;Resize=(412,232))
ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ನಗರದಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ಪ್ರಮುಖವಾಗಿ ಮುಂಬರುವ ಹಿರಿಯೂರು ಹಾಗೂ ಧಾರವಾಡ ಉಪ ಚುನಾವಣೆ ಹಾಗೂ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸೇರಿ ಇತರೆ ಚುನಾವಣೆಗಳು, ಬಿಜೆಪಿ-ಜೆಡಿಎಸ್ ಮೈತ್ರಿ ಗಟ್ಟಿಗೊಳಿಸುವುದು, ಉಭಯ ಪಕ್ಷಗಳ ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿ ರಚನೆ ಸೇರಿ ಹಲವು ವಿಚಾರಗಳ ಬಗ್ಗೆ ಮೈತ್ರಿ ನಾಯಕರು ಚರ್ಚೆ ನಡೆಸಿದ್ದಾರೆ.
ಧಾರವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಹಿರಿಯೂರು ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವಂತೆ ಕುಮಾರಸ್ವಾಮಿ ಅವರು ಬೇಡಿಕೆ ಇರಿಸಿದ್ದಾರೆ. ಇದಕ್ಕೆ ವಿಜಯೇಂದ್ರ ಅವರು ಈ ವಿಚಾರವನ್ನು ಪಕ್ಷದ ಹೈಕಮಾಂಡ್ ನಾಯಕರ ಗಮನಕ್ಕೆ ತರುತ್ತೇನೆ. ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಅಂತೆಯೇ ವಿಧಾನ ಪರಿಷತ್ತಿನ ಮೂರು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರದ ಚುನಾವಣೆ ಬಗ್ಗೆಯೂ ಇಬ್ಬರು ನಾಯಕರು ಚರ್ಚಿಸಿದ್ದಾರೆ. ಬಿಜೆಪಿ ಈಗಾಗಲೇ ಮೂರು ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡುವಂತೆ ವಿಜಯೇಂದ್ರ ಮನವಿ ಮಾಡಿದ್ದಾರೆ. ಉಳಿದ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತಷ್ಟು ಬಲಪಡಿಸುವ ಸಂಬಂಧ ಉಭಯ ನಾಯಕರು ಚರ್ಚಿಸಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಉಭಯ ಪಕ್ಷಗಳ ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸುವ ಕುರಿತು ಇಬ್ಬರು ನಾಯಕರು ಚರ್ಚಿಸಿದ್ದಾರೆ. ಶೀಘ್ರದಲ್ಲೇ ಈ ಸಮನ್ವಯ ಸಮಿತಿ ರಚಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.