ಬೆಂಗಳೂರು : ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿದು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ಕುಸಿತ ಪಾವತಿ ಯೋಜನೆ (ಪಿಡಿಪಿಎಸ್) ಅನುಷ್ಠಾನ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಶುಕ್ರವಾರ ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಮಾವು 1.39 ಲಕ್ಷ ಹೆಕ್ಟೇರ್ನಲ್ಲಿ ಬೆಳೆಯಲಾಗುತ್ತಿದ್ದು 8 ರಿಂದ 10 ಲಕ್ಷ ಮೆಟ್ರಿಕ್ ಟನ್ ಮಾವು ಉತ್ಪಾದಿಸಲಾಗುತ್ತಿದೆ. ಮೇ ಮತ್ತು ಜೂನ್ ಅವಧಿಯಲ್ಲಿ ಮಾವು ಕೊಯ್ಲು ಹೆಚ್ಚಿರುತ್ತದೆ.
ಮಾವಿನಹಣ್ಣಿನ ಬೆಲೆ ಹಂಗಾಮಿನ ಆರಂಭದಲ್ಲಿ ಕ್ವಿಂಟಲ್ಗೆ 12 ಸಾವಿರ ರು.ಇತ್ತು. ಆದರೆ, ಈಗ ಕ್ವಿಂಟಲ್ ಮಾವು 3 ಸಾವಿರ ರು.ಗಳಿಗೆ ಕುಸಿದಿದೆ. ರಾಜ್ಯ ಕೃಷಿ ಬೆಲೆ ಆಯೋಗದ ವರದಿಯಂತೆ ಪ್ರತಿ ಕ್ವಿಂಟಲ್ ಮಾವಿನ ಉತ್ಪಾದನೆ ವೆಚ್ಚ 5,466 ರು.ಆಗಿದೆ. ದಿಢೀರ್ ಬೆಲೆ ಕುಸಿತದಿಂದ ಮಾವು ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಮಾವು ಉತ್ಪಾದನೆ 8 ರಿಂದ 10 ಲಕ್ಷ ಮೆಟ್ರಿಕ್ ಟನ್ ಆಗಿದೆ. ಮಾವು ಬೆಳೆಗಾರರು ಬಹುಪಾಲು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದಾರೆ. ಬೆಲೆ ಕುಸಿತದಿಂದಾಗಿ ಈ ರೈತ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಹಾಗಾಗಿ ಕೂಡಲೇ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯ ಪಿಡಿಪಿಎಸ್ ಸ್ಕೀಂನಡಿ ಮಾವು ಖರೀದಿ ಆರಂಭಿಸಲು ನಾಫೆಡ್ ಮತ್ತು ಎನ್ಸಿಸಿಎಫ್ಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.