ರಾಜ್ಯ ಸರ್ಕಾರಿ ನೇಮಕಾತಿ ವಯೋಮಿತಿ 5 ವರ್ಷಗಳ ಕಾಲ ಸಡಿಲ?

Published : Jan 22, 2026, 05:16 AM IST
Karnataka govt

ಸಾರಾಂಶ

ರಾಜ್ಯದ ಎಲ್ಲಾ ರೀತಿಯ ಸಿವಿಲ್‌ ಹುದ್ದೆಗಳಿಗೆ 2027ರ ಡಿ.31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲು ಸರ್ಕಾರ ತೀರ್ಮಾನಿಸಿದ್ದು,  ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

  ಬೆಂಗಳೂರು :  ರಾಜ್ಯದ ಎಲ್ಲಾ ರೀತಿಯ ಸಿವಿಲ್‌ ಹುದ್ದೆಗಳಿಗೆ 2027ರ ಡಿ.31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಒಳ ಮೀಸಲಾತಿ ವಿವಾದ ಮತ್ತಿತರ ಕಾರಣಗಳಿಂದ ಕಳೆದ ಎರಡು ವರ್ಷಗಳಿಂದ ನೇಮಕಾತಿ ವಿಳಂಬ ಆಗಿದೆ. ಈ ಹಿನ್ನೆಲೆಯಲ್ಲಿ ಹೋರಾಟಕ್ಕಿಳಿದಿರುವ ಉದ್ಯೋಗಾಕಾಂಕ್ಷಿಗಳು ವಯೋಮಿತಿಯನ್ನು 5 ವರ್ಷ ಸಡಿಲಿಕೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಸೆಪ್ಟೆಂಬರ್‌ನಲ್ಲಿ ಎಸ್ಸಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಸೆ.6ರಂದು ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಮಾಡಿತ್ತು. ಇದರ ಬಗ್ಗೆಯೂ ವಿರೋಧ ಮುಂದುವರೆದ ಹಿನ್ನೆಲೆಯಲ್ಲಿ ಸೆ.29 ರಂದು ಪರಿಷ್ಕೃತ ಆದೇಶ ಹೊರಡಿಸಿದ್ದ ಸರ್ಕಾರ 2025 ರಿಂದ ಡಿಸೆಂಬರ್ 27, 2027 ರವರೆಗಿನ ಅಧಿಸೂಚನೆಗಳಿಗೆ ಅನ್ವಯಿಸುವಂತೆ ಮೂರು ವರ್ಷ ವಯೋಮಿತಿ ಸಡಿಲಿಸಿತ್ತು.

ಆದರೆ, ಎಸ್ಸಿ ಒಳ ಮೀಸಲಾತಿ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.50ಕ್ಕೆ ಸೀಮಿತಗೊಳಿಸಬೇಕೇ ಅಥವಾ ಶೇ.56 ಮೀಸಲಾತಿ ನೀಡಬಹುದೇ ಎಂಬುದು ಸಹ ನ್ಯಾಯಾಲಯದಲ್ಲಿ ಇತ್ಯರ್ಥವಾಗಿಲ್ಲ.

ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತಿದ್ದು, ಸಾವಿರಾರು ಮಂದಿ ವಯೋಮಿತಿ ಕಾರಣಕ್ಕಾಗಿಯೇ ಉದ್ಯೋಗಕ್ಕೆ ಅರ್ಹತೆ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿವಿಲ್‌ ಸೇವೆಗಳಿಗೆ ನೇರ ನೇಮಕಾತಿಗೆ ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಐದು ವರ್ಷಗಳವರೆಗೆ ಸಡಿಲಿಕೆ ಮಾಡಲು ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸುವ ಸಾಧ್ಯತೆಯಿದೆ.

ಲಕ್ಷಾಂತರ ಅಭ್ಯರ್ಥಿಗಳಿಗೆ ಹೊಸ ಅವಕಾಶ:

ಸಚಿವ ಸಂಪುಟ ಸಭೆಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿದರೆ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ವರ್ಗಗಳ ಲಕ್ಷಾಂತರ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲಿದೆ. ಈ ನಿರ್ಧಾರದಿಂದಾಗಿ, ವಯಸ್ಸಿನ ಕಾರಣದಿಂದ ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿಯುವ ಆತಂಕದಲ್ಲಿದ್ದ ಲಕ್ಷಾಂತರ ಅಭ್ಯರ್ಥಿಗಳು ನಿರಾಳರಾಗಲಿದ್ದಾರೆ ಎಂದು ತಿಳಿದುಬಂದಿದೆ.

22 ದಲಿತ, ಹಿಂದುಳಿದ ಮಠಗಳಿಗೆ ಜಮೀನು?

ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾವುತ್ತನಹಳ್ಳಿಯಲ್ಲಿ 22 ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಜಮೀನು ನೀಡುವ ಕುರಿತು ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ತೀರ್ಮಾನವಾಗುವ ಸಾಧ್ಯತೆಯಿದೆ. ಕಳೆದ ಸಂಪುಟ ಸಭೆಯಲ್ಲಿ ರಾವುತ್ತನಹಳ್ಳಿಯ ಸ.57 ಮತ್ತು 58ರಲ್ಲಿನ ಜಮೀನನ್ನು ದಲಿತ ಹಾಗೂ ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡುವ ಬಗ್ಗೆ ಚರ್ಚೆ ನಡೆಸಲಾಗಿತ್ತು. ಆದರೆ, ಜಮೀನು ವಿಚಾರದಲ್ಲಿ ಕೆಲ ಮಾಹಿತಿ ಇಲ್ಲದ ಕಾರಣದಿಂದ ಮುಂದೂಡಲಾಗಿತ್ತು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬಿಜೆಪಿ- ದಳ ಶಾಸಕರಿಗೆ ಇಂದು ಚೌಹಾಣ್‌ ಜಿ ರಾಮ್‌ ಜಿ ಪಾಠ!
ಬೆಂಗಳೂರಿನಲ್ಲಿ ಹೂಡಿಕೆ ಮಾಡಿ - ವಿಶ್ವ ಉದ್ಯಮಿಗಳಿಗೆ ಉಪಮುಖ್ಯಮಂತ್ರಿ ಆಹ್ವಾನ