ಬೆಂಗಳೂರು : ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಜು. 26, 27ರಂದು ಕುಂದಾಪ್ರ ಕನ್ನಡ ಹಬ್ಬ-2025 ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ನ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆಯಲಿದೆ.
ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ.ದೀಪಕ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಈ ಬಾರಿ ಐದು ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸಂಭ್ರಮದಲ್ಲಿ ದಿನವಿಡೀ ಕಾರ್ಯಕ್ರಮ ನಡೆಯಲಿದೆ. ಎರಡು ದಿನ ಕುಂದಾಪುರ ಮೂಲದ ಒಬ್ಬೊಬ್ಬರು ಗಣ್ಯ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ವೇದಿಕೆಯಲ್ಲಿನ ವಿವಿಧ ಕಾರ್ಯಕ್ರಮಗಳ ಜೊತೆ ಹೊರಾಂಗಣದಲ್ಲಿ ಹುಲಿವೇಷ, ಕೊರಗರ ಡೋಲು ವಾದನ, ಬಿಳಿ ಪಟಾಕಿ, ನವರಾತ್ರಿ ವೇಷ, ಹಗ್ಗಜಗ್ಗಾಟ ಮತ್ತು ವಿವಿಧ ಕ್ರೀಡೆಗಳಲ್ಲದೆ, ಕುಂದಾಪುರದ ಬಹುತೇಕ ಎಲ್ಲ ವಸ್ತುಗಳು ಸಿಗುವ ಕುಂದಾಪ್ರ ಸಂತೆ ಕೂಡ ಇರಲಿದೆ.
ಸಾವ್ರ್ ಹಣ್ಣಿನ್ ವಸಂತ, ಹೌದರಾಯನ ವಾಲ್ಗ, ಕುಂದಾಪ್ರದಡುಗೆ, ಉಪ್ಪಿನ್ಹೊಡಿ ಟು ಮದಿಮನಿ ಊಟ, ಮೂಕಜ್ಜಿಯ ಕನಸುಗಳು: ಬೂಕ್ ತಕಣಿ ಬೂಕ್, ಸ್ವರ ಕುಂದಾಪ್ರ: ನಮ್ ಊರ್ಮನಿ ಮಕ್ಳ್ ಹಾಡುಹಸೆ, ಪಟ್ಟಾಂಗ: ಮಾತಿನ ಚಾವಡಿ, ಬಾರ್ಕೂರಿನ್ ಹಡ್ಗ್: ನೃತ್ಯ ನಾಟಕ (ಪ್ರಥಮ ಪ್ರದರ್ಶನ), ಉದ್ಘಾಟನಾ ಪರ್ವ, ಸಮಾಪನ ಸಮಾರಂಭ: ಊರ ಗೌರವ (ಕುಂದಾಪುರ ಮೂಲದ ಇಬ್ಬರು ಅತಿಗಣ್ಯ ಸಾಧಕರಿಗೆ ಸನ್ಮಾನ) ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ವರ್ಷದ ಬೃಹತ್ ಆಕರ್ಷಣೆಯಾಗಿ ‘ಅಟ್ಟಣ್ಗಿ ಆಟ’: ಎರಡು ರಂಗಸ್ಥಳದ ಯಕ್ಷಗಾನ ನಡೆಯಲಿದೆ. ಸಾಹಿತಿ ವೈದೇಹಿ ಉದ್ಘಾಟನೆಗೆ ಮುಖ್ಯ ಅತಿಥಿಯಾಗಲಿದ್ದಾರೆ ಎಂದು ತಿಳಿಸಿದರು.