ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕು : 3-4 ದಿನ ಭಾರಿ ಮಳೆ ಸಾಧ್ಯತೆ

Nirupama ks | Updated : Oct 20 2024, 12:00 PM IST

ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಲವು ಕಡೆ ಅ.22ರವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಅ.22ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. 

ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ ಕಳೆದ 24 ಗಂಟೆಯಲ್ಲಿ ನಾಯಕನಹಟ್ಟಿ ಹಾಗೂ ನಾಗಮಂಗಲದಲ್ಲಿ ಅತಿ ಹೆಚ್ಚು 7 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಬರಗೂರು, ನಾರಾಯಣಪುರ, ಕವಡಿಮಟ್ಟಿಯಲ್ಲಿ ತಲಾ 6, ಕಕ್ಕೇರಿ, ಹೆಸರಘಟ್ಟದಲ್ಲಿ ತಲಾ 5, ಬೆಳ್ಳೂರು 4, ಕುಣಿಗಲ್‌, ಕೆಂಭಾವಿಯಲ್ಲಿ ತಲಾ 3, ಚಿತ್ರದುರ್ಗ, ಬೇಲೂರು, ಕೃಷ್ಣರಾಜಪೇಟೆ ಸೇರಿದಂತೆ ಮೊದಲಾದ ಕಡೆ ತಲಾ 2 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.