ಮಂಗ್ಳೂರು ಕುಕ್ಕರ್‌ ಬಾಂಬ್‌ : ಆರೋಪಿ ಖಾತೆಯಲ್ಲಿದ್ದ ₹29000 ಹಣ ಜಪ್ತಿ

Published : Aug 07, 2025, 11:37 AM ISTUpdated : Aug 07, 2025, 11:38 AM IST
Cooker Bomb Blast

ಸಾರಾಂಶ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಯಾಸಿನ್‌ ಖಾತೆಯಲ್ಲಿದ್ದ 29 ಸಾವಿರ ರು. ಹಣವನ್ನು ಜಾರಿ ನಿರ್ದೇಶನಾಲಯ(ಇ.ಡಿ.)ವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ.

ಬೆಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಯಾಸಿನ್‌ ಖಾತೆಯಲ್ಲಿದ್ದ 29 ಸಾವಿರ ರು. ಹಣವನ್ನು ಜಾರಿ ನಿರ್ದೇಶನಾಲಯ(ಇ.ಡಿ.)ವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ. ಮಂಗಳೂರು ಕಂಕನಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2022ರ ನ.19ರಂದು ಸಂಜೆ ಸುಮಾರು 4.40ಕ್ಕೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸ್ಫೋಟ ಸಂಭವಿಸಿತ್ತು.

ಈ ಸಂಬಂಧ ಆಟೋ ಚಾಲಕ ಕೆ.ಪುರುಷೋತ್ತಮ ನೀಡಿದ ದೂರಿನ ಮೇರೆಗೆ ಕಂಕನಾಡಿ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಸ್ಫೋಟದ ಹಿಂದೆ ಉಗ್ರ ಸಂಘಟನೆ ಕೈವಾಡ ಕಂಡು ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀತ ತನಿಖಾ ಸಂಸ್ಥೆ(ಎನ್‌ಐಎ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಶಂಕೆ ಹಿನ್ನೆಲೆಯಲ್ಲಿ ಇ.ಡಿ. ಸಹ ಪಿಎಂಎಲ್ಎ ಕಾಯ್ದೆಯಡಿ ಇಸಿಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದೆ.

ಪ್ರಕರಣದ ತನಿಖೆ ವೇಳೆ ಈ ಆಟೋ ರಿಕ್ಷಾ ಬಾಂಬ್‌ ಸ್ಫೋಟವು ಐಸಿಸ್‌(ಐಎಸ್‌ಐಎಸ್‌) ಭಯೋತ್ಪಾದನಾ ಸಂಘಟನೆ ಭಾರತದ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಬೆದರಿಕೆ ಹಾಕುವ, ದೇಶದಲ್ಲಿ ಭಯೋತ್ಪಾದನೆ ಹರಡುವ ಯೋಜನೆಯ ಭಾಗವಾಗಿದ್ದ ವಿಚಾರ ಬಹಿರಂಗವಾಗಿತ್ತು.

ಐಸಿಸ್‌ ಆನ್‌ಲೈನ್‌ ಹ್ಯಾಂಡ್ಲರ್‌ ‘ಕರ್ನಲ್’ ಎಂಬಾತ ಪ್ರಮುಖ ಆರೋಪಿ ಮೊಹಮ್ಮದ್‌ ಶಾರೀಕ್‌ ಅಲಿಯಾಸ್‌ ಪ್ರೇಮ್ ರಾಜ್‌ ಮತ್ತು ಇತರೆ ಆರೋಪಿಗಳಿಗೆ ವಿಕರ್‌ ಆ್ಯಪ್‌/ಟೆಲಿಗ್ರಾಮ್ ಇತ್ಯಾದಿ ಆ್ಯಪ್‌ಗಳ ಮೂಲಕ ಸುಧಾರಿತ ಸ್ಫೋಟಕ ಸಾಧನ(ಐಇಡಿ) ತಯಾರಿಸಲು ತರಬೇತಿ ನೀಡಿರುವುದು ಮತ್ತು ಆರೋಪಿಗಳಿಗೆ ಅನಧಿಕೃತ ಬ್ಯಾಂಕ್‌ ಖಾತೆ ಮತ್ತು ಕ್ರಿಪ್ಟೋ ಕರೆನ್ಸಿಗಳ ಮುಖಾಂತರ ಹಣಕಾಸು ನೆರವು ನೀಡಿರುವುದು ಬೆಳಕಿಗೆ ಬಂದಿತ್ತು.

ಕಮಿಷನ್‌ ನೀಡಿ ನಗದು ಸ್ವೀಕಾರ:

ಈ ಹಣವನ್ನು ಪ್ರಮುಖ ಆರೋಪಿಗಳಾದ ಸೈಯದ್‌ ಯಾಸಿನ್‌ ಮತ್ತು ಮೊಹಮ್ಮದ್‌ ಶಾರೀಕ್‌ ಪಾಯಿಂಟ್‌ ಆಫ್‌ ಸೇಲ್‌(ಪಿಒಎಸ್‌) ಏಜೆಂಟ್‌ಗಳಿಗೆ ಕಮಿಷನ್‌ ನೀಡಿ ನಗದು ರೂಪದಲ್ಲಿ ಹಣ ಪಡೆಯುತ್ತಿದ್ದರು. ಈ ರೀತಿ ಆರೋಪಿಗಳಿಗೆ ಸುಮಾರು 2.86 ಲಕ್ಷ ರು. ಹಣ ರವಾನೆಯಾಗಿತ್ತು. ಈ ಹಣವನ್ನು ಆರೋಪಿಗಳು ಐಇಡಿ ಬಾಂಬ್‌ ತಯಾರಿಸಲು ಆನ್‌ಲೈನ್‌ನಲ್ಲಿ ವಸ್ತುಗಳ ಖರೀದಿ, ಮೈಸೂರು ನಗರ ಮತ್ತು ಇತರೆ ಸ್ಥಳಗಳಲ್ಲಿ ಮನೆ ಬಾಡಿಗೆ ಪಡೆಯಲು ಹಾಗೂ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸುವ ಸಂಬಂಧ ಸಮೀಕ್ಷೆಗೆ ಬಳಸಿಕೊಂಡಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಕದ್ರಿ ದೇವಸ್ಥಾನ ಸ್ಫೋಟಿಸಲು ಸಂಚು:

ಪ್ರಮುಖ ಆರೋಪಿ ಮೊಹಮ್ಮದ್‌ ಶಾರೀಕ್‌ ಈ ಬಾಂಬ್‌ ಅನ್ನು ಕದ್ರಿ ಮಂಜುನಾಥಸ್ವಾಮಿ ದೇವಾಲಯದಲ್ಲಿ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್‌ ಟೈಮರ್‌ ಅನ್ನು 90 ನಿಮಿಷಗಳ ಬದಲು 9 ಸೆಕೆಂಡ್‌ಗೆ ನಿಗದಿ ಮಾಡಿದ್ದ ಪರಿಣಾಮ ಅದು ಮಾರ್ಗ ಮಧ್ಯೆ ಆಟೋರಿಕ್ಷಾದೊಳಗೆ ಸ್ಫೋಟವಾಗಿತ್ತು. ಐಸಿಸ್‌ ಆನ್‌ಲೈನ್‌ ಹ್ಯಾಂಡ್ಲರ್‌ ಕರ್ನಲ್‌ ಕಳುಹಿಸುತ್ತಿದ್ದ ಹಣವನ್ನು ಆರೋಪಿ ಮೊಹಮ್ಮದ್‌ ಶಾರೀಕ್‌ ಸ್ವೀಕರಿಸಲು ಮತ್ತೊಬ್ಬ ಆರೋಪಿ ಮಾಜ್‌ ಮುನೀರ್‌ ಈ ಅನಧಿಕೃತ ಬ್ಯಾಂಕ್‌ ಖಾತೆಗಳ ಮಾಹಿತಿ ನೀಡುತ್ತಿದ್ದ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆಟೋರಿಕ್ಷಾದಲ್ಲಿ ಬಾಂಬ್‌ ಸ್ಫೋಟ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆರೋಪಿ ಮೊಹಮ್ಮದ್‌ ಶಾರೀಕ್‌ನ ಬ್ಯಾಗ್‌ನಲ್ಲಿ ಪತ್ತೆಯಾಗಿದ್ದ 39 ಸಾವಿರ ರು. ಅನ್ನು ಎನ್‌ಐಎ ಜಪ್ತಿ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಯಾಸಿನ್‌ನ ಖಾತೆಯಲ್ಲಿದ್ದ 29 ಸಾವಿರ ರು. ಅನ್ನು ಇ.ಡಿ. ಜಪ್ತಿ ಮಾಡಿದೆ. ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿಗಳಾದ ಮೊಹಮ್ಮದ್‌ ಶಾರೀಕ್‌, ಸೈಯದ್‌ ಯಾಸಿನ್‌, ಮಾಜ್‌ ಮುನೀರ್‌ ನ್ಯಾಯಾಂಗ ಬಂಧನದಲ್ಲಿದ್ದು, ತನಿಖೆ ಮುಂದುವರೆದಿದೆ ಎಂದು ಇ.ಡಿ. ತಿಳಿಸಿದೆ. 

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

₹1000+ ಕೋಟಿ ಸೈಬರ್‌ ವಂಚನೆ : ಸ್ವಾಮೀಜಿ.ಕಾಂ, ನಿಯೋ ಸಿಸ್ಟಮ್‌ ಹೆಸರಲ್ಲಿ ಜಾಲ ಪತ್ತೆ
ತುರ್ತು ಸಂಪುಟ ಸಭೆ ತೀರ್ಮಾನ : ಜಿ ರಾಮ್‌ ಜಿ ವಿರುದ್ಧ 22ರಿಂದ ಸಮರಾಧಿವೇಶನ