಪಿನ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ ಜಯನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

10-15 ಜನರ ಗುಂಪು ಹಳದಿ ಮಾರ್ಗದಲ್ಲಿ ರೈಲು ಬರದಿರುವುದಕ್ಕೆ ಆಕ್ರೋಶ

ಹಸಿರು ಮಾರ್ಗದ ಮೂಲಕ ಬಂದ ಪ್ರಯಾಣಿಕರು ಹಳದಿ ಮಾರ್ಗದ ಪಥ ಬದಲಾವಣೆಗಾಗಿ ಕಾಯುತ್ತಿದ್ದರು. ಈ ಪ್ರಯಾಣಿಕರ ಪೈಕಿ ಸುಮಾರು 10-15 ಜನರ ಗುಂಪು ಹಳದಿ ಮಾರ್ಗದಲ್ಲಿ ರೈಲು ಬರದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ನಿಗದಿತ 6 ಗಂಟೆಗೆ ಪ್ಲಾಟ್‌ಫಾರ್ಮ್‌ ನಂ. 3 ರಿಂದ ಬೊಮ್ಮಸಂದ್ರ ಕಡೆಗೆ ಹೊರಡಲು ರೈಲು 5.55ಕ್ಕೆ ಬಂದಿದೆ. ಆದರೆ, ಜನರ ಗುಂಪು ಮೆಟ್ರೋ ರೈಲು ಸಂಚರಿಸಲು ಬಿಡದೇ ಬಾಗಿಲಿನಲ್ಲಿ ಕಾಲಿಟ್ಟು ಅಡಚಣೆ ಮಾಡಿ ತಡೆದಿದ್ದಾರೆ.

ಟ್ರೈನ್‌ ಆಪರೇಟರ್ ಬಂದು ರೈಲು ಚಾಲನೆಗೆ ಅನುವು

ಈ ವೇಳೆ ಟ್ರೈನ್‌ ಆಪರೇಟರ್ ಬಂದು ರೈಲು ಚಾಲನೆಗೆ ಅನುವು ಮಾಡಿಕೊಡುವಂತೆ ಕೇಳಿದರೂ ರೈಲು ಬಾಗಿಲು ಮುಚ್ಚಲು ಬಿಟ್ಟಿಲ್ಲ. ಸ್ಟೇಷನ್ ನಿಯಂತ್ರಕರು, ಭದ್ರತಾ ಸಿಬ್ಬಂದಿ ಮನವೊಲಿಸಿದರೂ ಮಾತು ಕೇಳಿಲ್ಲ. ಅಂತಿಮವಾಗಿ ಸ್ಥಳಕ್ಕೆ ಪೊಲೀಸರು ಬಂದು ರೈಲಿನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಈ ನಡುವೆ ಬಿಎಂಆರ್‌ಸಿಎಲ್‌ ಪ್ರಯಾಣಿಕರ ಅನುಕೂಲಕ್ಕೆ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಶಾರ್ಟ್‌ಲೂಪ್‌ ರೈಲನ್ನು ಸಂಚರಿಸಿ ಪ್ರಯಾಣಿಕರಿಗೆ ಉಂಟಾಗುತ್ತಿದ್ದ ತೊಂದರೆ ನಿವಾರಿಸುವ ಪ್ರಯತ್ನ ಮಾಡಿದೆ. ಮೆಟ್ರೋ ರೈಲು ಕಾರ್ಯಾಚರಣೆ ತಡೆಯುವುದು 2002ರ ಮೆಟ್ರೋ ನಿಯಮಾವಳಿ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಸಜೆ-ದಂಡ ವಿಧಿಸಲು ಅವಕಾಶವಿದೆ. ಪ್ರಯಾಣಿಕರು ಇಂತದ್ದಕ್ಕೆ ಮುಂದಾಗಬಾರದು ಎಂದು ಎಚ್ಚರಿಕೆ ನೀಡಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕಾಸರಗೋಡು ಕನ್ನಡಿಗರ ಮೇಲೆ ನಾವು ಮಲಯಾಳಂ ಹೇರುತ್ತಿಲ್ಲ : ಕೇರಳ ಸಿಎಂ
2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ