;Resize=(412,232))
ಬೆಂಗಳೂರು: ದೇಶದ ಅಭಿವೃದ್ಧಿಗೆ ಯುವಜನರ ಶಕ್ತಿಯೇ ಪ್ರಮುಖ ಆಧಾರವಾಗಿದೆ. ಆದ್ದರಿಂದ ಯುವಜನರನ್ನು ಆರೋಗ್ಯವಂತರಾಗಿ, ಜಾಗೃತರಾಗಿ ಹಾಗೂ ಮಾದಕ ವ್ಯಸನದಿಂದ ಮುಕ್ತರಾಗಿ ಬೆಳೆಸುವುದು ಸಮಾಜದ ಎಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಹೇಳಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಮಾದಕ ದ್ರವ್ಯ ಮುಕ್ತ ಭಾರತ ಸಂಕಲ್ಪವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ನಾಗರಿಕರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕುಟುಂಬ ಹಾಗೂ ಸಮಾಜದಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಆರೋಗ್ಯಕರ ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
1996ರಲ್ಲಿ ಸ್ಥಾಪಿತವಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಇಂದು ದೇಶದ ಅತಿದೊಡ್ಡ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿ ಬೆಳೆದಿದೆ. ಸುಮಾರು 1,450ಕ್ಕೂ ಹೆಚ್ಚು ಕಾಲೇಜುಗಳನ್ನು ಸಂಯೋಜಿಸಿಕೊಂಡಿದೆ. ಇದುವರೆಗೆ 8 ಲಕ್ಷಕ್ಕೂ ಹೆಚ್ಚು ಆರೋಗ್ಯ ವೃತ್ತಿಪರರನ್ನು ದೇಶಕ್ಕೆ ನೀಡಿದೆ. ಕಳೆದ ಮೂರು ದಶಕಗಳಲ್ಲಿ ಆರೋಗ್ಯ ಶಿಕ್ಷಣ, ಸಂಶೋಧನೆ, ನಾವೀನ್ಯತೆ ಹಾಗೂ ಸಾರ್ವಜನಿಕ ಆರೋಗ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ವಿವಿಯು, ಕರ್ನಾಟಕ ಹಾಗೂ ದೇಶದ ಆರೋಗ್ಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಆಶಯಗಳಿಗೆ ಅನುಗುಣವಾಗಿ ವಿಶ್ವವಿದ್ಯಾಲಯವು ಬಹುಶಿಸ್ತೀಯ ಶಿಕ್ಷಣ, ಭಾರತೀಯ ಜ್ಞಾನ ಪರಂಪರೆ, ಸಂಶೋಧನೆ, ಡಿಜಿಟಲ್ ಶಿಕ್ಷಣ, ಕೃತಕ ಬುದ್ಧಿಮತ್ತೆಯ ಬಳಕೆ, ಕೌಶಲ್ಯಾಭಿವೃದ್ಧಿ, ನಾವೀನ್ಯತೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿರುವುದು ಶ್ಲಾಘನೀಯ. ಈ ವರ್ಷದ ಸಂಸ್ಥಾಪನಾ ದಿನವನ್ನು ಮಾದಕ ರಹಿತ ಭಾರತ ಸಮ್ಮೇಳನ ಹಾಗೂ ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯೊಂದಿಗೆ ಸಂಯೋಜಿಸಿ ಆಚರಿಸಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಪಿ.ಸಿ.ರಾಧಾಕೃಷ್ಣನ್, ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ, ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.