;Resize=(412,232))
ಬೆಂಗಳೂರು : ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಸದೃಢವಾಗಿರುವ ಭಾರತದ ಆರ್ಥಿಕತೆ ಏರುಗತಿಯಲ್ಲಿದೆ. ಬಂಡವಾಳ ಹೂಡಿಕೆಗೆ ಅತ್ಯುತ್ತಮ ವಾತಾವರಣವಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯುತ್ತಿರುವ ಅಕ್ಕ ರಜತ ಸಮ್ಮೇಳನ ಪ್ರಯುಕ್ತ ಆಯೋಜಿಸಿದ್ದ ‘ಬಿಸಿನೆಸ್ ಫೋರಂ-2026’ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತವು ಉದ್ಯಮಶೀಲತೆ, ತಂತ್ರಜ್ಞಾನ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿ ನಾಗಾಲೋಟದಲ್ಲಿ ಮುಂದುವರೆದಿದೆ ಎಂದರು.
ಭಾರತ ಸರ್ಕಾರವು ಉದ್ಯಮಿಗಳು ಹಾಗೂ ಯುವಜನರಿಗೆ ಹಲವು ರೀತಿಯ ಸವಲತ್ತುಗಳು ಮತ್ತು ಅವಕಾಶಗಳನ್ನು ಒದಗಿಸುತ್ತಿದೆ. ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸೇರಿ ಭಾರತೀಯರು ಈ ಸೌಲಭ್ಯಗಳ ಸದುಪಯೋಗ ಪಡೆದು ಭಾರತದಲ್ಲಿ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು ಎಂದು ಕರೆ ನೀಡಿದರು.
ನಿಮ್ಮ ತಾಂತ್ರಿಕ ಜ್ಞಾನ ಮತ್ತು ಅನುಭವವನ್ನು ಭಾರತದಲ್ಲಿ ಉದ್ಯಮ ಕಟ್ಟಲು ಬಳಸಿಕೊಳ್ಳಿ. ಕೇವಲ ಉದ್ಯೋಗ ಹುಡುಕುವ ಬದಲು ಉದ್ಯೋಗ ನೀಡುವ ಉದ್ಯಮಿಗಳಾಗಿ. ನಿಮ್ಮ ಅನುಭವ ಮತ್ತು ಪರಿಣತಿಯನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳುವ ಮೂಲಕ ಹೊಸ ಅವಕಾಶಗಳನ್ನು ಸೃಷ್ಟಿಸಬೇಕು. ವಿಶೇಷವಾಗಿ ಅಮೆರಿಕ ಸೇರಿ ವಿದೇಶಗಳಲ್ಲಿ ತಂತ್ರಜ್ಞಾನ, ಕೈಗಾರಿಕೆ, ಉದ್ಯಮ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯರು ತಮ್ಮ ಜ್ಞಾನ ಮತ್ತು ಅನುಭವ ಭಾರತದೊಂದಿಗೆ ಹಂಚಿಕೊಳ್ಳುವ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಬಹುದು ಎಂದು ಕುಮಾರಸ್ವಾಮಿ ಹೇಳಿದರು.
ಬದಲಾಗುತ್ತಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಹೊಸ ಉದ್ಯಮಗಳು, ನವೀನ ಆಲೋಚನೆಗಳು ಹಾಗೂ ತಂತ್ರಜ್ಞಾನ ಆಧಾರಿತ ವ್ಯವಹಾರಗಳಿಗೆ ಹೆಚ್ಚಿನ ಅವಕಾಶಗಳಿವೆ. ಇಂಥ ಅವಕಾಶಗಳನ್ನು ಗುರುತಿಸಿ ಯುವ ಉದ್ಯಮಿಗಳು ಮುನ್ನಡೆಯಬೇಕು ಎಂದು ಸಚಿವರು ಸಲಹೆ ನೀಡಿದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಅಕ್ಕ ಕೂಟದ ಪ್ರಮುಖರಾದ ಅಮರನಾಥ ಗೌಡ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಅಕ್ಕ ಅಧ್ಯಕ್ಷ ಮಧು ರಂಗಯ್ಯ, ಅಮೆರಿಕದಲ್ಲಿರುವ ಭಾರತದ ಡೆಪ್ಯುಟಿ ಕಾನ್ಸುಲೇಟ್ ಜನರಲ್ ವಿಶಾಲ್ ಹರ್ಷ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.