ಬೆಂಗಳೂರು : ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ, ಕಸ ವಿಲೇವಾರಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಇದೀಗ ಸ್ವಂತ ಖರ್ಚಿನಲ್ಲಿ 13 ರಿಂದ 15 ರಸ್ತೆಗಳ ದುರಸ್ತಿ ಮತ್ತು ನಿರ್ವಹಣೆ ಕುರಿತು ಸರ್ಕಾರದ ಮಂದೆ ಪ್ರಸ್ತಾಪ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ಕಿರಣ್ ಮಜುಂದಾರ್ ಶಾ ಅವರು ತಮ್ಮ ಸಂಸ್ಥೆಯ ಕಚೇರಿ ಇರುವ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಗ್ರಾಪಂ ವ್ಯಾಪ್ತಿಯ ಸುಮಾರು 13 ರಿಂದ 15 ರಸ್ತೆಗಳನ್ನು ಸ್ವಂತ ಖರ್ಚಲ್ಲಿ ದುರಸ್ತಿ ಹಾಗೂ ನಿರ್ವಹಣೆಗೆ ಮುಂದಾಗಿದ್ದಾರೆ.
ಈ ಬಗ್ಗೆ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರು, ರಾಜ್ಯ ಸರ್ಕಾರದ ವಿವಿಧ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದು, ಅಧಿಕಾರಿಗಳು ರಸ್ತೆಗಳ ಅಭಿವೃದ್ಧಿಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಬಯೋಕಾನ್ ಸಂಸ್ಥೆ ಅಧಿಕಾರಿಗಳ ನಡುವೆ ಪ್ರಾಥಮಿಕ ಹಂತದ ಮಾತುಕತೆಯಷ್ಟೇ ನಡೆದಿದ್ದು, ಯಾವ್ಯಾವ ರಸ್ತೆಗಳ ದುರಸ್ತಿಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಚರ್ಚೆ ಮಾತ್ರ ನಡೆದಿದೆ. ಇನ್ನೂ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ಮೂಲಗಳು ಹೇಳಿವೆ.