ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 2 ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಸಾರಾಂಶ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಸುಳಿಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನದಲ್ಲಿ ಬೆಂಗಳೂರು, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ.

 ಮುಂದಿನ 24 ಗಂಟೆಯಲ್ಲಿ ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’, ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ ಕಳೆದ 24 ಗಂಟೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿ ಹೆಚ್ಚು 6 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಹುಣಸಗಿ, ಮುನಿರಾಬಾದ್‌ನಲ್ಲಿ ತಲಾ 5, ರಬಕವಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಲಾ 4, ಯಾದವಾಡ, ಮಹಾಲಿಂಗಪುರ, ಶಿವಮೊಗ್ಗ, ಕುಶಾಲನಗರದಲ್ಲಿ ತಲಾ 3, ಭಾಲ್ಕಿ, ಕವಡಿಮಟ್ಟಿ, ಬೀದರ್ ಸೇರಿದಂತೆ ವಿವಿಧ ಕಡೆ ತಲಾ 2 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share this article